ಬಂಟ್ವಾಳ

’ಎಂಆರ್’ ಲಸಿಕೆಯಿಂದ ಅಡ್ಡಪರಿಣಾಮವಿಲ್ಲ

ದಡಾರ ಮತ್ತು ರುಬೆಲ್ಲಾ ಕಾಯಿಲೆಗಳಿಂದ ರಕ್ಷಣೆ ನೀಡುವ ನಿಟ್ಟಿನಲ್ಲಿ ಮಕ್ಕಳಿಗೆ ನೀಡುವ ದಡಾರ-ರುಬೆಲ್ಲಾ (ಎಂಆರ್) ಲಸಿಕೆಯಿಂದ ಯಾವುದೇ ಅಡ್ಡಪರಿಣಾಮ ಉಂಟಾಗುವುದಿಲ್ಲ ಎಂದು ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು ಸ್ಪಷ್ಟಪಡಿಸಿದ್ದಾರೆ.

ಎಂಆರ್ ಲಸಿಕೆಯ ಬಗ್ಗೆ ಬಂಟ್ವಾಳ ತಾಲೂಕಿನ ಕೆಲವೆಡೆ ಪೋಷಕರಲ್ಲಿ ಉಂಟಾದ ಗೊಂದಲದ ಹಿನ್ನೆಲೆಯಲ್ಲಿ ತಮ್ಮನ್ನು ಸಂಪರ್ಕಿಸಿದ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಮಾರಣಾಂತಿಕ ಕಾಯಿಲೆಯಾಗಿರುವ ದಡಾರವನ್ನು ನಿಯಂತ್ರಿಸಲು ೯ ತಿಂಗಳಿಂದ ೧೫ ವರ್ಷದೊಳಗಿನ ಎಲ್ಲ ಮಕ್ಕಳಿಗೆ ದಡಾರ-ರುಬೆಲ್ಲಾ (ಎಂಆರ್) ಲಸಿಕೆಯನ್ನು ನೀಡುವ ಅಭಿಯಾನವನ್ನು ಸರಕಾರ ಹಮ್ಮಿಕೊಂಡಿದೆ. ಅಭಿಯಾನದ ಪ್ರಯುಕ್ತ ಎಲ್ಲ ಶಾಲೆ, ಅಂಗನವಾಡಿ ಕೇಂದ್ರಗಳಲ್ಲಿ ಮತ್ತು ಸರಕಾರಿ ಆಸ್ಪತ್ರೆಗಳಲ್ಲಿ ಫೆಬ್ರವರಿ ೭ರಿಂದ ೨೮ರ ವರೆಗೆ ಲಸಿಕೆ ನೀಡುವ ಕಾರ್ಯ ನಡೆಯಲಿದೆ. ಲಸಿಕೆಯನ್ನು ಇಂಜೆಕ್ಷನ್ ಮೂಲಕ ಮಕ್ಕಳಿಗೆ ನೀಡಲಾಗುವುದು ಎಂದರು.

ಮೊದಲ ೧೦ ದಿವಸ ಎಲ್ಲ ಶಾಲೆ, ಅಂಗನವಾಡಿಗಳಲ್ಲಿ ಮಕ್ಕಳಿಗೆ ಲಸಿಕೆ ನೀಡಿದರೆ, ಉಳಿದ ೧೦ ದಿವಸದಲ್ಲಿ ಶಾಲೆಗೆ ಬಾರದ ಮನೆಯಲ್ಲಿರುವ ಚಿಕ್ಕ ಮಕ್ಕಳಿಗೆ ಸ್ಥಳೀಯ ಆರೋಗ್ಯ ಕಾರ್ಯಕರ್ತರ ನೆರವಿನೊಂದಿಗೆ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು, ಶುಸ್ರುಕಿಯರು ಮನೆ ಮನೆಗೆ ತೆರಳಿ ಲಸಿಕೆ ನೀಡಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಜಾಹೀರಾತು

ಎಂಆರ್ ಲಸಿಕೆ ನೀಡುವುದರಿಂದ ಯಾವುದೇ ಅಡ್ಡ ಪರಿಣಾಮ ಉಂಟಾಗುವುದಿಲ್ಲ. ಆದರೆ ಸಾಮಾನ್ಯವಾಗಿ ಕೆಲವು ಮಕ್ಕಳಿಗೆ ಯಾವುದೇ ಲಸಿಕೆ ನೀಡಿದರೂ ಜ್ವರ ಕಾಣಿಸಿಕೊಳ್ಳುತ್ತದೆ. ಅಂಥಹ ಮಕ್ಕಳಿಗೆ ಎಂಆರ್ ಲಸಿಕೆ ನೀಡಿದ ಬಳಿಕ ಸ್ಪಲ್ಪ ಜ್ವರ ಕಾಣಿಸಬಹುದು. ಶಾಲೆ, ಅಂಗನವಾಡಿಯಲ್ಲಿ ಮಕ್ಕಳಿಗೆ ಲಸಿಕೆ ನೀಡುವ ಸಂದರ್ಭದಲ್ಲಿ ಪ್ರತೀ ಮಕ್ಕಳಿಗೆ ಜ್ವರ ಮಾತ್ರೆಯನ್ನು ಕೂಡಾ ವಿತರಿಸಲಾಗುವುದು. ಲಸಿಕೆ ಪಡೆದ ಬಳಿಕ ಜ್ವರ ಕಾಣಿಸಿಕೊಂಡ ಮಕ್ಕಳಿಗೆ ಆ ಮಾತ್ರೆಯನ್ನು ನೀಡಬಹುದಾಗಿದೆ . ಲಸಿಕೆ ಹಾಗೂ ಅಭಿಯಾನದ ಬಗ್ಗೆ ಯಾವುದೇ ಸಂದೇಹವಿದ್ದರೆ ಸ್ಥಳೀಯ ಆರೋಗ್ಯ ಕಾರ್ಯಕರ್ತರು ಅಥವಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಸಂದೇಶ ಬಗೆಹರಿಸಿಕೊಳ್ಳಬಹುದು ಎಂದು ಹೇಳಿದ್ದಾರೆ.

ಈ ಹಿಂದೆ ಎಂಆರ್ ಲಸಿಕೆ ನೀಡಿದ್ದರೂ ಅಭಿಯಾನದಲ್ಲಿ ಎಂಆರ್ ಲಸಿಕೆಯನ್ನು ಪಡೆಯಬಹುದಾಗಿದೆ. ಕೆಲವು ಖಾಸಗಿ ಶಾಲೆಗಳಲ್ಲಿ ಲಸಿಕೆ ನೀಡಲು ಅನುಮತಿಗಾಗಿ ಫೋಷಕರ ಸಹಿಗಾಗಿ ಮಕ್ಕಳಿಗೆ ಫಾರಂಗಳನ್ನು ವಿತರಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇದು ಲಸಿಕೆ ನೀಡಿದ ಬಳಿಕ ಯಾವುದೇ ಅಡ್ಡ ಪರಿಣಾಮ ಉಂಟಾದರೆ ಹೆತ್ತವರು ಶಾಲೆಗೆ ಬಂದು ಜಗಳ ಮಾಡುವುದು ಬೇಡ ಎಂಬ ಉದ್ದೇಶದಿದ ಶಾಲಾ ಆಡಳಿತ ಮಂಡಳಿಯ ನಿರ್ಧಾರವಾಗಿದೆ. ಅದಕ್ಕೂ ಇಲಾಖೆಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದರು.

 

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts