ನಿಷೇಧಾಜ್ಞೆ, ಪೊಲೀಸ್ ಕಾವಲು ಹಾಗೂ ವದಂತಿ, ಫಾರ್ವಾರ್ಡ್ ಮೆಸೇಜ್ ಗಳು

ಬಂಟ್ವಾಳ ತಾಲೂಕಿನಾದ್ಯಂತ ಈಗ ನಿಷೇಧಾಜ್ಞೆ. ಜೂನ್ 2ರವರೆಗೆ ಸೆ.144ರನ್ವಯ ಸಾರ್ವಜನಿಕರು ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ರಸ್ತೆ,ಬೀದಿ,ಓಣೆ,ಕೇರಿಗಳಲ್ಲಿ ಸಾರ್ವಜನಿಕ ಸ್ಥಳ, ಸಾರ್ವಜನಿಕ ಕಟ್ಟಡ ಮತ್ತು ಸರ್ಕಾರಿ ಕಛೇರಿ ಸುತ್ತಮುತ್ತ ಗುಂಪು ಸೇರಬಾರದು ಅಥವಾ ಗುಂಪು ಕೂಡುವುದನ್ನು ನಿಷೇಧಿಸಲಾಗಿದೆ. ಇದೇ ವೇಳೆ ವದಂದಿಗಳಿಗೆ ಕಿವಿಗೊಡಬೇಡಿ, ಸಮಾಜಘಾತಕ ಶಕ್ತಿಗಳು ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಂಡು ವದಂತಿಗಳನ್ನು ಹರಡಿಸುತ್ತಿವೆ ಎಂದು ಎಸ್ಪಿ ಭೂಷಣ್ ಜಿ.ಬೊರಸೆ ಹೇಳಿಕೆ ನೀಡಿದ್ದಾರೆ.

ಜಾಹೀರಾತು

ನಿಷೇಧಾಜ್ಞೆ ವಿವರ:

ಬಂಟ್ವಾಳ ತಾಲೂಕಿನಾದ್ಯಂತ ಶನಿವಾರ ಬೆಳಿಗ್ಗೆ 9 ಗಂಟೆಗೆಯಿಂದ ಜೂನ್ 2 ರವರೆಗೆ ಸೆಕ್ಷನ್ 144 ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಮಂಗಳೂರು ಉಪವಿಭಾಗ ದಂಡಾಧಿಕಾರಿ ಹಾಗೂ ಸಹಾಯಕ ಆಯುಕ್ತ ಎ.ಸಿ. ರೇಣುಕಾ ಪ್ರಸಾದ್ ಆದೇಶ ಹೊರಡಿಸಿದ್ದು ಹೀಗೆ.

ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನಾದ್ಯಂತ ಮೇಲೆ ತಿಳಿಸಿದ ಅವಧಿಯಲ್ಲಿ   ಯಾವುದೇ ಆಯುಧ, ಕುಡುಗೋಲು, ಖಡ್ಗ, ಭರ್ಚಿ, ಗದೆ, ಕೋಲು, ಚೂರಿ, ದೊಣ್ಣೆ, ಲಾಠಿ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಪೂರಕವಾಗುವ ಇನ್ಯಾವುದೇ ವಸ್ತುಗಳನ್ನು ಹೊಂದುವುದನ್ನು ನಿಷೇಧಿಸಿದೆ. ಯಾವುದೇ ರೀತಿಯ ಸಾರ್ವಜನಿಕ ಸಭೆ ಸಮಾರಂಭಗಳನ್ನು ನಡೆಸಬಾರದು. ಯಾವುದೇ ಕ್ಷಾರಕ ಅಥವಾ ಸ್ಫೋಟಕ ವಸ್ತುಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ. ಕಲ್ಲುಗಳನ್ನು ಒಟ್ಟುಗೂಡಿಸುವುದು, ಆಯುಧಗಳನ್ನು ಉಪಯೋಗಿಸುವುದನ್ನು ನಿಷೇಧಿಸಲಾಗಿದೆ.  ಸಾರ್ವಜನಿಕವಾಗಿ ಯಾವುದೇ ಕೂಗನ್ನು ಉಚ್ಚರಿಸುವುದು ಅಥವಾ ಪದ ಹಾಡುವುದು, ಚೇಷ್ಠೆಮಾಡುವುದು, ಸಂಜ್ಞೆಗಳನ್ನು ಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ ಪ್ರದರ್ಶನ ಅಥವಾ ಪ್ರಸಾರ ಮಾಡುವುದು, ಪ್ರಕಟಣಾ ಪತ್ರಿಕೆಗಳ ಅಥವಾ ಇತರ ಯಾವುದೇ ವಸ್ತುಗಳ ಪ್ರದರ್ಶನ, ಭಿತ್ತಿಚಿತ್ರಗಳನ್ನು ಅಂಟಿಸುವುದರಿಂದ, ಸಭ್ಯತನ, ಸದಾಚಾರ, ಸಾರ್ವಜನಿಕ ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಅಪರಾಧ ಎಸಗುವರೇ ಪ್ರೇರೇಪಿಸುವ ಕ್ರಮಗಳನ್ನು ನಿಷೇಧಿಸಿದೆ.

