ಫರಂಗಿಪೇಟೆ

ನೇತ್ರಾವತಿಯ ಪ್ರಾಣರಕ್ಷಕರಿಗೆ ಸೇವಾಂಜಲಿಯಿಂದ ದೋಣಿ ಸಾಥ್

ನೇತ್ರಾವತಿ ನದಿಯಲ್ಲಿ ಬಿದ್ದು ಪ್ರಾಣಾಪಾಯದಲ್ಲಿರುವರನ್ನು ರಕ್ಷಿಸಲು ನಾಡದೋಣಿ ಬೇಕು ಎನ್ನುವ ಪಾಣೆಮಂಗಳೂರು ಪರಿಸರದ ಈಜುಗಾರರ ಹಲವು ವರ್ಷದ ಬೇಡಿಕೆ ಕೊನೆಗೂ ಈಡೇರಿದೆ. ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನ, ಏರ್ಯ ಬಾಲಕೃಷ್ಣ ಹೆಗ್ಡೆ ಮತ್ತಿತರರ ಸಹಕಾರದೊಂದಿಗೆ ಅಂದಾಜು 70 ಸಾವಿರ ರೂಪಾಯಿ ಮೌಲ್ಯದ ಹೊಸ ನಾಡ ದೋಣಿಯನ್ನು ಈ ಈಜುಗಾರರಿಗೆ ನೀಡಿದೆ. ಗುರುವಾರ ಬೆಳಿಗ್ಗೆ ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನದ ಸಭಾಭವನದಲ್ಲಿ ಸೇವಾಂಜಲಿ ರಕ್ಷಕ ನಾಮಾಂಕಿತ ದೋಣಿಯ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಜಾಹೀರಾತು

ತಾಲೂಕಿನ ವಿವಿದೆಡೆ ನೇತ್ರಾವತಿ ನದಿಗೆ ಹಾರಿ ಪ್ರಾಣ ಕಳೆದುಕೊಳ್ಳುತ್ತಿರುವ ಪ್ರಕರಣಗಳು ಇತ್ತೀಚಿನ ಕೆಲ ವರ್ಷಗಳಿಂದ ಹೆಚ್ಚಾಗಿದೆ. ನೇತ್ರಾವತಿ ಸೇತುವೆಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಘಟನೆಗಳು ಪದೇ ಪದೇ ಮರುಕಳಿಸುತ್ತಿದೆ. ಅಲ್ಲದೆ ಆಕಸ್ಮಿಕವಾಗಿ ನದಿಗೆ ಬಿದ್ದು ಕೊಚ್ಚಿ ಹೋಗುವಂತಹ ಪ್ರಕರಣಗಳು ಅಲ್ಲಲ್ಲಿ ನಡೆಯುತ್ತಿರುತ್ತದೆ. ಇಂತಹ ಸಂದರ್ಭದಲ್ಲಿ ಸ್ಥಳೀಯ ಈಜುಗಾರರು ನದಿಗೆ ಹಾರಿ ನೀರಲ್ಲಿ ಕೊಚ್ಚಿ ಹೋಗುತ್ತಿರುವರನ್ನು ಸ್ವಯಂ ಪ್ರೇರಿತರಾಗಿ ರಕ್ಷಿಸುವ ಪ್ರಯತ್ನ ಹಲವು ವರ್ಷಗಳಿಂದ ಮಾಡಿಕೊಂಡು ಬರುತ್ತಿದ್ದಾರೆ. ಆದರೆ ಇವರಿಗೆ ದೋಣಿಯ ವ್ಯವಸ್ಥೆಯಾಗಲಿ, ಲೈಪ್ ಜಾಕೆಟ್ ನಂತಹ ಮೂಲ ಭೂತ ಸೌಕರ್ಯಗಳಿಲ್ಲದೆ ಈಜುಗಾರರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಅಪಾಯಕಾರಿ ಸ್ಥಿತಿಯಲ್ಲಿ ಜೀವ ರಕ್ಷಿಸುವ ಪರಿಸ್ಥಿತಿ ಇದೆ. ಕೆಲ ದಿನಗಳ ಹಿಂದೆ ನಿಶಾಂತ್ ಎಂಬ ಯುವಕ ನದಿ ನೀರಿಗೆ ಹಾರಿ ಆತ್ಮಹತ್ಯೆಗೈದಾಗ ಸ್ಥಳೀಯ ಈಜುಗಾರರು ಸೇತುವೆಯ ಮೇಲಿಂದ ನದಿಗೆ ಜಿಗಿದು ಯುವಕನ ಪ್ರಾಣ ರಕ್ಷಿಸಲು ಪ್ರಯತ್ನಿಸಿದ್ದರು. ಈ ಸಂದರ್ಭ ಮಾಧ್ಯಮಗಳ ಮುಂದೆ ತಮ್ಮ ಕಾರ್ಯಕ್ಕೆ ನಾಡದೋಣಿ ಹಾಗೂ ಲೈಫ್ ಜಾಕೆಟ್ ನೀಡುವಂತೆ ಬೇಡಿಕೆ ಮುಂದಿಟ್ಟಿದ್ದರು. ಈ ಬೇಡಿಕೆಗೆ ಸ್ಪಂದಿಸಿದ ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನ ದೋಣಿ ಹಾಗೂ ಲೈಫ್ ಜಾಕೆಟನ್ನು ಕೊಡುಗೆ ನೀಡಿ ಸಾಹಸಿ ಯುವಕರಲ್ಲಿ ಸ್ಪೂರ್ತಿ ತುಂಬುವ ಕಾರ್ಯ ಮಾಡಿದೆ.

