ಬಂಟ್ವಾಳ

ಅನಧಿಕೃತ ಕಟ್ಟಡಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ

ಅನಧಿಕೃತ ಕಟ್ಟಡಗಳು ಯಾವುದೇ ಇದ್ದರೂ ಅವುಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಬಂಟ್ವಾಳ ಪುರಸಭೆಯಲ್ಲಿ ಮುಖ್ಯಾಧಿಕಾರಿ ಎಂ.ಎಚ್. ಸುಧಾಕರ್ ಹೇಳಿದ್ದಾರೆ.

ಜಾಹೀರಾತು

ಸೋಮವಾರ ನಡೆದ ಪುರಸಭೆ ಸಾಮಾನ್ಯ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ವಿರೋಧ ಪಕ್ಷದ ಸದಸ್ಯರು  ಬಂಟ್ವಾಳ ಕಸ್ಬಾದ ಕಟ್ಟಡವೊಂದರ ರಚನೆ ನಿಯಮ ಬಾಹಿರವಾಗಿದ್ದು, ಈ ಕುರಿತು ಕ್ರಮ ಕೈಗೊಳ್ಳಲು ಪಟ್ಟು ಹಿಡಿದರು. ವಿಪಕ್ಷ ನಾಯಕ ಎ.ಗೋವಿಂದ ಪ್ರಭು ಮತ್ತು ಬಿ.ದೇವದಾಸ ಶೆಟ್ಟಿ ವಿಷಯ ಪ್ರಸ್ತಾಪಿಸಿ, ಈ ಕುರಿತು ಲಿಖಿತ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲವೇಕೆ ಎಂದು ಪ್ರಶ್ನಿಸಿದರು. ಸದಸ್ಯ ಮುನೀಶ್ ಅಲಿ ಅವರು ಮಧ್ಯಪ್ರವೇಶಿಸಿ, ಪುರಸಭಾ ವ್ಯಾಪ್ತಿಯಲ್ಲಿರುವ ಎಲ್ಲ ಅಕ್ರಮ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಈ ಸಂದರ್ಭ ಮಾತನಾಡಿದ ಬುಡಾ ಅಧ್ಯಕ್ಷ ಸದಾಶಿವ ಬಂಗೇರ, ಅನಧಿಕೃತ ಕಟ್ಟಡಗಳ ಬಗ್ಗೆ ಮಾತನಾಡುವವರು ಸತ್ಯ ಹರಿಶ್ಚಂದ್ರರೇನಲ್ಲ ಎಂದು ಟೀಕಿಸಿದರೆ, ಪ್ರತೀ ಸಭೆಯಲ್ಲಿ ಇದೇ ವಿಚಾರ ಚರ್ಚಿಸುವುದು ಸೂಕ್ತವಲ್ಲ ಎಂದು ಅಧ್ಯಕ್ಷ ರಾಮಕೃಷ್ಣ ಆಳ್ವ ಇದಕ್ಕೆ ಧ್ವನಿಗೂಡಿಸಿದರು. ಈ ಹಂತದಲ್ಲಿ ವಿಪಕ್ಷ ಮತ್ತು ಆಡಳಿತ ಪಕ್ಷದ ಸದಸ್ಯರಿಗೆ ಮಾತಿನ ಚಕಮಕಿ ನಡೆಯಿತು. ಪುರಸಭಾ ವ್ಯಾಪ್ತಿಯಲ್ಲಿರುವ ಎಲ್ಲಾ ಅನಧಿಕೃತ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಮುಖ್ಯಾಧಿಕಾರಿ ಪ್ರಕಟಿಸುವ ಮೂಲಕ ಚರ್ಚೆಗೆ ತೆರೆ ಎಳೆದರು.

ತ್ಯಾಜ್ಯ ವ್ಯಾಜ್ಯ:

ಪುರಸಭಾ ವ್ಯಾಪ್ತಿಯಲ್ಲಿ ತ್ಯಾಜ್ಯವಿಲೇವಾರಿಗೆ ಸಂಬಂಧಿಸಿ ಈಗಾಗಲೇ ಮೂರು ಬಾರಿ ಟೆಂಡರ್ ಕರೆಯಲಾಗಿದ್ದರೂ ಗುತ್ತಿಗೆ ವಹಿಸಿಕೊಳ್ಳಲು ಯಾರೂ ಮುಂದೆ ಬರುತ್ತಿಲ್ಲ. ಹೀಗಾಗಿ ಹಿಂದಿನ ಗುತ್ತಿಗೆದಾರರನ್ನೇ ಮುಂದುವರಿಸಲಾಗುತ್ತಿದೆ ಎಂದು ಮುಖ್ಯಾಧಿಕಾರಿ ಸಭೆಗೆ ತಿಳಿಸಿದರು. ಈ ಕುರಿತು ಮತ್ತೆ ಚರ್ಚೆಗಳು ನಡೆದವು. ಈಗಾಗಲೇ ಕಂಚಿನಡ್ಕ ಪದವಿಗೆ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಪರಿಶೀಲನೆ ನಡೆಸಿದ್ದು ಅವರು ಈ ವಿಚಾರದಲ್ಲಿ ಪುರಸಭೆಗೆ ಪೂರಕವಾಗಿ ಸ್ಪಂದಿಸಿದ್ದಾರೆ. ಹಾಗಾಗಿ ಘಟಕದ ಮುಂದಿನ ಪ್ರಕ್ರಿಯೆಗೆ ತಕ್ಷಣ ಮುಂದಾಗಬೇಕು ಎಂದು ದೇವದಾಸ ಶೆಟ್ಟಿ ಗಮನ ಸೆಳೆದಾಗ ಈ ವಿಚಾರದಲ್ಲಿ ಯೋಜನಾ ನಿರ್ದೇಶಕರು, ತಹಶೀಲ್ದಾರ್ ಜೊತೆಗೂಡಿ ವಿಶೇಷ ಸಭೆ ನಡೆಸುವ ಕುರಿತು ಮುಖ್ಯಾಧಿಕಾರಿ ತಿಳಿಸಿದರು.

ಪುರಸಭಾ ವ್ಯಾಪ್ತಿಯಲ್ಲಿ ಬಯಲು ಮುಕ್ತ ಶೌಚಾಲಯ ಘೋಷಣೆಗೆ ಇನ್ನೂ ಒಂದು ತಿಂಗಳ ಕಾಲಾವಕಾಶ ನೀಡುವಂತೆ ಸದಸ್ಯ ವಾಸು ಪೂಜಾರಿ ಅವರು ಒತ್ತಾಯಿಸಿದರು.

ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಸದಸ್ಯರಾದ ವಾಸು ಪೂಜಾರಿ, ಜಗದೀಶ್ ಕುಂದರ್, ಗಂಗಾಧರ್, ವಸಂತಿ ಚಂದಪ್ಪ, ಬಿ. ಮೋಹನ್, ಇಕ್ಬಾಲ್ ಗೂಡಿನಬಳಿ, ಚಂಚಲಾಕ್ಷಿ ಚರ್ಚೆಯಲ್ಲಿ ಪಾಲ್ಗೊಂಡರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

2 hours ago