ಪ್ರಮುಖ ಸುದ್ದಿಗಳು

ಆಕ್ಸಿಜನ್ ಬೆಡ್ ಹೆಚ್ಚಿಸಿ, ಕಡಿಮೆಯಾದರೆ ಖಾಸಗಿಯಿಂದ ಪಡೆದುಕೊಳ್ಳಿ –ಡಿಸಿಎಂ ಅಶ್ವತ್ಥನಾರಾಯಣ ಸೂಚನೆ

 

ಚಿಕಿತ್ಸೆಗೆ ರೋಗಿಗಳು ಪರದಾಡದಂತೆ ನೋಡಿಕೊಳ್ಳಿ – ಜಿಲ್ಲಾಡಳಿತಕ್ಕೆ ಸೂಚಿಸಿದ ಡಿಸಿಎಂ

ಜಾಹೀರಾತು

ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಸ್ಪತ್ರೆ ಹಾಗೂ ತಾಲ್ಲೂಕು ಹಾಗೂ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಮ್ಲಜನಕಯುಕ್ತ ಬೆಡ್ ಸಂಖ್ಯೆಯನ್ನು ಕೂಡಲೇ ಹೆಚ್ಚಿಸಬೇಕು ಎಂದು ಉಪ ಮುಖ್ಯಮಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.

ಬೆಂಗಳೂರಿನಿಂದಲೇ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಮತ್ತಿತರ ಅಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದ ಅವರು, ಜಿಲ್ಲಾಸ್ಪತ್ರೆ ವೆನ್ಲಾಕ್ ಹಾಗೂ ಎಲ್ಲ ತಾಲ್ಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನೇಟೆಡ್ ಬೆಡ್ ಗಳನ್ನು ಕೂಡಲೇ ಹೆಚ್ವಿಸಬೇಕು. ದಿನೇದಿನೇ ಸೋಂಕಿತರು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ವ್ಯವಸ್ಥೆ ಮಾಡುವುದು ತುರ್ತು ಅಗತ್ಯವಾಗಿದೆ ಎಂದು ತಿಳಿಸಿದರು.

ವೆನ್ಲಾಕ್ ಆಸ್ಪತ್ರೆಯಲ್ಲಿ ಈಗಾಗಲೇ 150 ಹಾಸಿಗೆಗಳಿಗೆ ಆಮ್ಲಜನಕ ವ್ಯವಸ್ಥೆ ಇರುವ ಅಂಶವನ್ನು ಜಿಲ್ಲಾಧಿಕಾರಿಗಳು ಡಿಸಿಎಂ ಗಮನಕ್ಕೆ ತಂದರು. ಸದ್ಯಕ್ಕೆ ಇಷ್ಟು ಪ್ರಮಾಣದ ಆಕ್ಸಿಜನೇಟೆಡ್ ಬೆಡ್ಡುಗಳು ಸಾಕಾಗುವುದಿಲ್ಲ. ಈ ಪ್ರಮಾಣವನ್ನು 450ಕ್ಕೆ ಹೆಚ್ಚಿಸಿ. ಕೂಡಲೇ ಈ ಕುರಿತ ಪ್ರಸ್ತಾವನೆಯನ್ನು ಆರೋಗ್ಯ ಆಯುಕ್ತರಿಗೆ ಕಳಿಸಿ. ನಾನೂ ಅವರ ಜತೆ ಮಾತನಾಡಿ ಆದಷ್ಟು ಬೇಗ ಮಂಜೂರಾತಿ ಕೊಡಿಸುತ್ತೇನೆ. ಇದರ ಜತೆಗೆ ಜಿಲ್ಲೆಯ ಎಲ್ಲ ತಾಲ್ಲೂಕು ಆಸ್ಪತ್ರೆಗಳಲ್ಲೂ ಇಂಥ ಬೆಡ್ಡಿನ ವ್ಯವಸ್ಥೆ ಆಗಲೇಬೇಕು ಎಂದು ಡಿಸಿ ಅವರಿಗೆ ಸೂಚಿಸಿದರು.

