ಯಕ್ಷಗಾನ

ಬೊಂಡಾಲ ಪ್ರಶಸ್ತಿಗೆ ಬಾಯಾರು ರಮೇಶ್ ಭಟ್ ಆಯ್ಕೆ, ಫೆಬ್ರವರಿ 19 ರಂದು ಶಂಭೂರಿನಲ್ಲಿ ಪ್ರಶಸ್ತಿ ಪ್ರದಾನ

ಬಂಟ್ವಾಳ:ದಿ.ಬೊಂಡಾಲ ಜನಾರ್ದನ ಶೆಟ್ಟಿ ಮತ್ತು ಅವರ ಪುತ್ರ ದಿ.ಬೊಂಡಾಲ ರಾಮಣ್ಣ ಶೆಟ್ಟರ ಹೆಸರಿನಲ್ಲಿ ನೀಡಲಾಗುವ ಬೊಂಡಾಲ ಪ್ರಶಸ್ತಿ ಗೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ವೇಷಧಾರಿ ರಮೇಶ ಭಟ್ ಬಾಯಾರು ಆಯ್ಕೆಯಾಗಿದ್ದಾರೆ. ಬೊಂಡಾಲ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಟೀಲು ಮೇಳದಲ್ಲಿ ಸೇವೆ ಸಲ್ಲಿಸುತ್ವತಿರುವ ಕಲಾವಿದರಿಗಾಗಿ ಬೊಂಡಾಲ ಸಚ್ಚಿದಾನಂದ ಶೆಟ್ಟಿಯವರು ನೀಡುತ್ತಿರುವ ಈ ವಾರ್ಷಿಕ ಪ್ರಶಸ್ತಿಗೆ ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಮಾಜಿ ಸದಸ್ಯ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಸಂಚಾಲಕರಾಗಿರುವ ಆಯ್ಕೆಸಮಿತಿ 2020 – 21 ನೇ ಸಾಲಿನಲ್ಲಿ ರಮೇಶ ಭಟ್ಟರ ಹೆಸರನ್ನು ಸೂಚಿಸಿದೆ. ಫೆಬ್ರವರಿ 18 ,2021 ರಂದು ರಾತ್ರಿ ಬಂಟ್ವಾಳ ತಾಲ್ಲೂಕು ಶಂಭೂರು ಗ್ರಾಮದ ಬೊಂಡಾಲದಲ್ಲಿ ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿ ಮತ್ತು ಸ್ಥಳೀಯ ಹತ್ತು ಸಮಸ್ತರ ವತಿಯಿಂದ ಕಟೀಲು ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯಿಂದ ‘ಸಮಗ್ರ ರಾವಣ’ ಹಾಗೂ ಮರುದಿನ ಬೊಂಡಾಲ ಚಾರಿಟೇಬಲ್ ಟ್ರಸ್ಟ್ ವತಿಯಿಂದ ‘ಶ್ರೀ ದೇವಿ ಮಹಾತ್ಮೆ’ ಸೇವಾ ಬಯಲಾಟಗಳು ಜರಗಲಿವೆ. ಈ ಸಂದರ್ಭ 19 ರಂದು ಶುಕ್ರವಾರ ಏರ್ಪಡಿಸಲಾದ ‘ಬೊಂಡಾಲ ಜನಾರ್ಧನ ಶೆಟ್ಟಿ ಮತ್ತು ಬೊಂಡಾಲ ರಾಮಣ್ಣ ಶೆಟ್ಟಿ ಸಂಸ್ಮರಣಾ ಸಮಾರಂಭ’ ದಲ್ಲಿ ಕಟೀಲು ಕ್ಷೇತ್ರದ ಅರ್ಚಕರು ಮತ್ತು ವಿವಿಧ ಗಣ್ಯರು ಭಾಗವಹಿಸುವರು. ಭಾಸ್ಕರ ರೈ ಕುಕ್ಕುವಳ್ಳಿ ಸಂಸ್ಮರಣಾ ಭಾಷಣ ಮಾಡುವರು. ಕಟೀಲು ಮೇಳದ ರಂಗಸ್ಥಳದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಕಲಾವಿದ ರಮೇಶ್ ಭಟ್ಟರಿಗೆ ‘ ಬೊಂಡಾಲ ಪ್ರಶಸ್ತಿ ಪ್ರದಾನ ‘ ಮಾಡಲಾಗುವುದು ಎಂದು ಟ್ರಸ್ಟ್ ಅಧ್ಯಕ್ಷ ಮತ್ತು ಉದ್ಯಮಿ ಬೊಂಡಾಲ ಸಚ್ಚಿದಾನಂದ ಶೆಟ್ಟಿ ತಿಳಿಸಿದ್ದಾರೆ.