ಸರ್ವ ಜನಾಂಗದವರ ಸಹಕಾರ:

ಎಸ್ಪಿ ಭೂಷಣ್ ಜಿ. ಬೊರಸೆ ಪ್ರಕಾರ, ಸರ್ವ ಜನಾಂಗದವರೂ ತನಿಖೆಗೆ ಸಹಕಾರ ನೀಡುತ್ತಿದ್ದಾರೆ. ಮೇ. 26ರಂದು ಮಧ್ಯಾಹ್ನ ಕಲ್ಲಡ್ಕದಲ್ಲಿ ಸುಮಾರು 2.10 ಗಂಟೆಗೆ ಎರಡು ಭಿನ್ನ ಕೋಮಿಗೆ ಸೇರಿದ ಹುಡುಗರ ನಡುವೆ ಆದ ಜಗಳವಿದು. ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಸಾಗಿದೆ. ಎರಡೂ ಕೋಮಿನ ಸಾರ್ವಜನಿಕರು ಈ ಪ್ರಕರಣದ ತನಿಖೆಯಲ್ಲಿ ಪೊಲೀಸರಿಗೆ ಸಹಕಾರ ನೀಡುತ್ತಿದ್ದಾರೆ. ಕೆಲವು ಸಮಾಜಘಾತುಕ ಶಕ್ತಿಗಳು ವಾಟ್ಸಾಪ್ ಮತ್ತು ಫೇಸ್ಬುಕ್  ಮುಖಾಂತರ ಶಾಂತಿಗೆ ಭಂಗ ಉಂಟಾಗುವಂತಹ ತಪ್ಪು ಸಂದೇಶಗಳನ್ನು ರವಾನಿಸುತ್ತಿ ರುವುದು ಕಂಡು ಬಂದಿರುತ್ತದೆ. ಇಂತಹ ಸತ್ಯಕ್ಕೆ ದೂರವಾದ ಮಾಹಿತಿ ಹೊಂದಿದ ಸಂದೇಶಗಳನ್ನು ದಯವಿಟ್ಟು ನಂಬಬೇಡಿ ಹಾಗೂ ಫಾರ್ವಾರ್ಡ್ ಮಾಡಬೇಡಿ. ಇಂತಹ ತಪ್ಪು ಸಂದೇಶ ಕಳುಹಿಸುವವರ ಮೇಲೆ ಕಠಿನ ಕಾನೂನಿನ ಕ್ರಮ ಜರುಗಿಸಲಾಗುವುದು. ಯಾವುದೇ ಸ್ಪಷ್ಟೀಕರಣಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರನ್ನು ನೇರವಾಗಿ 9480805301 ರಲ್ಲಿ ಸಂಪರ್ಕಿಸಬಹುದು ಅಥವಾ ಕಂಟ್ರೋಲ್ ರೂಮ್ ಅನ್ನು 08255235000 ರಲ್ಲಿ ಸಂಪರ್ಕಿಸಬಹುದು. ಸರ್ವ ಧರ್ಮದವರೂ ಜೊತೆಯಾಗಿ ಶಾಂತಿ ಸೌಹಾರ್ದತೆಯ ಸುಂದರ ಸಮಾಜವನ್ನು ನಿರ್ಮಾಣ ಮಾಡೋಣ ಎಂದು ಎಸ್ಪಿ ಹೇಳಿದ್ದಾರೆ.

ಸದ್ಯ ಕಲ್ಲಡ್ಕದಲ್ಲಂತೂ ಎಲ್ಲಿ ನೋಡಿದರೂ ಖಾಕಿ ಕಣ್ಗಾವಲು. ಸದ್ಯಕ್ಕಂತೂ ವ್ಯಾಪಾರ ವಹಿವಾಟು ಡಲ್.

also read:

ಬಂಟ್ವಾಳ ತಾಲೂಕಿನಾದ್ಯಂತ ನಿಷೇಧಾಜ್ಞೆ

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ನಿಷೇಧಾಜ್ಞೆ, ಪೊಲೀಸ್ ಕಾವಲು ಹಾಗೂ ವದಂತಿ, ಫಾರ್ವಾರ್ಡ್ ಮೆಸೇಜ್ ಗಳು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*