ವಿಟ್ಲ

ಅರಣ್ಯ ಸಂರಕ್ಷಣೆ ಕಾಯ್ದೆ ಪರಿಣಾಮಕಾರಿ ಅನುಷ್ಠಾನ: ರೈ

ಬಂಟ್ವಾಳ ತಾಲೂಕಿನ ಕೆಲಿಂಜ ವೀರಕಂಭದ ಬಳಿ ಅರಣ್ಯ ಇಲಾಖೆಯ ಸಿರಿ ಚಂದನವನ ಉದ್ಘಾಟನೆ

www.bantwalnews.com report

ಸುಮಾರು 500 ಎಕ್ರೆ ಪ್ರದೇಶದಲ್ಲಿ ಮೂರು ಸಾವಿರ ಶ್ರೀಗಂಧದ ಸಸಿಗಳನ್ನು ನೆಡುವುದರೊಂದಿಗೆ ಅರಣ್ಯ ಸಂರಕ್ಷಣೆ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವುದಾಗಿ ಅರಣ್ಯ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಜಾಹೀರಾತು

ಕೆಲಿಂಜ ವೀರಕಂಭದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಬೆಳಗ್ಗೆ ಅರಣ್ಯ ಇಲಾಖೆ ವತಿಯಿಂದ ನಿರ್ಮಿಸಲಾದ ಸಿರಿ ಚಂದನವನ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿ ವಿಧಾನಸಭಾ ಕ್ಷೇತ್ರಕ್ಕೊಂದು ಟ್ರೀ ಪಾರ್ಕ್

ಕಾರಿಂಜದಲ್ಲಿ ಔಷಧೀಯ ಗಿಡಗಳನ್ನು ನೆಟ್ಟು ದೈವೀವನ ನಿರ್ಮಿಸಲಾಗಿದೆ. ಪುತ್ತೂರಿನಲ್ಲಿ ದೇಯಿ ಬೈದೇತಿ ಔಷಧಿವನ ನಿರ್ಮಿಸಲಾಗಿದೆ. ಬಂಟ್ವಾಳ ಐಬಿ ಎದುರು ಟ್ರೀ ಪಾರ್ಕ್ ನಿರ್ಮಾಣ ಸಹಿತ ರಾಜ್ಯದ ಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಟ್ರೀ ಪಾರ್ಕ್ ನಿರ್ಮಿಸಲಾಗುವುದು. ಈಗಾಗಲೇ ಮಂಗಳೂರಿನ ತಣ್ಣೀರುಬಾವಿ, ಉಡುಪಿಯ ಬಡಗಬೆಟ್ಟುವಿನಲ್ಲಿ ಟ್ರೀ ಪಾರ್ಕ್ ನಿರ್ಮಿಸಲಾಗಿದೆ. ಪುತ್ತೂರಿನ ಬಿರುಮಲೆ ಬೆಟ್ಟದಲ್ಲಿ ಟ್ರೀ ಪಾರ್ಕ್ ರಚಿಸುವ ಗುರಿ ಇದೆ. ಇದರಿಂದ ಶುದ್ಧ ಗಾಳಿಯ ಪರಿಸರ ನಿರ್ಮಾಣವಾಗುತ್ತದೆ ಎಂದು ರಮಾನಾಥ ರೈ ಹೇಳಿದರು.

ಚಿಣ್ಣರ ವನದರ್ಶನ

ಮಕ್ಕಳು ಪರಿಸರ ರಕ್ಷಣೆಯ ಕುರಿತು ಅರಿತುಕೊಳ್ಳುವುದು ಅತೀ ಅಗತ್ಯ. ಇದಕ್ಕಾಗಿಯೇ ಅರಣ್ಯ ಇಲಾಖೆ ಚಿಣ್ಣರ ವನದರ್ಶನ ಕಾರ್ಯಕ್ರಮ ಆಯೋಜಿಸುತ್ತದೆ. ಪರಿಸರ ಸಂರಕ್ಷಣೆ ನಿಜ ಅರ್ಥದಲ್ಲಿ ಅನುಷ್ಠಾನಗೊಳ್ಳುತ್ತದೆ ಎಂದರು.

ಕಸ್ತೂರಿರಂಗನ್ ವರದಿ

ಕಸ್ತೂರಿ ರಂಗನ್ ವರದಿ ರಿಸರ್ವ್ ಫಾರೆಸ್ಟ್ ಗೆ ಸೀಮಿತವಾಗಿಯಷ್ಟೇ ಅನುಷ್ಠಾನಗೊಳ್ಳುವಂತೆ ಶಿಫಾರಸು ಮಾಡಿದ್ದೇವೆ ಎಂದು ರಮಾನಾಥ ರೈ ಹೇಳಿದರು. ಪಶ್ಚಿಮ ಘಟ್ಟಗಳ ಕಾಡು ಉಳಿಯುವ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಕಸ್ತೂರಿರಂಗನ್ ವರದಿ ಕುರಿತು ನಿಜಾಂಶ ತಿಳಿಸಬೇಕು. ಡಿಸಿ ಕಚೇರಿ ಪಡೀಲ್ ಬಳಿ ನಿರ್ಮಿಸಲು ಹೊರಟರೆ, ಮರ ಕಡಿಯುವುದಕ್ಕೆ ಆಕ್ಷೇಪ ಸಲ್ಲಿಸಲಾಗುತ್ತದೆ ಎಂದು ರೈ ಹೇಳಿದರು.