ಊರಿನ ಪಟೇಲರಾಗಿ, ಜನಪ್ರಿಯ ಶಿಕ್ಷಕರಾಗಿ ಹಾಗೂ ಹಳೆ ತಲೆಮಾರಿನ ಯಕ್ಷಗಾನ ಅರ್ಥಧಾರಿಯಾಗಿ ಪ್ರಸಿದ್ಧರಾದ ದಿ.ಬೊಂಡಾಲ ಜನಾರ್ದನ ಶೆಟ್ಟಿ ಮತ್ತು ಅವರ ಪುತ್ರ ಹಿರಿಯ ಅರ್ಥಧಾರಿ, ನಿವೃತ್ತ ಭೂಮಾಪನ ಅಧಿಕಾರಿ ದಿ.ಬೊಂಡಾಲ ರಾಮಣ್ಣ ಶೆಟ್ಟರ ಹೆಸರಿನಲ್ಲಿ ‘ಬೊಂಡಾಲ ಪ್ರಶಸ್ತಿ’ ಯನ್ನುಬೊಂಡಾಲ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಟೀಲು ಮೇಳದಲ್ಲಿ ಸೇವೆ ಸಲ್ಲಿಸುತ್ವತಿರುವ ಕಲಾವಿದರಿಗಾಗಿ ಬೊಂಡಾಲ ಸಚ್ಚಿದಾನಂದ ಶೆಟ್ಟಿಯವರು ನೀಡಲಾಗುತ್ತಿದೆ. ಕಾಸರಗೋಡು ಬಾಯಾರು ಗ್ರಾಮದ ಸರವು ನಾರಾಯಣ ಭಟ್ಟ ಮತ್ತು ಪಾರ್ವತಿ ಅಮ್ಮ ದಂಪತಿಗೆ 1967 ನವೆಂಬರ್ 17 ರಂದು ಜನಿಸಿದ ರಮೇಶ್ ಭಟ್ ಹತ್ತನೇ ತರಗತಿವರೆಗೆ ಕಲಿತು ಬಳಿಕ ಯಕ್ಷಗಾನ ರಂಗವನ್ನು ಪ್ರವೇಶಿಸಿದರು. ಧರ್ಮಸ್ಥಳ ಯಕ್ಷಗಾನ ಲಲಿತ ಕಲಾ ಕೇಂದ್ರದಲ್ಲಿ ಕೆ.ಗೋವಿಂದ ಭಟ್ ಮತ್ತು ಕರ್ಗಲ್ಲು ವಿಶ್ವೇಶ್ವರ ಭಟ್ಟರಿಂದ ನಾಟ್ಯಾಭ್ಯಾಸ ಮಾಡಿ  1984 ರಲ್ಲಿ ಕುಂಬಳೆ ಮೇಳದಲ್ಲಿ ತಿರುಗಾಟ ಆರಂಭಿಸಿದರು. ಭಾಗವತ ಕುರಿಯ ಗಣಪತಿ ಶಾಸ್ತ್ರಿಯವರ ನಿರ್ದೇಶನದಂತೆ 1985 ರಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಸೇರಿಕೊಂಡ ಅವರು ಕಳೆದ 35 ವರ್ಷಗಳಿಂದ ಅದೇ ಮೇಳದಲ್ಲಿ ಕಲಾ ಸೇವೆ ಮಾಡುತ್ತಿದ್ದಾರೆ. ‘ದೇವಿಮಹಾತ್ಮೆ’ ಯ ಶ್ರೀದೇವಿ ಪಾತ್ರಕ್ಕೆ ಅವರು ಪ್ರಸಿದ್ಧರು.  ‌‌     ಬಹುತೇಕ ಪೌರಾಣಿಕ ಪ್ರಸಂಗಗಳಲ್ಲೇ ಪಾತ್ರ ನಿರ್ವಹಿಸುತ್ತಿರುವ ರಮೇಶ್ ಭಟ್ಟರ ಸೀತೆ,ದಮಯಂತಿ,ಕಯಾದು, ಮೋಹಿನಿ, ದ್ರೌಪದಿ,ಮೀನಾಕ್ಷಿ, ಶಶಿಪ್ರಭೆ, ಯಶೋಮತಿ ಮೊದಲಾದ ಸ್ತ್ರೀಭೂಮಿಕೆಗಳು ಜನಪ್ರಿಯ. ರಕ್ತಬೀಜ, ಅರುಣಾಸುರ, ಹಿರಣ್ಯಕಶಿಪು ಮೊದಲಾದ ದೈತ್ಯ ಪಾತ್ರಗಳಲ್ಲೂ ಅವರು ಪರಿಣತರು. ಮೇಳದ ತಿರುಗಾಟವಲ್ಲದೆ ಮುಂಬಯಿ, ಚೆನ್ನೈ, ಹೈದರಾಬಾದ್, ಸಿಂಗಾಪುರಗಳಲ್ಲೂ  ಕಾರ್ಯಕ್ರಮ ನೀಡಿದ ಅನುಭವ ಅವರಿಗಿದೆ.       ವೃತ್ತಿಪರ ಯಕ್ಷಗಾನ ಕಲಾವಿದರಾಗಿ ಸರಿಸುಮಾರು ಮೂರೂವರೆ ದಶಕಗಳ ಅನುಭವ ಹೊಂದಿರುವ ಬಾಯಾರು ರಮೇಶ ಭಟ್ಟರು ಪತ್ನಿ ಗೀತಾ ಮತ್ತು ಪುತ್ರ ಶ್ರೀರಾಮ ರೊಂದಿಗೆ ಬಾಯಾರು ಗ್ರಾಮದ ಸರವು ಎಂಬಲ್ಲಿ ಸಂತೃಪ್ತಿಯ ಜೀವನ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts