ಬಂಟ್ವಾಳ

19ರಂದು ಸಂಜೆ ಬಂಟ್ವಾಳ ತಾಲೂಕು ಮಟ್ಟದ ಕರಾವಳಿ ಉತ್ಸವ

ಮಧ್ಯಾಹ್ನ 3ರಿಂದ ಮೆರವಣಿಗೆ, ಸಂಜೆ 5ಕ್ಕೆ ಸಭಾ ಕಾರ್ಯಕ್ರಮ, ಬಳಿಕ ಸಾಂಸ್ಕೃತಿಕ ವೈವಿಧ್ಯ

ಬಂಟ್ವಾಳ: ಅಶ್ವಿನಿ ಹೊಳ್ಳ ಅಮ್ಟೂರು ಅವರಿಂದ ಭರತನಾಟ್ಯ, ಐಶ್ವರ್ಯ ನರಿಕೊಂಬು ಅವರಿಂದ ಜಾನಪದ ನೃತ್ಯ. ಪೃಥ್ವೀರಾಜ್ ಬಂಟ್ವಾಳ ಅವರಿಂದ ಗಾಯನ. ಶಾಲಾ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಕಾರ್ಯಕ್ರಮ. ಅಂಗನವಾಡಿ ಕಾರ್ಯಕರ್ತೆಯರಿಂದ ನೃತ್ಯ. ಅರುಣ್ ಚಂದ್ರ ಮತ್ತು ಬಳಗದಿಂದ ಬಲೇ ತೆಲಿಪಾಲೆ. ಕನ್ನಡ ಸಂಸ್ಕೃತಿ ಇಲಾಖೆಯಿಂದ ಜಾನಪದ ನೃತ್ಯ. ಸುಳ್ಯದ ಪಟ್ಟಾಭಿರಾಮ ಅವರಿಂದ ಹಾಸ್ಯಲೋಕದ ನಗೆಹಬ್ಬ.

ಇದು ತಾಲೂಕಿನ ಸಾಂಸ್ಕೃತಿಕ ವೈಭವ ಪ್ರದರ್ಶಿಸಲೆಂದೇ ಮೀಸಲಾದ ಬಂಟ್ವಾಳ ತಾಲೂಕು ಮಟ್ಟದ ಕರಾವಳಿ ಉತ್ಸವ ಕಾರ್ಯಕ್ರಮದಲ್ಲಿ ಸಂಜೆ 5 ಗಂಟೆಗೆ ಉದ್ಘಾಟನಾ ಸಮಾರಂಭದ ಬಳಿಕ ನಡೆಯುವ ಕಾರ್ಯಕ್ರಮಗಳ ವಿವರ. ನಡೆಯುವ ಸ್ಥಳ – ಹೋಟೆಲ್ ರಂಗೋಲಿ ಸಭಾಂಗಣ, ಬಿ.ಸಿ.ರೋಡ್.

ಜಾಹೀರಾತು

ಹಲವು ವರ್ಷಗಳ ಬಳಿಕ ಈ ಸಮಾರಂಭ ನಡೆಯುತ್ತಿದೆ. ಈ ಬಗ್ಗೆ ಸರ್ವತಯಾರಿ ನಡೆದಿದೆ. ಮುಂದಿನ ವರ್ಷ ಇನ್ನೂ ಹೆಚ್ಚಿನ ವ್ಯವಸ್ಥೆ, ಕಾರ್ಯಕ್ರಮಗಳೊಂದಿಗೆ ಉತ್ಸವ ಆಯೋಜಿಸುತ್ತೇವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.

ಬಿ.ಸಿ.ರೋಡಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದ ಅವರು, ಮೆರವಣಿಗೆ ಉದ್ಘಾಟನೆ ಮಧ್ಯಾಹ್ನ 3ರಿಂದ ನಡೆಯಲಿದೆ. ಸಭಾ ಕಾರ್ಯಕ್ರಮವೂ ಸಮಯಕ್ಕೆ ಸರಿಯಾಗಿ ನಡೆಯುವುದು. ಸಾಂಸ್ಕೃತಿಕ ವೈಭವವನ್ನು ಪ್ರದರ್ಶಿಸುವ ಅವಕಾಶ ನಮ್ಮ ಉದ್ದೇಶ, ಇದಕ್ಕೆ ತಾಲೂಕಿನ ಎಲ್ಲರೂ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಎಂದು ಹೇಳಿದರು.

