ಬಂಟ್ವಾಳ: ಭಾನುವಾರ ರಾತ್ರಿ ಬಿ.ಸಿ.ರೋಡ್ ನ ಅಜ್ಜಿಬೆಟ್ಟು ತಿರುವಿನಲ್ಲಿ ನಡೆದ ಘಟನೆಯಲ್ಲಿ ಯುವಕನೊಬ್ಬನ ಮೇಲೆ ವಾಹನವೊಂದರಲ್ಲಿ ಬಂದ ಇಬ್ಬರು ಹರಿತವಾದ ಆಯುಧದಿಂದ ದಾಳಿ ಮಾಡಿ ಪರಾರಿಯಾಗಿದ್ದಾರೆ. ಬ್ರಹ್ಮರಕೂಟ್ಲು ಸಮೀಪ ನಿವಾಸಿ, ವಿದೇಶದಲ್ಲಿ ಇಂಜಿನಿಯರ್ ಆಗಿರುವ ಮನೋಜ್ ಹಲ್ಲೆಗೊಳಗಾದವರು. ಕೂಡಲೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯನ್ನು ಖಂಡಿಸಿರುವ ಶಾಸಕ ರಾಜೇಶ್ ನಾಯ್ಕ್, ಆರೋಪಿಗಳನ್ನು ಬಂಧಿಸಲು ಕ್ಷಿಪ್ರ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಎಸ್ಪಿ ಹೃಷಿಕೇಶ್ ಅವರಿಗೆ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಡಿ.ವೈ.ಎಸ್.ಪಿ.ವೆಲೆಂಟೈನ್ ಡಿ.ಸೋಜ, ನಗರ ಪೋಲೀಸ್ ಠಾಣಾ ಇನ್ಸ್ ಪೆಕ್ಟರ್ ಚೆಲುವರಾಜ್ ಭೇಟಿ ನೀಡಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.