ಜಿಲ್ಲೆಯಲ್ಲಿ 8 ವೈದ್ಯಕೀಯ ಕಾಲೇಜುಗಳಿವೆ. ಸಾಕಷ್ಟು ಖಾಸಗಿ ಆಸ್ಪತ್ರೆಗಳಿವೆ. ಹೀಗೆ ಕಾಲೇಜು, ಸರಕಾರಿ-ಖಾಸಗಿ ಆಸ್ಪತ್ರೆ ಸೇರಿ ಎಲ್ಲೆಡೆ ಕನಿಷ್ಟ 8 ಸಾವಿರಕ್ಕೂ ಹೆಚ್ಚು ಬೆಡ್ಡುಗಳಿವೆ. ಕೂಡಲೇ ಇವರಿಂದ ಅವುಗಳನ್ನು ಸರಕಾರದ ವಶಕ್ಕೆ ಪಡೆದುಕೊಳ್ಳಬೇಕು. ತತ್;ಕ್ಷಣವೇ ಆಯಾ ಮ್ಯಾನೇಜುಮೆಂಟುಗಳ ಜತೆ ಮಾತನಾಡಿ ಅಗ್ರಿಮೆಂಟ್ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿಗೆ ಡಿಸಿಎಂ ಸೂಚಿಸಿದ್ದಾರೆ.

ಸರಕಾರಿ, ಖಾಸಗಿ ಯಾವುದೇ ಆಸ್ಪತ್ರೆ ಇರಲಿ, ಸರ್ಕಾರದಿಂದ ಶಿಫಾರಸ್ಸಾದ ರೋಗಿಗಳಿಗೆ ಚಿಕಿತ್ಸೆ ಸಂಪೂರ್ಣ ಉಚಿತ. ಖಾಸಗಿ ಆಸ್ಪತ್ರೆಗಳಿಗೆ ಆ ವೆಚ್ಚವನ್ನು ಸರಕಾರವೇ ಭರಿಸುತ್ತದೆ. ಯಾರೂ ಕೂಡ ರೋಗಿಗಳಿಂದ ಹಣ ಪಡೆಯುವಂತಿಲ್ಲ. ಮುಖ್ಯವಾಗಿ ಗ್ರಾಮೀಣ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ರೋಗಿಗಳನ್ನು ನೇರವಾಗಿ ಚಿಕಿತ್ಸೆ ಲಭ್ಯವಿರುವ ಆಸ್ಪತ್ರೆಗಳಿಗೇ ಕಳಿಸಬೇಕು. ವಿನಾಕಾರಣ ರೋಗಿಯನ್ನು ಸುತ್ತಿಸಬಾರದು. ಆಸ್ಪತ್ರೆಗೆ ಬರುವ ರೋಗಿಗೆ ಕೂಡಲೇ ಬೆಡ್ ಹಂಚಿಕೆಯಾಗಬೇಕು ಎಂದು ಅವರು ಸಲಹೆ ನೀಡಿದರು. ಇದೇ ವೇಳೆ ಜಿಲ್ಲೆಯ ಕೋವಿಡ್ ಕೇರ್ ಸೆಂಟರುಗಳಲ್ಲಿ 250 ಹಾಸಿಗೆಗಳು ಸಿದ್ಧವಾಗಿದ್ದು, ಕೆಲವೇ ದಿನಗಳಲ್ಲಿ 3,800 ಹಾಸಿಗೆಗಳು ಲಭ್ಯವಾಗಲಿವೆ ಎಂಬ ಅಂಶವನ್ನು ಜಿಲ್ಲಾಧಿಕಾರಿಯವರು ಡಿಸಿಎಂ ಗಮನಕ್ಕೆ ತಂದರು.