ಈ ಸಂದರ್ಭ ಪೂರಕ ಮಾಹಿತಿ ನೀಡಿದ ಮಂಗಳೂರು ಉಪವಿಭಾಗ ಸಹಾಯಕ ಆಯುಕ್ತ ಡಾ. ರೇಣುಕಾ ಪ್ರಸಾದ್, ಸಚಿವ ಬಿ.ರಮಾನಾಥ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮೆರವಣಿಗೆಯನ್ನು ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಉದ್ಘಾಟಿಸುವರು. ಸಚಿವ ಯು.ಟಿ.ಖಾದರ್ ಉಪಸ್ಥಿತಿಯಲ್ಲಿ ಡಾ.ಏರ್ಯ ಲಕ್ಷ್ಮೀನಾರಾಯಣ ಆಳ್ವ ವಿಶೇಷ ಉಪನ್ಯಾಸ ನೀಡುವರು. ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನಪರಿಷತ್ತು ಮುಖ್ಯ ಸಚೇತಕ ಐವನ್ ಡಿಸೋಜ, ವಿರೋಧ ಪಕ್ಷದ ಮುಖ್ಯ ಸಚೇತಕ ಗಣೇಶ್ ಕಾರ್ಣಿಕ್, ಮುಖ್ಯಮಂತ್ರಿ ಸಂಸದೀಯ ಕಾರ್ಯದರ್ಶಿ ಶಕುಂತಳಾ ಶೆಟ್ಟಿ, ಶಾಸಕರಾದ ಕೋಟ ಶ್ರೀನಿವಾಸ ಶೆಟ್ಟಿ, ಪ್ರತಾಪಚಂದ್ರ ಶೆಟ್ಟಿ, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷ ಬಿ.ಎಚ್.ಖಾದರ್, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಬಂಟ್ವಾಳ ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ವಿಟ್ಲ ಪಪಂ ಅಧ್ಯಕ್ಷ ಅರುಣ್, ತಾಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ, ಬಂಟ್ವಾಳ ಪುರಸಭಾ ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ತಾಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಧನಲಕ್ಷ್ಮಿ ಬಂಗೇರ, ಜಿಲ್ಲಾಧಿಕಾರಿ ಡಾ.ಜಗದೀಶ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಂ.ಆರ್.ರವಿ, ಎಸ್ ಪಿ ಭೂಷಣ್ ಬೊರಸೆ ಉಪಸ್ಥಿತರಿರುವರು.

ಹೆಬ್ಬಾವಿನೊಂದಿಗೆ ಹೋರಾಡಿದ ಬಾಲಕ ವೈಶಾಖ್ ಅವರನ್ನು ಈ ಸಂದರ್ಭ ಸನ್ಮಾನಿಸಲಾಗುವುದು.

ಕರಾವಳಿ ಉತ್ಸವ ಯಶಸ್ಸಿಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ (ಸ್ವಾಗತ ಸಮಿತಿ), ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ(ಪ್ರಚಾರ ಸಮಿತಿ), ಜಿಪಂ ಸದಸ್ಯ ಪದ್ಮಶೇಖರ ಜೈನ್ (ಸಾಂಸ್ಕೃತಿಕ ಸಮಿತಿ), ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ (ಆರ್ಥಿಕ ಸಮಿತಿ), ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಸುದರ್ಶನ ಜೈನ್(ಮೆರವಣಿಗೆ ಸಮಿತಿ), ಬಂಟ್ವಾಳ ಡಿವೈಎಸ್ಪಿ ರವೀಶ್ (ಸುರಕ್ಷತಾ ಸಮಿತಿ), ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಾ (ನೈರ್ಮಲ್ಯ ಸಮಿತಿ) ಅಧ್ಯಕ್ಷರಾಗಿರುವರು.

ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ತಾಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯನ್ ಮಿರಾಂದಾ, ತಹಸೀಲ್ದಾರ್ ಪುರಂದರ ಹೆಗ್ಡೆ, ಮೆರವಣಿಗೆ ಸಮಿತಿ ಅಧ್ಯಕ್ಷ ಸುದರ್ಶನ ಜೈನ್, ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು ಮೊದಲಾದವರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.