ಬಂಟ್ವಾಳ

ತಳಮಟ್ಟದ ಸಂಘಟನೆಗೆ ಕಾಂಗ್ರೆಸ್ ಒತ್ತು, ಕಾರ್ಯಕರ್ತರೂ ನಾಯಕರೇ: ಪ್ರತಿನಿಧಿ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಬಂಟ್ವಾಳ: ಕಾಂಗ್ರೆಸ್ ಪಕ್ಷವನ್ನು ಬೂತ್ ಮಟ್ಟದಲ್ಲಿ ಬಲವರ್ಧನೆ ಮಾಡಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಪಾಣೆಮಂಗಳೂರಿನ ಸಾಗರ ಅಡಿಟೋರಿಯಂನಲ್ಲಿ ಕಾಂಗ್ರೆಸ್ ಪಕ್ಷದ ಮೈಸೂರು ವಿಭಾಗೀಯ ಮಟ್ಟದ ಪ್ರತಿನಿಧಿಗಳ ಸಂಕಲ್ಪ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಬಲವರ್ಧನೆಗಾಗಿ ಪಂಚಾಯತ್ ಮಟ್ಟದಲ್ಲಿ, ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸುವ ಕಾರ್ಯ ಅಗತ್ಯವಾಗಿ ನಡೆಯಬೇಕಾಗಿದೆ ಎಂದರು.

ಪಕ್ಷದ ಯಾವುದೇ ನಾಯಕರಾದರೂ ಬೂತ್ ಮಟ್ಟದಿಂದ ಬರಬೇಕು. ಅವರು ತಮ್ಮ ಸ್ಥಳೀಯ ಬೂತ್ ಮಟ್ಟದಲ್ಲಿ ಪಕ್ಷದ ಚಟುವಟಿಕೆಯಲ್ಲಿ ಭಾಗವಹಿಸಬೇಕು. ನಮ್ಮ ಸಿದ್ಧಾಂತವನ್ನು ಪಕ್ಷದ ಗುರಿಯನ್ನು ದೂರ ಇಟ್ಟರೆ ಸೋಲುತ್ತೇವೆ. ಅದಕ್ಕಾಗಿ ಏನೇ ಒತ್ತಡ ಬಂದರೂ ಪಕ್ಷದ ಸಿದ್ಧಾಂತ ನೀತಿ ಬಿಡಬಾರದು ಎಂದರು.

ಜಾಹೀರಾತು

2021 ವರ್ಷವನ್ನು ಹೋರಾಟದ ವರ್ಷ, ಸಂಘಟನೆಯ ವರ್ಷ ಎಂದು ತೀರ್ಮಾನಿಸಿದ್ದೇವೆ. ಸ್ಥಳೀಯ ಮಟ್ಟದಲ್ಲಿ ಇರುವ ಸಮಸ್ಯೆಗಳನ್ನು ಗುರುತಿಸಿಕೊಂಡು ಹೋರಾಟವನ್ನು ರೂಪಿಸುವ ಕೆಲಸವನ್ನು ಪಕ್ಷದ ನಾಯಕರು ಮಾಡಬೇಕು. ಮೂಲಕ ಪಂಚಾಯತ್ ವಾರ್ಡ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಬೇಕು ಎಂದು ಹೇಳಿದರು. ಮೈಸೂರು ವಿಭಾಗೀಯ ಮಟ್ಟದ ಸಮಾವೇಶದಲ್ಲಿ ಮೈಸೂರು, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಯ 475 ಪ್ರತಿನಿಧಿಗಳು ಭಾಗವಹಿಸಿದ್ದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಪ್ರಮುಖ ನಾಯಕರಾದ ಮೋಟಮ್ಮ, ಬಿ.ಎಲ್.ಶಂಕರ್, ತಾರಾದೇವಿ, ವಿ.ಎಸ್.ಉಗ್ರಪ್ಪ, ವಿ.ಆರ್.ಸುದರ್ಶನ್, ಬಿ.ಎಲ್.ಶಂಕರ್, ವೀಣಾ ಅಚ್ಚಯ್ಯ, ಸ್ಥಳೀಯ ನಾಯಕರಾದ ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಯು.ಟಿ.ಖಾದರ್, ವಿನಯ ಕುಮಾರ್ ಸೊರಕೆ, ರಾಕೇಶ್ ಮಲ್ಲಿ ಮೊದಲಾದವರು ಉಪಸ್ಥಿತರಿದ್ದರು.

ಬೆಳಗ್ಗೆ ಸುಮಾರು 12 ಗಂಟೆಗೆ ಕಾರ್ಯಕ್ರಮ ಆರಂಭಗೊಳ್ಳುವುದಕ್ಕೂ ಮುನ್ನ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಧ್ವಜಾರೋಹಣವನ್ನು ಆಡಿಟೋರಿಯಂ ಮುಂಭಾಗ ನೆರವೇರಿಸಿದರು. ಸೇವಾದಳ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪಕ್ಷದ ಉನ್ನತ ನಾಯಕರು ಉಪಸ್ಥಿತರಿದ್ದು, ಧ್ವಜವಂದನೆ ಮಾಡಿದರು. ಬಳಿಕ ಹಾಲ್ ನಲ್ಲಿ ಸುಮಾರು 475ರಷ್ಟು ಪ್ರತಿನಿಧಿಗಳು, 100ರಷ್ಟು ವಿಶೇಷ ಆಹ್ವಾನಿತರು ಸಮಾವೇಶಗೊಂಡರು.

ಮಾಜಿ ಸಚಿವ ಬಿ.ರಮಾನಾಥ ರೈ ಸ್ವಾಗತಿಸಿದರು. ಜಿಪಂ ಸದಸ್ಯರಾದ ಬಿ.ಪದ್ಮಶೇಖರ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್.ಮಹಮ್ಮದ್, ಮಮತಾ ಗಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಸಹಿತ ಪಕ್ಷದ ಪ್ರಮುಖ ನಾಯಕರು, ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.