ಬಂಟ್ವಾಳ

ಬಿ.ಸಿ.ರೋಡ್ ಕೈಕುಂಜೆಯಲ್ಲಿ ಕನ್ನಡ ಭವನ ಉದ್ಘಾಟನೆ, ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆ: ಫೆ.6ರಂದು ಸ್ವಾಗತ ಸಮಿತಿ ಸಭೆ

ಬಂಟ್ವಾಳ: ಫೆ.20, 21ರಂದು ಕನ್ನಡ ಭವನ ಉದ್ಘಾಟನೆ ಮತ್ತು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆಪೂರ್ವಭಾವಿಯಾಗಿ ಇಲ್ಲಿನ ಬಿ.ಸಿ.ರೋಡು ಸಮೀಪದ ಕೈಕುಂಜೆ ಕ್ಷೇತ್ರ ಶಿಕ್ಷಣಾಧಿಕಾರಿ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಫೆ. 6ರಂದು ಮಧ್ಯಾಹ್ನ 2.30 ಗಂಟೆಗೆ ಸ್ವಾಗತ ಸಮತಿ ಸಭೆ ಕರೆಯಲಾಗಿದೆ ಎಂದು ಕಸಾಪ ಅಧ್ಯಕ್ಷ ಕೆ.ಮೋಹನ ರಾವ್ ಹೇಳಿದ್ದಾರೆ.

ಬಿ.ಸಿ.ರೋಡು ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇಲ್ಲಿನ ಕೈಕುಂಜೆ ಮುಖ್ಯ ರಸ್ತೆ ಬಳಿ ರೂ 1 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಕನ್ನಡ ಭವನ ಫೆ 20ರಂದು ಉದ್ಘಾಟನೆಗೊಂಡು ಫೆ.21ರಂದು ತಾಲ್ಲೂಕು ಮಟ್ಟದ 21ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈಗಾಗಲೇ ತಾಲ್ಲೂಕು ಮಟ್ಟದಲ್ಲಿ 375 ಮಂದಿ ಒಳಗೊಂಡ ಸ್ವಾಗತ ಸಮಿತಿ ರಚಿಸಿ ಇವರಿಗೆ ಕನ್ನಡ ಶಾಲು ಸಹಿತ ಆಹ್ವಾನ ಪತ್ರ ರವಾನಿಸಲಾಗಿದೆ ಎಂದರು.

ಜಾಹೀರಾತು

ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ. ಮನು ಬಳಿಗಾರ್ ಸಮ್ಮೇಳನ ಉದ್ಘಾಟಿಸಲಿದ್ದು, ರಾಜ್ಯಮಟ್ಟದ ಪುಸ್ತಕ ಪ್ರದರ್ಶನ ಮತ್ತು ಮಾರಾಟ ಹಾಗೂ ಆಕರ್ಷಕ ಮೆರವಣಿಗೆ ನಡೆಸುವ ಬಗ್ಗೆ ನಿರ್ಧರಿಸಲಾಗಿದೆ. ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಅಧ್ಯಕ್ಷ ಡಾ.ಅಜೆಕ್ಕಳ ಗಿರೀಶ ಭಟ್ ಮುಂದಾಳತ್ವದಲ್ಲಿ ರಾಷ್ಟ್ರೀಯ ಮಟ್ಟದ ವಿಚಾರಗೋಷ್ಠಿ ಆಯೋಜಿಸಲಾಗಿದೆ. ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಸಹಿತ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಂದರು ಮತ್ತು ಮೀನುಗಾರಿಕೆ ಸಚಿವ ಎಸ್.ಅಂಗಾರ, ಮಾಜಿ ಸಚಿವ ಬಿ.ರಮಾನಾಥ ರೈ, ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ ಕುಮಾರ್ ಕಲ್ಕೂರ ಮತ್ತಿತರ ಗಣ್ಯರನ್ನು ಆಹ್ವಾನಿಸಲಾಗಿದೆ. ಸಮ್ಮೇಳದ ಯಶಸ್ವಿಗೆ ಹಲವು ಉಪ ಸಮಿತಿ ರಚಿಸಲಾಗಿದ್ದು, ಸ್ಮರಣ ಸಂಚಿಕೆ ಸಹಿತ ಹಲವು ಕೃತಿ ಬಿಡುಗಡೆಗೆ ಸಿದ್ಧತೆ ನಡೆಸಲಾಗುತ್ತಿದೆ ಎಂದು ಅವರು ವಿವರಿಸಿದರು. ಪ್ರಮುಖರಾದ ಎ.ಸಿ.ಭಂಡಾರಿ, ಸುದರ್ಶನ್ ಜೈನ್, ಕೊಳಕೆ ಗಂಗಾಧರ ಭಟ್, ಜಯಾನಂದ ಪೆರಾಜೆ, ಬಿ.ಎಂ. ಅಬ್ಬಾಸ್ ಆಲಿ, ಸರಪಾಡಿ ಅಶೋಕ ಶೆಟ್ಟಿ, ಮಹಾಬಲೇಶ್ವರ ಹೆಬ್ಬಾರ, ಶಿವಶಂಕರ್, ಡಿ.ಬಿ.ಅಬ್ದುಲ್ ರಹಿಮಾನ್, ಉಮ್ಮರ್ ಮಂಚಿ, ರಮಾನಂದ ನೂಜಿಪಾಡಿ, ಕೃಷ್ಣ ಶರ್ಮ, ಕೆ.ಎನ್.ನಾಗೇಶ ರಾವ್, ಗೀತಾ ಎಸ್.ಕೊಂಕೋಡಿ ಮತ್ತಿತರರು ಇದ್ದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.