ಬಂಟ್ವಾಳ

ತನ್ನ ಅವಧಿಯಲ್ಲೇ ಒಳಚರಂಡಿ ಯೋಜನೆ, ಕ್ರೀಡಾಂಗಣಕ್ಕೆ ಮಂಜೂರಾತಿ: ರಮಾನಾಥ ರೈ

ಬಂಟ್ವಾಳ ಪುರಸಭೆಯ ಒಳಚರಂಡಿ ಯೋಜನೆ ಮತ್ತು ಬೆಂಜನಪದವಿನಲ್ಲಿರುವ ಕ್ರೀಡಾಂಗಣಕ್ಕೆ ತನ್ನ ಅವಧಿಯಲ್ಲೇ ಆಡಳಿತಾತ್ಮಕ ಮಂಜೂರಾತಿ ದೊರೆತಿದೆ. ತಾನು ಎಂದಿಗೂ ಉದಾಸೀನ ಮಾಡಿಲ್ಲ. ಬಂಟ್ವಾಳ ವಿಧಾನಸಭೆ ಕ್ಷೇತ್ರದ ಎಲ್ಲ ಜನರ ಬೇಡಿಕೆಯಂತೆ ಕೆಲಸ ಮಾಡಿದ್ದರೂ ಅಪಪ್ರಚಾರ ನಿಂತಿಲ್ಲ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.

ಜಾಹೀರಾತು

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರವಿದ್ದಾಗ, ತಾನು ಮಂತ್ರಿಯಾಗಿದ್ದ ಸಂದರ್ಭ, ಈ ಕ್ಷೇತ್ರದ ಶಾಸಕನ ನೆಲೆಯಲ್ಲಿ ಬಂಟ್ವಾಳ ಪುರಸಭೆಗೆ 56 ಕೋಟಿ ರೂ ವೆಚ್ಚದಲ್ಲಿ ಎರಡನೇ ಹಂತದ ಒಳಚರಂಡಿ ಯೋಜನೆಗೆ ಆಡಳಿತಾತ್ಮಕ ಮಂಜೂರಾತಿ ದೊರಕಿದೆ, ಇದು ತನ್ನ ಅವಧಿಯಲ್ಲೇ ನಡೆದಿರುವ ಪ್ರಕ್ರಿಯೆ. ಇನ್ನೇನಿದ್ದರು ಟೆಂಡರ್ ಮತ್ತಿತರ ಕೆಲಸಗಳಷ್ಟೇ ನಡೆಯಲಿವೆ ಎಂದು ಹೇಳಿದ ರೈ, ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರನ್ನು ಒದಗಿಸುವ ಸಲುವಾಗಿಯೇ ಸಮಗ್ರ ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾನಕ್ಕೆ ತನ್ನ ಅವಧಿಯಲ್ಲೇ ತರಲಾಗಿತ್ತು ಎಂದರು.

ಖಾಸಗಿಯವರಿಂದ ಜಾಗ ಪಡೆದುಕೊಂಡು, ಕೆಲ ಸರಕಾರಿ ಭೂಮಿಯನ್ನು ಖಾಸಗಿಯವರಿಗೆ ನೀಡಿ 5 ಕೋಟಿ ರೂ ಮಂಜೂರಾಗಿದ್ದ ತಾಲೂಕು ಮಟ್ಟದ ಕ್ರೀಡಾಂಗಣಕ್ಕೆ ತನ್ನ ಪ್ರಯತ್ನದ ಫಲವಾಗಿ 10 ಕೋಟಿ ರೂ ಆಡಳಿತಾತ್ಮಕ ಮಂಜೂರಾತಿ ದೊರಕಿದೆ. ತಾಲೂಕು ಕ್ರೀಡಾಂಗಣಕ್ಕೆ ಅಷ್ಟೊಂದು ಅನುದಾನ ದೊರಕಿರುವುದು ರಾಜ್ಯದಲ್ಲೇ ಪ್ರಥಮ. ಅದನ್ನು ಗಮನಿಸಬೇಕು ಎಂದ ರೈ, ಈ ಕೆಲಸಗಳಿಗಾಗಿ ತಾನು ಎಷ್ಟು ಪ್ರಯತ್ನಪಟ್ಟಿದ್ದೇನೆ ಎಂಬುದು ನನಗೆ ಮತ್ತು ದೇವರಿಗೆ ಮಾತ್ರ ಗೊತ್ತು ಎಂದರು.

