ಬಂಟ್ವಾಳ: ಇಲ್ಲಿನ ಮಣಿಹಳ್ಳದಲ್ಲಿ ಮಂಗಳವಾರ ಟಿಪ್ಪರ್ ಲಾರಿ ಮತ್ತು ಸರಕಾರಿ ಬಸ್ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಗಂಭೀರ ಗಾಯಗೊಂಡು ಒದ್ದಾಡುತ್ತಿದ್ದ ಎರಡೂ ವಾಹನಗಳ ಚಾಲಕರನ್ನು ಸುರಿಯುತ್ತಿದ್ದ ಮಳೆಯನ್ನೂ ಲೆಕ್ಕಿಸದೆ ಹೊರ ತೆಗೆದು ಆಸ್ಪತ್ರೆಗೆ ದಾಖಲಿಸುವ ಮೂಲಕ ಸಾರ್ವತ್ರಿಕ ಪ್ರಶಂಸೆಗೆ ಪಾತ್ರರಾದ ಬಂಟ್ವಾಳ ಉವಿಭಾಗದ ಡಿವೈಎಸ್ಪಿ ರವೀಶ್ ಸಿ.ಆರ್. ಅವರ ಜೀಪ್ ಚಾಲಕ ಸತ್ಯಪ್ರಕಾಶ್ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಜಿ. ಬೊರಸೆ ಗೌರವ ಪತ್ರ ನೀಡಿ ಅಭಿನಂದಿಸಿದರು.
ಮಂಗಳವಾರ ಸಂಜೆ ಮಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಸರಕಾರಿ ಬಸ್ ಮತ್ತು ಬಿ.ಸಿ.ರೋಡ್ ಕಡೆಗೆ ಸಂಚರಿಸುತ್ತಿದ್ದ ಟಿಪ್ಪರ್ ಲಾರಿ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿತ್ತು.
ಈ ಸಮಯದಲ್ಲಿ ಬಂಟ್ವಾಳಾದ್ಯಂತ ಭಾರೀ ಮಳೆ ಸುರಿಯುತ್ತಿತ್ತು. ಅಪಘಾತದಿಂದ ಗಂಭೀರ ಗಾಯಗೊಂಡು ನಜ್ಜುಗುಜ್ಜಾಗಿದ್ದ ಎರಡೂ ವಾಹನದಲ್ಲಿ ಸಿಲುಕಿ ಒದ್ದಾಡುತ್ತಿದ್ದ ಚಾಲಕರನ್ನು ಸುರಿಯುತ್ತಿದ್ದ ಮಳೆಯನ್ನು ಲೆಕ್ಕಿಸದೆ ಹೊರ ತೆಗೆದು ಡಿವೈಎಸ್ಪಿಯವರ ಜೀಪಿನಲ್ಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆಯಿಂದ ಬಸ್ ನಲ್ಲಿದ್ದ 8 ಮಂದಿ ಗಾಯಗೊಂಡಿದ್ದರು. ಅವರಲ್ಲಿ ವ್ರದ್ಧೆ ಮತ್ತು ಮಗುವೊಂದು ತೀವ್ರ ಸ್ವರೂಪದ ಗಾಯಗೊಂಡಿದ್ದರು.
ಗಂಭೀರವಾಗಿ ಗಾಯಗೊಂಡ ಚಾಲಕರನ್ನು ಹಾಗೂ ವ್ರದ್ಧೆ ಮತ್ತು ಮಗುವನ್ನು ಡಿವೈಎಸ್ಪಿ ರವೀಶ್ ಸಿ.ಆರ್. ಅವರು ತನ್ನ ಜೀಪಿನಲ್ಲಿ ಹಾಕಿಕೊಂಡು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಗಾಯಾಳುಗಳು ಚೇತರಿಸಿಕೊಂಡಿದ್ದಾರೆ.
ಅಪಘಾತದ ಸ್ಥಳದಲ್ಲಿ ಡಿವೈಎಸ್ಪಿ ರವೀಶ್ ಹಾಗೂ ಅವರ ಜೀಪ್ ಚಾಲಕ ಸತ್ಯಪ್ರಕಾಶ್ ಅವರ ಈ ಸೇವೆಯ ಫೋಟೊಗಳು ವಾಟ್ಸ್ ಆ್ಯಪ್ ಮೂಲಕ ಹರಿದಾಡಿ ಸಾರ್ವತ್ರಿಕ ಪ್ರಶಂಸೆಗೆ ಪಾತ್ರವಾಗಿತ್ತು.
ಈ ಹಿನ್ನೆಲೆಯಲ್ಲಿ ಬುಧವಾರ ಜಿಲ್ಲಾ ಎಸ್ಪಿ ಭೂಷಣ್ ಜಿ. ಬೊರಸೆ ಅವರು ತನ್ನ ಕಚೇರಿಯಲ್ಲಿ ಜೀಪ್ ಚಾಲಕ ಸತ್ಯಪ್ರಕಾಶ್ ಗೆ ಗೌರವ ಪ್ರಮಾಣ ಪತ್ರ ನೀಡಿ ಗೌರವಿಸಿದರು. ಈ ಸಂದರ್ಭ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ವೇದಮೂರ್ತಿ, ಡಿವೈಎಸ್ಪಿ ರವೀಶ್ ಸಿ.ಆರ್. ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…