ಬಂಟ್ವಾಳ

ಫೇಸ್‌ಬುಕ್, ವಾಟ್ಸಪ್ ದುರ್ಬಳಕೆ ಶಿಕ್ಷಾರ್ಹ ಅಪರಾಧ: ಎಎಸ್ಪಿ ಋಷಿಕೇಶ್

ಆಧುನಿಕ ಸಮಾಜದಲ್ಲಿ ಯುವ ಜನತೆ ಮೊಬೈಲ್ ಮೂಲಕ ಫೇಸ್‌ಬುಕ್, ವಾಟ್ಸಪ್ ಮತ್ತಿತರ ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ತಪ್ಪು ಸಂದೇಶ ಮತ್ತು ನಕಲಿ ಚಿತ್ರಗಳನ್ನು ಸೃಷ್ಟಿ ಸಹಿತ ರವಾನಿಸುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಎಎಸ್ಪಿ ಋಷಿಕೇಶ್ ಸೊನವಾಣೆ ಹೇಳಿದ್ದಾರೆ.

ಜಾಹೀರಾತು

ಕರ್ನಾಟಕ ಪತ್ರಕರ್ತರ ಸಂಘ ಬಂಟ್ವಾಳ ಮತ್ತು ಎಸ್‌ವಿಎಸ್ ಕಾಲೇಜಿನ ಎನ್‌ಎಸ್‌ಎಸ್ ಘಟಕ ವತಿಯಿಂದ ಪತ್ರಿಕಾ ದಿನಾಚರಣೆ ಪ್ರಯುಕ್ತ ಕಾಲೇಜಿನಲ್ಲಿ ಶುಕ್ರವಾರ ಏರ್ಪಡಿಸಿದ್ದ ’ಸೈಬರ್ ಕ್ರೈಂ ಮತ್ತು ಪತ್ರಿಕೆ’ ಮಾಹಿತಿ ಕಾರ್ಯಾಗಾರದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು. ಮಾಹಿತಿ ಹಂಚಿಕೊಳ್ಳುವ ಭರದಲ್ಲಿ ಯಾವುದೇ ಜಾತಿ, ಧರ್ಮ, ದೇವರ ನಿಂದನೆ ಮತ್ತು ದೇಶ ವಿರೋಧಿ ವಿಚಾರಗಳ ಸೃಷ್ಟಿ ಮತ್ತು ರವಾನೆ ಕೂಡಾ ದಂಡ ವಸೂಲಿ ಮತ್ತು ಜೈಲು ಶಿಕ್ಷೆ ವಿಧಿಸುವಂತಹ ಕಠಿಣ ಕಾನೂನು ವ್ಯಾಪ್ತಿಗೆ ಒಳಪಡುತ್ತದೆ ಎಂದರು.

ಇಂದು ಬಹುತೇಕ ಸಂದರ್ಭದಲ್ಲಿ ಸುಳ್ಳು ಮಾಹಿತಿ ರವಾನಿಸುವ ಮೂಲಕ ಸಮಾಜದಲ್ಲಿ ಅನಗತ್ಯ ಗೊಂದಲ ಸೃಷ್ಟಿಯಾಗುತ್ತಿದ್ದು, ಬ್ಲಾಕ್‌ಮೇಲ್, ಬ್ಯಾಂಕಿಂಗ್ ವ್ಯವಹಾರ ಮತ್ತು ಕೆಲವೊಂದು ಆನ್‌ಲೈನ್ ಸಾಮಾಗ್ರಿ ಮಾರಾಟಕ್ಕೆ ಸಂಬಂಧಿಸಿದಂತೆ ಬ್ಯಾಂಕಿನ ಪಾಸ್‌ವರ್ಡ್ ಪಡೆದು ಖಾತೆಯಿಂದ ಹಣ ಲಪಟಾಯಿಸುತ್ತಿರುವ ಬಗ್ಗೆಯೂ ಪ್ರಕರಣ ಹೆಚ್ಚಳವಾಗಿದೆ. ಇವೆಲ್ಲವೂ ವಿದೇಶದಲ್ಲಿದ್ದು ಕಾರ್ಯಾಚರಿಸಿದರೂ ಅಂತಿಮವಾಗಿ ಪೊಲೀಸರ ತನಿಖಾ ತಂಡಕ್ಕೆ ಸಿಕ್ಕಿ ಬೀಳುತ್ತಾರೆ ಎಂದು ಎಚ್ಚರಿಸಿದರು.

ಕಾಲೇಜಿನ ಉಪಪ್ರಾಂಶುಪಾಲೆ ಡಾ. ಸುಜಾತ ಎಚ್.ಆರ್. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ಯುವ ಸಮೂಹಕ್ಕೆ ಸೈಬರ್ ಕ್ರೈಂ ಕೆಡುಕಿನ ಬಗ್ಗೆ ಪತ್ರಕರ್ತರ ಸಂಘಟನೆ ಮಾಹಿತಿ ಕಾರ್ಯಾಗಾರ ಆಯೋಜಿಸಿರುವುದು ಸಮಯೋಚಿತ ಮತ್ತು ಔಚಿತ್ಯಪೂರ್ಣವಾಗಿದೆ ಎಂದರು.

ಬಂಟ್ವಾಳ ಗ್ರಾಮಾಂತರ ಠಾಣಾಧಿಕಾರಿ ಪ್ರಸನ್ನ ಎಂ. ಮಾತನಾಡಿ, ಪೊಲೀಸ್ ದಂಡ ಸಂಹಿತೆ ಸಹಿತ ವಿವಿಧ ಕಾಯ್ದೆಗಳ ಬಗ್ಗೆ ಮಾಹಿತಿ ನೀಡಿದರು.
ಜೇಸಿ ರಾಜ್ಯ ತರಬೇತುದಾರ, ಪತ್ರಕರ್ತ ಜಯಾನಂದ ಪೆರಾಜೆ ಪತ್ರಿಕಾ ದಿನಾಚರಣೆ ಬಗ್ಗೆ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಕರ್ನಾಟಕ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಸುದೇಶ್ ಕುಮಾರ್, ಎನ್‌ಎಸ್‌ಎಸ್ ಘಟಕ ಯೋಜನಾಧಿಕಾರಿ ಕಿಟ್ಟು ಕೆ. ರಾಮಕುಂಜ ಶುಭ ಹಾರೈಸಿದರು.
ಪತ್ರಕರ್ತರಾದ ದತ್ತಾತ್ರೇಯ ಹೆಗ್ಡೆ, ಸಂದೀಪ್ ಸಾಲ್ಯಾನ್, ದೀಪಕ್ ಸಾಲ್ಯಾನ್, ಪತ್ರಿಕಾ ಛಾಯಾಗ್ರಾಹಕ ಸತೀಶ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಸಂಘದ ಅಧ್ಯಕ್ಷ ಮೋಹನ್ ಕೆ. ಶ್ರೀಯಾನ್ ರಾಯಿ ಸ್ವಾಗತಿಸಿದರು. ಪತ್ರಕರ್ತ ರಾಜಾ ಬಂಟ್ವಾಳ್ ಪ್ರಾಸ್ತಾವಿಕ ಮಾತನಾಡಿದರು. ಸಂಘದ ಕಾರ್ಯದರ್ಶಿ ಲತೀಫ್ ನೇರಳಕಟ್ಟೆ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.