ಕಾರ್ಯಕ್ರಮದಲ್ಲಿ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್. ಆರ್. ದೋಣಿ ಹಸ್ತಾಂತರ ಮಾಡಿದರು. ಅವರು ಮಾತನಾಡಿ ಜಾತಿ ಧರ್ಮ ನೋಡದೆ ಈ ಈಜುಗಾರರು ತಮ್ಮ ನಿಸ್ವಾರ್ಥ ಸೇವೆಯನ್ನು ನೀಡುತ್ತಾ ಬಂದಿದ್ದಾರೆ. ಪ್ರತಿ ವರ್ಷ ಮಳೆಗಾಲ ಬಂದಾಗಲೂ ಇವರು ತಾಲೂಕಾಡಳಿತದೊಂದಿಗೆ ಸಹಕರಿಸುತ್ತಿದ್ದಾರೆ. ಇವರ ಸೇವೆ ಮುಂದಿನ ದಿನಗಳಲ್ಲಿಯೂ ತಾಲೂಕಾಡಳಿತ ಹಾಗೂ ಎಲ್ಲರಿಗೂ ಅಗತ್ಯವಿದೆ ಎಂದು ಶುಭ ಹಾರೈಸಿದರು.

ಬಂಟ್ವಾಳ ಗ್ರಾಮಾಂತರ ಠಾಣಾ ಎಸೈ ಪ್ರಸನ್ನ ಅವರು ಲೈಫ್ ಜಾಕೆಟ್ ವಿತರಿಸಿದರು. ಅವರು ಮಾತನಾಡಿ ಯಾವ ಉದ್ದೇಶಕ್ಕೆ ದೋಣಿಯನ್ನು ನೀಡಲಾಗಿದೆಯೋ ಆ ಉದ್ದೇಶಕ್ಕೆ ಬಳಸಿಕೊಳ್ಳಬೇಕು. ಸೇವಾಂಜಲಿ ಪ್ರತಿಷ್ಠಾನ ಮಾನವೀಯ ಕಾರ್ಯಗಳನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿದೆ. ಇದು ಇನ್ನೂ ಮುಂದುವರಿಯಲಿ ಎಂದರು. ಕಾರ್ಯಕ್ರಮದಲ್ಲಿ ಪ್ರಾಣ ರಕ್ಷಕ ಯುವಕರನ್ನು ಸನ್ಮಾನಿಸಲಾಯಿತು.

ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜಾ, ಅಧ್ಯಕ್ಷ ವಜ್ರನಾಭ ಶೆಟ್ಟಿ, ಜಿಲ್ಲಾ ಪಂಚಾಯಿತಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ರೋಟರಿ ಜಿಲ್ಲಾ ಗವರ್ನರ್ ನಾಮಿನಿ ಪ್ರಕಾಶ್ ಕಾರಂತ್, ಅಮ್ಮುಂಜೆಗುತ್ತು ದೇವದಾಸ್ ಹೆಗ್ಡೆ, ಸಾಮಾಜಿಕ ಕಾರ್ಯಕರ್ತ ಪಿ.ಎ. ರಹೀಂ. ಪುದು ಪಂಚಾಯಿತಿ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಸದಾನಂದ ಆಳ್ವ ಕಂಪ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸೇವಾಂಜಲಿಯ ಕೃಷ್ಣ ಕುಮಾರ್ ಪೂಂಜಾ ಸ್ವಾಗತಿಸಿದರು. ಸಾಮಾಜಿಕ ಕಾರ್ಯಕರ್ತ ಪಿ.ಎ. ರಹೀಂ ಪ್ರಾಸ್ತವಿಕವಾಗಿ ಮಾತನಾಡಿದರು. ತೇವು ತಾರಾನಾಥ ಕೊಟ್ಟಾರಿ ವಂದಿಸಿದರು. ಬಿ.ರಾಮಚಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು.

 

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.