ಪ್ರಮುಖ ಸುದ್ದಿಗಳು

ಕೊರೋನಾ – ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ

ಶಾಲಾ ಮಕ್ಕಳಿಗೆ ಅನಗತ್ಯ ತಪಾಸಣೆ ಬೇಡ – ಸೂಚನೆ

ಜಾಹೀರಾತು

ಜಿಲ್ಲೆಯ ಕೆಲವು ಖಾಸಗೀ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸಾಮಾನ್ಯ ಜ್ವರ ಬಂದರೂ, ಕೊರೋನಾ ಪರೀಕ್ಷೆ ನಡೆಸುವಂತೆ ಶಿಕ್ಷಕರು ಒತ್ತಡ ಹೇರುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಇದನ್ನು ನಿಲ್ಲಿಸಲು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸೂಚಿಸಿದ್ದಾರೆ.

ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋರೋನಾ ರೋಗ ಸಂಬಂಧ ಆರೋಗ್ಯ ಇಲಾಖೆ ಅಧಿಕಾರಿಗಳು, ವೈದ್ಯಕೀಯ ಕಾಲೇಜುಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೊರೋನಾ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಈಗಾಗಲೇ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಅದರಂತೆ ಕ್ರಮ ಕೈಗೊಳ್ಳಲು ಅವರು ಸೂಚಿಸಿದರು. ಪರೀಕ್ಷೆ ಹತ್ತಿರ ಇರುವುದರಿಂದ ಯಾವುದೇ ಅನಗತ್ಯ ತಪಾಸಣೆಯಿಂದ ವಿದ್ಯಾರ್ಥಿಗಳಲ್ಲಿ ಗೊಂದಲ ಮೂಡಿಸದಂತೆ ಅವರು ತಿಳಿಸಿದರು.

ಅಂತಾರಾಷ್ಟ್ರೀಯ ಪ್ರಯಾಣಿಕರು ಆಗಮಿಸುವ ಮಂಗಳೂರು ವಿಮಾನ ನಿಲ್ದಾಣದಲ್ಲಿ ಈಗಾಗಲೇ ಪ್ರಯಾಣಿಕರ ಆರೋಗ್ಯ ತಪಾಸಣೆಗೆ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಸಂಶಯಾಸ್ಪದ ರೋಗಿಗಳನ್ನು ನೇರವಾಗಿ ವೆನ್‍ಲಾಕ್‍ಗೆ ಅಲ್ಲಿಂದಲೇ ಅಂಬ್ಯುಲೆನ್ಸ್ ಮೂಲಕ ಕಳುಹಿಸಿಕೊಡಲು ಜಿಲ್ಲಾಧಿಕಾರಿಗಳು ಸೂಚಿಸಿದರು.

ಕೊರೋನಾ ತಪಾಸಣೆ ಹಾಗೂ ಚಿಕಿತ್ಸೆಯ ಬಗ್ಗೆ ಆಸ್ಪತ್ರೆ ಹಾಗೂ ವೈದ್ಯರು ಸಮಾನವಾದ ಚಿಕಿತ್ಸೆ ಹಾಗೂ ಪರಿಶೀಲನೆ ನಡೆಸಲು ತರಬೇತಿ ನೀಡಲು ಜಿಲ್ಲಾಧಿಕಾರಿಗಳು ಆರೋಗ್ಯ ಇಲಾಖೆಗೆ ನಿರ್ದೇಶಿಸಿದರು. ಅಲ್ಲದೇ, ಜಿಲ್ಲೆಯ ಎಲ್ಲಾ ಆಸ್ಪತ್ರೆಗಳು ವಿವಿಧ ಜ್ವರಗಳ ಪ್ರಕರಣಗಳ ಬಗ್ಗೆ ಆರೋಗ್ಯ ಇಲಾಖೆಗೆ ಪ್ರತೀ ನಿತ್ಯ ವರದಿ ನೀಡಬೇಕೆಂದು ಅವರು ಸೂಚಿಸಿದರು.

ಎನ್‍.ಎಂ.ಪಿ.ಟಿ. ಗೆ ಪ್ರವಾಸಿ ಹಡಗುಗಳಲ್ಲಿ ಆಗಮಿಸುವ ಪ್ರಯಾಣಿಕರ ಆರೋಗ್ಯ ತಪಾಸಣೆಗೆ ಎಲ್ಲ ರೀತಿಯ ಸಿದ್ಧತೆ ಕೈಗೊಳ್ಳಲಲು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ಎನ್.ಎಂ.ಪಿ.ಟಿ. ಅಧಿಕಾರಿಗಳಿಗೆ ನಿರ್ದೇಶಿಸಿದರು.

ಜಿಲ್ಲೆಯಲ್ಲಿ ಮುಖ ಕವಚ(ಮಾಸ್ಕ್)ಕ್ಕೆ ಕೊರತೆಯಾಗಿರುವ ಬಗ್ಗೆ ಮಾಹಿತಿ ಬಂದಿದೆ. ಇವುಗಳ ಕೊರತೆಯಾಗದಂತೆ ಗಮನಹರಿಸಲು ಅವರು ಔಷಧ ನಿಯಂತ್ರಕರಿಗೆ ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ, ಡಿ.ಎಫ್.ಓ. ಕರಿಕಾಲನ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸಿಖಂದರ್ ಪಾಶಾ, ಉಪವಿಭಾಗಾಧಿಕಾರಿ ಮದನ್ ಮೋಹನ್, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕಿ ಗಾಯತ್ರಿ ನಾಯಕ್, ವೈದ್ಯಕೀಯ ಕಾಲೇಜು ಹಾಗೂ ಐ.ಎಂ.ಎ ಪ್ರತಿನಿಧಿಗಳು, ಎನ್.ಎಂ.ಪಿ.ಟಿ. ವಿಮಾನ ನಿಲ್ದಾಣ ಅಧಿಕಾರಿಗಳು ಉಪಸ್ಥಿತರಿದ್ದರು.

www.bantwalnews.com ಸಂಪಾದಕ: ಹರೀಶ ಮಾಂಬಾಡಿ. ದೂರವಾಣಿ 9448548127

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.