ತಾನು ಎಂದಿಗೂ ಕೆಲಸದಲ್ಲಿ ಉದಾಸೀನ ಮಾಡಿಲ್ಲ. ಬಂಟ್ವಾಳ ಕ್ಷೇತ್ರದ ಜನರಿಗೆ ಬೇಕಾದ ಹೆಚ್ಚಿನ ಸೌಲಭ್ಯಗಳನ್ನು ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಜನರ ಬೇಡಿಕೆಯಂತೆ ಕೆಲಸ ನಿರ್ವಹಿಸಿದ್ದೇನೆ ಎಂದು ಹೇಳಿದ ರೈ, ಆದರೂ ಈ ಯೋಜನೆಗಳನ್ನು ಕಡೆಗಣಿಸಿ, ತನ್ನ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಇನ್ನೇನಿದ್ದರು ತಾನು ಮಾಡಿದ ಕೆಲಸಗಳನ್ನು ಮುಂದುವರಿಸುವುದಷ್ಟೇ ಕೆಲಸ ಎಂದು ಹೇಳಿದರು

ಶಂಕುಸ್ಥಾಪನೆ ಆದ ಪಶ್ಚಿಮವಾಹಿನಿ ಯೋಜನೆಯ ನೀರಾವರಿ ಯೋಜನೆ, 150 ಕೋಟಿ ರೂ. ವೆಚ್ಚದಲ್ಲಿ ಬಿ.ಸಿ.ರೋಡಿನಿಂದ ಪುಂಜಾಲಕಟ್ಟೆಯವರೆಗೆ ದ್ವಿಪಥ ರಸ್ತೆ ನಿರ್ಮಾಣಕ್ಕೆ ಮಂಜೂರಾತಿ ಸಿಕ್ಕಿದೆ. ಅದರಲ್ಲಿ 100 ಕೋಟಿ ರಸ್ತೆ ನಿರ್ಮಾಣಕ್ಕೆ ಹಾಗೂ 50 ಕೋಟಿ ರೂ ಭೂಸ್ವಾಧೀನಕ್ಕೆ ಮೀಸಲಾಗಿದೆ. ಇದರ ಟೆಂಡರ್ ಕೂಡಾ ಕರೆಯಲಾಗಿದೆ ಶೀಘ್ರವಾಗಿ ಕೆಲಸ ಪ್ರಾರಂಭವಾಗಲಿದೆ ಎಂದು ರಮಾನಾಥ ರೈ ಹೇಳಿದರು.

ತ್ಯಾಜ್ಯ ಸಂಸ್ಕರಣೆಗೆ ಪೈರೋಲಿಸಿಸ್ ಯಂತ್ರ

ತಾನು ಸಚಿವನಾಗಿದ್ದಾಗ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಪಿಯೂಸ್ ಎಲ್. ರೋಡ್ರಿಗಸ್ ಮುತುವರ್ಜಿಯಲ್ಲಿ ಪುರಸಭೆಗೆ ತ್ಯಾಜ್ಯ ಸುಲಭ ವಿಲೇವಾರಿಗಾಗಿ ಪೈರೋಲಿಸಿಸ್ ಯಂತ್ರ ಖರೀದಿಸಿ, ಅಳವಡಿಸುವ ಕುರಿತು ನಿರ್ಣಯಗಳಾಗಿದ್ದು, ಕೆಲಸ ಪ್ರಗತಿಯಲ್ಲಿದೆ. ಈಗಾಗಲೇ ಪುರಸಭೆಗೆ ಸಂಬಂಧಿಸಿ ಒಳಚರಂಡಿ, ಕುಡಿಯುವ ನೀರು, ತ್ಯಾಜ್ಯ ಶುದ್ಧೀಕರಣಕ್ಕೆ ಬೇಕಾದ ಸೌಕರ್ಯಗಳನ್ನು ತನ್ನ ಅವಧಿಯಲ್ಲೇ ಒದಗಿಸಲಾಗಿದೆ. ಹೊಸದಾಗಿ ಇದನ್ನು ಮಾಡುವ ಬದಲು ಇದ್ದದ್ದನ್ನು ಮುಂದುವರಿಸಿಕೊಂಡು ಹೋದರೆ ಸಾಕು, ತಾನು ಏನೂ ಮಾಡಿಲ್ಲ ಎಂಬರ್ಥದಲ್ಲಿ ಹೇಳುವುದು ಸರಿ ಎನಿಸುವುದಿಲ್ಲ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ಬಿ.ಎಚ್.ಖಾದರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ಬಾಸ್ ಅಲಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಮಂಜುಳಾ ಮಾಧವ ಮಾವೆ, ಪುರಸಭಾಧ್ಯಕ್ಷ ಪಿ.ರಾಮಕೃಷ್ಣ ಆಳ್ವ, ಬುಡಾ ಅಧ್ಯಕ್ಷ ಸದಾಶಿವ ಬಂಗೇರ, ಯುವ ಕಾಂಗ್ರೆಸ್ ಉಪಾಧ್ಯಕ್ಷ ಚಿತ್ತರಂಜನ್ ಶೆಟ್ಟಿ, ಬೇಬಿ ಕುಂದರ್ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

3 hours ago