ತುಂಬೆ ಗ್ರಾಮದ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸುಮಾರು 500ಕ್ಕೂ ಅಧಿಕ ಮನೆಗಳನ್ನು ಕ್ವಾರಂಟೈನ್ ನಲ್ಲಿಡಲಾಗಿದ್ದು, ಗ್ರಾಮಸ್ಥರು ಅಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರಿಗೆ ಸಹಕಾರ ನೀಡಬೇಕು ಎಂದು ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್ ಮನವಿ ಮಾಡಿದ್ದಾರೆ.
ಸೋಂಕು ದೃಢಪಟ್ಟಿರುವುದು ಖಚಿತಗೊಳ್ಳುತ್ತಿದ್ದಂತೆ ತಹಶೀಲ್ದಾರ್, ಆರೋಗ್ಯ ಇಲಾಖೆಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಎ. 5ರಿಂದ ಆಶಾ ಕಾರ್ಯಕರ್ತೆಯರು ಭೇಟಿ ನೀಡಲಿದ್ದು, ಅವರು ನಮ್ಮ ಆರೋಗ್ಯ ದೃಷ್ಟಿಯಿಂದ ಬರುತ್ತಾರೆ ಎಂಬುದನ್ನು ಮನಸ್ಸಿನಲ್ಲಿಟ್ಟು ಅವರಿಗೆ ತೊಂದರೆ ನೀಡದೆ ಸಹಕರಿಸಬೇಕು. ಸೋಂಕು ದೃಢಪಟ್ಟವರ ಜತೆ ಸಂಪರ್ಕದಲ್ಲಿದ್ದವರು ಸ್ವಯಂಪ್ರೇರಿತರಾಗಿ ಆರೋಗ್ಯ ಇಲಾಖೆಗೆ ಮಾಹಿತಿಯನ್ನು ನೀಡಬೇಕು. ಪ್ರಸ್ತುತ ಕ್ವಾರಂಟೈನ್ ನಲ್ಲಿರುವ ಮನೆಗಳಿಗೆ ಅಗತ್ಯ ವಸ್ತುಗಳನ್ನು ಮನೆ ಮನೆಗೆ ತಲುಪಿಸುವ ವ್ಯವಸ್ಥೆ ಮಾಡಲಾಗುತ್ತದೆ. ಗ್ರಾಮದ ಎಲ್ಲರೂ ಕೂಡ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಗ್ರಾಮಸ್ಥರ ಈಗಾಗಲೇ ಸಹಕಾರ ನೀಡುವ ಭರವಸೆಯನ್ನೂ ನೀಡಿದ್ದಾರೆ ಎಂದು ಶಾಸಕರು ತಿಳಿಸಿದ್ದಾರೆ.
Be the first to comment on "ಅಧಿಕಾರಿಗಳು, ಆಶಾ ಕಾರ್ಯಕರ್ತೆಯರಿಗೆ ಸಹಕಾರ ನೀಡಿ: ಯು.ಟಿ.ಖಾದರ್ ಮನವಿ"