ಡ್ಯಾಷ್ ಬೋರ್ಡ್ ವ್ಯವಸ್ಥೆಗೆ ಸೂಚನೆ: ಕೋವಿಡ್ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಮಾಡಬೇಕಾದರೆ ಡ್ಯಾಷ್ ಬೋರ್ಡ್ ವ್ಯವಸ್ಥೆಯನ್ನು ಉತ್ತಮವಾಗಿ ಮಾಡಿಕೊಳ್ಳಬೇಕು. ಎಲ್ಲಿ ಬೆಡ್ಡುಗಳಿವೆ? ರೋಗಿಗಳು ಎಷ್ಟಿದ್ದಾರೆ? ಮೂಲಸೌಕರ್ಯಗಳ ವ್ಯವಸ್ಥೆ ಇತ್ಯಾದಿ ಸೇರಿದಂತೆ ಎಲ್ಲವೂ ಈ ಡ್ಯಾಷ್ ಬೋರ್ಡ್ ನಲ್ಲೇ ಸಿಗಬೇಕು. ಯಾವುದೇ ವ್ಯಕ್ತಿಗೆ ಸೋಂಕು ಪಾಸಿಟೀವ್ ಬಂದರೆ ಆ ವಿಷಯವನ್ನು ಜನರಿಗೆ ತಿಳಿಸಿ. ಆಗ ಜನರಲ್ಲಿ ಆತಂಕ, ಗೊಂದಲ ತಪ್ಪುತ್ತದೆ. ಜತೆಯಲ್ಲೇ ನಾನ್ ಕೋವಿಡ್ ರೋಗಿಗಳಿಗೆ ಆದ್ಯತೆಯ ಮೇರೆಗೆ ಚಿಕಿತ್ಸೆ ಸಿಗುವಂತೆ ಆಗಬೇಕು. ಸೆಂಟ್ರಲೈಸ್ಡ್ ರಿಪೋರ್ಟಿಂಗ್ ಸಿಸ್ಟಂ ಅನ್ನು ಅಳವಡಿಸಿಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಹೇಳಿದರು.

ಜಿಲ್ಲೆಯಲ್ಲಿ ಸದ್ಯಕ್ಕೆ 59 ಆಂಬುಲೆನ್ಸುಗಳಿದ್ದು, ಮತ್ತಷ್ಟು ಖರೀದಿಸಿ, ಹೆಚ್ಚುವರಿಯಾಗಿ ಚಾಲಕರನ್ನು ನೇಮಿಸಿಸಕೊಳ್ಳಿ. ಊಟ, ಔಷಧಿ, ಪಿಪಿಎ ಕಿಟ್ಟುಗಳು ಕೊರತೆಯಾಗದಂತೆ ನೋಡಿಕೊಳ್ಳಿ. ಹೋಮ್ ಕೇರ್ ಬಗ್ಗೆ ಮತ್ತಷ್ಟು ಅರಿವು ಮೂಡಿಸಿ ಎಂದು ಅವರು ಸೂಚಿಸಿದರು. ಈಗಾಗಲೇ ಜಿಲ್ಲೆಯಾದ್ಯಂತ 430 ಜನರು ಹೋಮ್ ಕೇರ್ ಗಳಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಅನೇಕರು ತಮ್ಮ ಮನೆಗಳಲ್ಲಿಯೇ ಚಿಕಿತ್ಸೆ ಪಡೆಯುವ ಒಲವು ತೋರುತ್ತಿದ್ದಾರೆಂದು ಡಿಸಿ ಸಿಂಧೂ ಅವರು ಮಾಹಿತಿ ನೀಡಿದರು.

ಇದರ ಜತೆಯಲ್ಲೇ ಸೋಂಕಿತರ ಪರೀಕ್ಷೆಯ ಪ್ರಮಾಣವನ್ನು ಹೆಚ್ಚು ಮಾಡುವಂತೆ ಡಿಸಿಎಂ ಸೂಚಿಸಿದರು. ಸದ್ಯಕ್ಕೆ ದಿನವೊಂದಕ್ಕೆ 750 ಟೆಸ್ಟ್ ಆಗುತ್ತಿದೆ. ಈವರೆಗೂ 38 ಸಾವಿರ ಜನರಿಗೆ ಪರೀಕ್ಷೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts