ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಘಟಕಕ್ಕೆ ನೂತನ ಸಾರಥಿ ನೇಮಕಗೊಂಡಿದ್ದಾರೆ. ಬ್ಯಾಂಕ್ ಅಧಿಕಾರಿಯಾಗಿ ನಿವೃತ್ತಿಗೊಂಡು ಬಳಿಕ ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ಮಾಜಿ ಸಚಿವ ಬಿ.ರಮಾನಾಥ ರೈ ಆಪ್ತ, ರಾಷ್ಟ್ರೀಯ ಕಬಡ್ಡಿ ಆಟಗಾರ, ಬಿಲ್ಲವ ಸಮಾಜ ಸಹಿತ ಹಲವು ಸಂಘ, ಸಂಸ್ಥೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ಬೇಬಿ ಕುಂದರ್ ಬಂಟ್ವಾಳ ಕಾಂಗ್ರೆಸ್ ಬ್ಲಾಕ್ ಘಟಕವನ್ನು ಮುನ್ನಡೆಸಲಿದ್ದಾರೆ. ಇದುವರೆಗೆ ಮಾಯಿಲಪ್ಪ ಸಾಲ್ಯಾನ್ ಅವರು ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿದ್ದರು.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷವನ್ನು ಮತ್ತೊಮ್ಮೆ ಎದ್ದು ನಿಲ್ಲುವಂತೆ ಮಾಡುವ ಗುರುತರ ಜವಾಬ್ದಾರಿ ಅವರಿಗಿದೆ.
ಮಾಜಿ ಸಚಿವ ಬಿ.ರಮಾನಾಥ ರೈ ಮತ್ತು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅವರ ಶಿಫಾರಸ್ಸಿನ ಮೇರೆಗೆ ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ದಿನೇಶ್ ಗುಂಡುರಾವ್ ಅವರು ಬೇಬಿ ಕುಂದರ್ ಅವರನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ.
ಮುಂದಿನ ದಿನಗಳಲ್ಲಿ ಪ್ರತಿಷ್ಠಿತ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಮಿಟಿಯ ಅಧ್ಯಕ್ಷರಾಗಿ ಬೇಬಿ ಕುಂದರ್ ನಾಯಕತ್ವದಲ್ಲಿ ಪಕ್ಷದ ಸಂಘಟನೆ ಮುನ್ನಡೆಯಲಿದೆ.
ಸದಾ ಕ್ರಿಯಾಶೀಲ ವ್ಯಕ್ತಿತ್ವದೊಂದಿಗೆ ಸಮಾಜಮುಖಿ ಚಿಂತನೆಯೊಂದಿಗೆ ಜನಪರ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿರುವ ಬೇಬಿ ಕುಂದರ್ ಅವರು ಬಿ.ಎ.ಪಧವೀದರರು.
ಎಸ್ ವಿ ಎಸ್ ಕಾಲೇಜಿನ ವಿದ್ಯಾರ್ಥಿ ಸಂಘದ ನಾಯಕರಾಗಿ ಕಾಲೇಜು ಜೀವನದಲ್ಲೇ ನಾಯಕತ್ವದ ಗುಣವನ್ನು ಮೈಗೂಡಿಸಿಕೊಂಡು ನಂತರದ ದಿನಗಳಲ್ಲಿ ಹಲವಾರು ಜನೋಪಯೋಗಿ ಕಾರ್ಯಕ್ರಮಗಳ ಸಂಘಟನೆಯ ಮೂಲಕ ನಾಯಕರಾಗಿ ಮೂಡಿಬಂದವರು.
ಹಿರಿಯ ನಾಯಕ ಬಿ. ಜನಾರ್ದನ ಪೂಜಾರಿ ಮತ್ತು ಮಾಜಿ ಸಚಿವ ಬಿ.ರಮಾನಾಥ ರೈ ಅವರ ಸಹಕಾರದೊಂದಿಗೆ ವಿಜಯ ಬ್ಯಾಂಕಿನಲ್ಲಿ ವೃತ್ತಿ ಜೀವನ ಆರಂಭಿಸಿ ರಾಜ್ಯದ ವಿವಿಧೆಡೆಗಳಲ್ಲಿ ಕರ್ತವ್ಯ ನಿರ್ವಹಿಸಿ ಬಂಟ್ವಾಳ ವಿಜಯ ಬ್ಯಾಂಕಿನಲ್ಲಿ ಶಾಖಾಧಿಕಾರಿಯಾಗಿ ಸುದೀರ್ಘ 31 ವರ್ಷಗಳ ಕರ್ತವ್ಯದ ಬಳಿಕ ಸ್ವಯಂ ನಿವೃತ್ತಿ ಪಡೆದು ಸಾಮಾಜಿಕ ಬದುಕಿಗೆ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಂಡವರು. ಮಾಜಿ ಸಚಿವ ಬಿ.ರಮಾನಾರೈಯವರ ಆಪ್ತರಾಗಿರುವ ಬೇಬಿ ಕುಂದರ್ ವೃತ್ತಿ ಜೀವನದ ನಿವೃತ್ತಿಯ ಬಳಿಕ ಕಾಂಗ್ರೆಸ್ ಪಕ್ಷದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡು ದ.ಕ.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.
ರಾಷ್ಟ್ರೀ ಯ ಕಬಡ್ಡಿ ಆಟಗಾರರಾಗಿರುವ ಇವರು ಹಲವಾರು ಕ್ರೀಡಾಕೂಟಗಳನ್ನು ಯಶಸ್ವಿಯಾಗಿ ಸಂಘಟಿಸಿದ್ದು ಪ್ರಸ್ತುತ ಬಂಟ್ವಾಳ ತಾಲೂಕು ಅಮೆಚೂರು ಕಬಡ್ಡಿ ಎಸೋಶಿಯೇಶನ್ ನ ಅಧ್ಯಕ್ಷರಾಗಿದ್ದಾರೆ.
ಬೆಂಗಳೂರು ಬಿಲ್ಲವ ಸಂಘದಲ್ಲಿ ಪದಾಧಿಕಾರಿಯಾಗಿ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿಯಾಗಿದ್ದ ಬೇಬಿ ಕುಂದರ್ ಅನೇಕ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಕ್ರೀಡೆ, ಸಹಕಾರಿ ಸಂಘಟನೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದಾರೆ.