ಬಂಟ್ವಾಳ

ಕಂಚಿನಡ್ಕಪದವಿನಲ್ಲೇ ತ್ಯಾಜ್ಯ ವಿಲೇವಾರಿ ಘಟಕ: ಜಿಲ್ಲಾಧಿಕಾರಿ ಸ್ಪಷ್ಟೋಕ್ತಿ

ಸಜೀಪನಡು ಗ್ರಾಮದ ಕಂಚಿನಡ್ಕ ಪದವಿನಲ್ಲಿ ಬಂಟ್ವಾಳ ಪುರಸಭೆಯಿಂದ ನಿರ್ಮಾಣ ಹಂತದಲ್ಲಿರುವ ಘನ ತ್ಯಾಜ್ಯ ವಿಲೇವಾರಿ ಘಟಕವನ್ನು ಇಲ್ಲಿಂದ ತೆರವುಗೊಳಿಸುವ ಪ್ರಶ್ನೆಯೇ ಇಲ್ಲ. ಹೈಕೋರ್ಟ್ ನಿರ್ದೇಶನದಂತೆ ಘಟಕದ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ಜಿ.ಜಗದೀಶ್ ಹೇಳಿದ್ದಾರೆ.

ಜಾಹೀರಾತು

ಕಂಚಿನಡ್ಕ ಪದವಿನಲ್ಲಿ ನಿರ್ಮಾಣ ಹಂತದಲ್ಲಿರುವ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಗುರುವಾರ ಭೇಟಿ ನೀಡಿದ ಅವರು, ಘಟಕದ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಘಟಕದ ಮುಂದುವರಿದ ಕಾಮಗಾರಿ ಕೈಗೆತ್ತಿಕೊಳ್ಳುವ ನಿಟ್ಟಿನಲ್ಲಿ ತಹಶೀಲ್ದಾರ್, ಪುರಸಭಾ ಮುಖ್ಯಾಧಿಕಾರಿ, ತಾಪಂ ಕಾರ್ಯನಿರ್ವಹಣಾಧಿಕಾರಿ ಒಟ್ಟು ಸೇರಿಕೊಂಡು ಚರ್ಚೆ ನಡೆಸಿ ಕಾಮಗಾರಿಗೆ ಸಂಬಂಧಿಸಿ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ. ಇತ್ಯರ್ಥ ಪಡಿಸಲು ಸಾಧ್ಯವಾಗದೆ ಇರುವ ಸಮಸ್ಯೆಗಳಿದ್ದರೆ ತಕ್ಷಣ ತನ್ನ ಗಮನಕ್ಕೆ ತರುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ವೇಳೆ ಸಜೀಪ ಗ್ರಾಮ ಪಂಚಾಯತ್ ಅಧ್ಯಕ್ಷ ಮುಹಮ್ಮದ್ ನಾಸಿರ್ ಘನ ತ್ಯಾಜ್ಯ ಘಟಕದ ಕಾಮಗಾರಿ ಆರಂಭಿಸುವ ಮೊದಲು ಘಟಕದ ಸುತ್ತ ಮುತ್ತಲಿರುವ ೧೪೦ರಷ್ಟು ಮನೆಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು. ಮನೆಗಳನ್ನು ಸ್ಥಳಾಂತರ ಮಾಡಿದ ಪ್ರದೇಶದಲ್ಲೇ ಶಾಲೆ, ಅಂಗನವಾಡಿ, ಮದರಸವನ್ನು ನಿರ್ಮಾಣ ಮಾಡಬೇಕು. ಘಟಕದ ನಿರ್ವಹಣೆಯು ಜಿಲ್ಲಾಧಿಕಾರಿಯ ಉಸ್ತುವಾರಿಯಲ್ಲಿರಬೇಕು. ಪರಿಸರ ಇಲಾಖೆಯ ನಿಯಮಗಳು ಮತ್ತು ಗ್ರಾಮಸ್ಥರ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾಧಿಕಾರಿ ಏನು ಹೇಳಿದರು?

  • ಇಲ್ಲಿಂದ ಸ್ಥಳಾಂತರಗೊಳ್ಳಲು ಬಯಸುವ ಗ್ರಾಮಸ್ಥರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು. ಶಾಲೆ, ಅಂಗನವಾಡಿ, ಮದರಸವನ್ನು ಕೂಡಲೇ ತೆರವುಗೊಳಿಸಿ
  • ಘಟಕದ ಸುತ್ತ ಮುತ್ತ ವಾಸ್ತವ್ಯ ಇರುವ ಅಧಿಕೃತ ಮತ್ತು ಅನಧಿಕೃತ ಮನೆಗಳ ವಿವರವನ್ನು ಪಡೆಯಿರಿ
  • ಸ್ಥಳಾಂತರಗೊಳ್ಳಲು ಬಯಸುವ ನಿವಾಸಿಗಳಿಗೆ ಪಕ್ಕದ ಇರಾ ಗ್ರಾಮದಲ್ಲಿ ಪರ್ಯಾಯ ವ್ಯವಸ್ಥೆಯನ್ನು ಜಿಲ್ಲಾಡಳಿತ ಕಲ್ಪಿಸಲಿದೆ.
  • ಹೋಗಲು ಇಚ್ಛಿಸದವರು ಇಲ್ಲಿಯೇ ವಾಸ್ಥವ್ಯ ಹೂಡಲು ಆಕ್ಷೇಪವಿಲ್ಲ
  • ಇರಾ ಗ್ರಾಮಕ್ಕೆ ತೆರಳಲು ಬಯಸಿದರೆ ಮನೆ ನಿರ್ಮಾಣಕ್ಕೆ ಅನುದಾನ ಸಹಿತ ಎಲ್ಲ ರೀತಿಯ ಮೂಲಸೌಕರ್ಯವನ್ನು ಜಿಲ್ಲಾಡಳಿತದಿಂದ ಮಾಡಲಾಗುವುದು.

ಜಿಪಂ ಮಾಜಿ ಸದಸ್ಯ ಎಸ್.ಅಬ್ಬಾಸ್, ನಗರ ಕೋಶಾ ಯೋಜನಾ ನಿರ್ದೇಶಕ ಪ್ರಸನ್ನ, ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ, ತಾಪಂ ಕಾರ್ಯನಿರ್ವಾಹಣಾಧಿಕಾರಿ ಸಿಪ್ರಿಯಾ ಮಿರಾಂದ, ಪುರಸಭಾ ಮುಖ್ಯಾಧಿಕಾರಿ ಸುಧಾಕರ್, ಆರೋಗ್ಯಾಧಿಕಾರಿ ರತ್ನ ಪ್ರಸಾದ್, ಪಿಡಿಒ ವೀರಪ್ಪ ಗೌಡ ಉಪಸ್ಥಿತರಿದ್ದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.