ಶಂಭೂರು ಯಕ್ಷೋತ್ಸವದಲ್ಲಿ ಸರವು ರಮೇಶ್ ಭಟ್ ಬಾಯಾರು ಅವರಿಗೆ ಬೊಂಡಾಲ ಪ್ರಶಸ್ತಿ ಪ್ರದಾನ

ಬಂಟ್ವಾಳ : ಯಕ್ಷಗಾನ ಒಂದು ಅಪೂರ್ವವಾದ ಪ್ರದರ್ಶನ ಕಲೆ. ಕರಾವಳಿಯಲ್ಲಿ ದೇವತಾರಾಧನೆಯ ರೂಪದಲ್ಲಿ ಪ್ರತಿದಿನ ಯಕ್ಷಗಾನ ಸೇವೆ ನಡೆಯುತ್ತದೆ. ಇದು ಪರಂಪರೆಯನ್ನು ಬೆಸೆಯುವ ಮಹತ್ವದ ಕಲೆಯಾಗಿ ಉಳಿದಿದೆ. ಬೊಂಡಾಲ ಕುಟುಂಬಿಕರು ತಲೆಮಾರುಗಳಿಂದ ಹರಕೆ ಬಯಲಾಟಗಳನ್ನು ಏರ್ಪಡಿಸುವ ಮೂಲಕ ಇದನ್ನು ಸತ್ಯವಾಗಿಸಿದ್ದಾರೆ  ಎಂದು ಕಟೀಲು ಕ್ಷೇತ್ರದ ಆನುವಂಶಿಕ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ಹೇಳಿದ್ದಾರೆ.

ಬಂಟ್ವಾಳ ತಾಲೂಕು ಶಂಭೂರಿನಲ್ಲಿ ಜರಗಿದ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಎರಡು ದಿನಗಳ ಯಕ್ಷೋತ್ಸವದಲ್ಲಿ ದ್ವಿತೀಯ ದಿನ ‘ಬೊಂಡಾಲ ಪ್ರಶಸ್ತಿ ಪ್ರದಾನ’ ಮಾಡಿ ಅವರು ಮಾತನಾಡಿದರು.

ಸಮಾರಂಭದಲ್ಲಿ ಕಟೀಲು ಮೇಳದಲ್ಲಿ 35 ವರ್ಷಗಳ ಕಲಾಸೇವೆ ಮಾಡಿದ ಶ್ರೀದೇವಿ ಪಾತ್ರಧಾರಿ ಬಾಯಾರಿನ ಸರವು ರಮೇಶ ಭಟ್ಟರಿಗೆ 2020 – 21 ನೇ ಸಾಲಿನ ಬೊಂಡಾಲ ಜನಾರ್ಧನ ಶೆಟ್ಟಿ ಮತ್ತು ಬೊಂಡಾಲ ರಾಮಣ್ಣ ಶೆಟ್ಟಿ ಸ್ಮಾರಕ ಯಕ್ಷಗಾನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಕಲಾಸಂಘಟಕ ಕೆ.ಲಕ್ಷ್ಮೀನಾರಾಯಣ ರೈ ಹರೇಕಳ ಸನ್ಮಾನ ಪತ್ರ ವಾಚಿಸಿದರು. ಇದೇ ಸಂದರ್ಭದಲ್ಲಿ ಹಿರಿಯ ಯಕ್ಷಗಾನ ಅರ್ಥಧಾರಿಗಳಾದ ಕೀರ್ತಿಶೇಷ ಬೊಂಡಾಲ ಜನಾರ್ದನ ಶೆಟ್ಟಿ ಮತ್ತು ರಾಮಣ್ಣ ಶೆಟ್ಟಿ ಅವರ ಸಂಸ್ಮರಣಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಮಾಜಿ ಸದಸ್ಯ ಹಾಗೂ ಯಕ್ಷಾಂಗಣ ಮಂಗಳೂರು ಕಾರ್ಯಾಧ್ಯಕ್ಷ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಅವರು ಸಂಸ್ಮರಣಾ ಭಾಷಣ ಮಾಡಿದರು. ಶಂಭೂರಿನ ನಿವೃತ್ತ ಶಿಕ್ಷಕ ಎನ್. ಕೃಷ್ಣರಾಜ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು.

ಜಾಹೀರಾತು

ಕಾರ್ಯಕ್ರಮದಂದು ಮುಂಜಾನೆ ನಿಧನರಾದ ತೆಂಕುತಿಟ್ಟು ಯಕ್ಷರಂಗದ ಸಿಡಿಲಮರಿ ,ಸುಪ್ರಸಿದ್ಧ ಪುಂಡು ವೇಷಧಾರಿ ಪುತ್ತೂರು ಶ್ರೀಧರ ಭಂಡಾರಿ ಅವರಿಗೆ ಸಭೆಯಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ಕಳೆದ ನಲವತ್ತೇಳು ವರ್ಷ ಎಡೆಬಿಡದೆ ಬೊಂಡಾಲ ಯಕ್ಷೋತ್ಸವದಲ್ಲಿ ದೇವಿಯ ಪೂಜಾವಿಧಿಗಳನ್ನು ನೆರವೇರಿಸುತ್ತಿದ್ದ ಮೇಳದ ಅರ್ಚಕ ಅನಂತರಾಮ ಭಟ್ ಕಾಂತಾವರ ಅವರ ನಿಧನಕ್ಕೂ ಸಂತಾಪ ಸೂಚಿಸಲಾಯಿತು.

 ಬೊಂಡಾಲ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಪ್ರಾಸ್ತಾವಿಕ ಭಾಷಣ ಮಾಡಿ ಸ್ವಾಗತಿಸಿದರು. ಸಮಿತಿ ಗೌರವಾಧ್ಯಕ್ಷ ಸೀತಾರಾಮ ಶೆಟ್ಟಿ ಬೊಂಡಾಲ ವಂದಿಸಿದರು. ಬೊಂಡಾಲ ದೇವಿಪ್ರಸಾದ ಶೆಟ್ಟಿ, ಚಿತ್ತರಂಜನ ಶೆಟ್ಟಿ ಬೊಂಡಾಲ ಮತ್ತು ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ಕಟೀಲು ಮೇಳದ ಕಲಾವಿದರಿಂದ ಮೊದಲ ದಿನ ಊರಿನ ಹತ್ತು ಸಮಸ್ತರ ಪರವಾಗಿ ‘ಸಮಗ್ರ ರಾವಣ’ ಹಾಗೂ ಮರುದಿನ ಬೊಂಡಾಲ ಚಾರಿಟೇಬಲ್ ಟ್ರಸ್ಟ್ ವತಿಯಿಂದ ‘ ಶ್ರೀದೇವಿ ಮಹಾತ್ಮೆ’  ಹರಿಕೆಯ ಬಯಲಾಟ ಜರಗಿತು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಶಂಭೂರು ಯಕ್ಷೋತ್ಸವದಲ್ಲಿ ಸರವು ರಮೇಶ್ ಭಟ್ ಬಾಯಾರು ಅವರಿಗೆ ಬೊಂಡಾಲ ಪ್ರಶಸ್ತಿ ಪ್ರದಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*