ಪಾಲಿಕೆ ವ್ಯಾಪ್ತಿಯಲ್ಲಿರರುವ ಪ್ರತಿಯೊಂದು ಕೆರೆಗಳ ರಕ್ಷಣೆಗೆ ಆದ್ಯತೆ ನೀಡಲಾಗುವುದು ಎಂದ ಸಚಿವ, ಅರಣ್ಯೇತರ ಉದ್ದೇಶಕ್ಕೆ ಅರಣ್ಯ ಇಲಾಖೆ ಬಳಸಲು ಆಗೋದಿಲ್ಲ ಎಂದು ಪುನರುಚ್ಛರಿಸಿದರು.

ಯಾರೂ ಕಾನೂನು ಮುರಿಯುವ ಕೆಲಸ ಮಾಡಬಾರದು. ವನ್ಯಜೀವಿಗಳ ಸಂರಕ್ಷಣೆಗೆ ಗರಿಷ್ಠ ಆದ್ಯತೆ ನೀಡಲಾಗುವುದು ಎಂದರು.

ಅರಣ್ಯದೊಳಗೆ ಯಾವುದೇ ಚಟುವಟಿಕೆಗೆ ಅವಕಾಶವಿಲ್ಲ

ಅರಣ್ಯೇತರ ಉದ್ದೇಶಕ್ಕೆ ಕಾಡು ಬಳಕೆ ಮಾಡಲು ಆಗುವುದಿಲ್ಲ. ರಸ್ತೆ ಮಾಡುವುದು ಇತ್ಯಾದಿಗಳಿಗೆ ಅರಣ್ಯ ಇಲಾಖೆ ಅನುಮತಿ ಕೋರಿ ಪ್ರಸ್ತಾವನೆಗಳು ಬಂದಾಗ ಕಾಯ್ದೆಯನುಸಾರ ಕ್ರಮ ಕೈಗೊಳ್ಳಲಾಗುತ್ತದೆ. ಇದನ್ನು ಜನಸಾಮಾನ್ಯರು ಅರ್ಥ ಮಾಡಿಕೊಳ್ಳಬೇಕು, ಜನರು ನಿಜಾಂಶ ತಿಳಿಯಬೇಕು ಎಂದು ರೈ ಹೇಳಿದರು.
ಮುಖ್ಯ ಅತಿಥಿಗಳಾಗಿ ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಬಂಗೇರ, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷ ಬಿ.ಎಚ್.ಖಾದರ್, ಸದಸ್ಯ ಜಗದೀಶ ಕೊಯ್ಲ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಮಂಜುಳಾ ಮಾಧವ ಮಾವೆ, ಚಂದ್ರಪ್ರಕಾಶ್ ಶೆಟ್ಟಿ, ತಾಪಂ ಸದಸ್ಯರಾದ ಗೀತಾ ಚಂದ್ರಶೇಖರ್, ಶೋಭಾ ರೈ, ಎಪಿಎಂಸಿ ಆಯ್ಕೆಯಾದ ಪದ್ಮರಾಜ ಬಲ್ಲಾಳ್, ಪದ್ಮನಾಭ ರೈ, ಚಂದ್ರಶೇಖರ ಪೂಜಾರಿ, ಎಸ್ ಡಿಎಂಸಿ ಅಧ್ಯಕ್ಷ ಹಮೀದ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ. ಸಂಜಯ್ ಎಸ್. ಬಿಜ್ಜೂರು, ಬುಡಾ ಅಧ್ಯಕ್ಷ ಪಿಯುಸ್ ಎಲ್. ರೋಡ್ರಿಗಸ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಟಿ.ಹನುಮಂತಪ್ಪ, ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ದಿಲೀಪ್ ಕುಮಾರ್, ಗ್ರಾಮ ಅರಣ್ಯ ರಕ್ಷಣಾ ಸಮಿತಿ ಮಾಜಿ ಅಧ್ಯಕ್ಷ ವಿಶ್ವನಾಥ ಎಂ, ಗ್ರಾಪಂ ಅಧ್ಯಕ್ಷೆ ಪ್ರೇಮಲತಾ, ಅರಣ್ಯ ಅಪರ ಸಂರಕ್ಷಣಾಧಿಕಾರಿ ವಿಜಯ ನರಸಿಂಹರಾಜ್ ಮೊದಲಾದವರು ಉಪಸ್ಥಿತರಿದ್ದರು.

ಡಾ.ಕೆ.ಟಿ.ಹನುಮಂತಪ್ಪ ಸ್ವಾಗತಿಸಿದರು. ಡಾ.ಸಂಜಯ ಎಸ್.ಬಿಜ್ಜೂರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಲಯ ಅರಣ್ಯಾಧಿಕಾರಿ ಬಿ.ಸುರೇಶ್ ವಂದಿಸಿದರು.

ಇದಕ್ಕೂ ಮುನ್ನ ಸ್ಥಳೀಯ ಶಾಲಾ ಮಕ್ಕಳು ಪರಿಸರ ಸಂರಕ್ಷಣೆ ಕುರಿತು ನಾಟಕ ಪ್ರದರ್ಶಿಸಿದರು.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts