ಬಂಟ್ವಾಳ

ಬಂಟ್ವಾಳದಲ್ಲಿ  ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮದಿನಾಚರಣೆ: ಗುರುಗಳ ಚಿಂತನೆ ಕಾರ್ಯರೂಪಕ್ಕೆ – ಸಂಸದ ನಳಿನ್

ಬಂಟ್ವಾಳ: ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ (ರಿ) ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುವರ್ಯರ ೧೬೮ನೇ ಜನ್ಮದಿನಾಚರಣೆ ಸಮಾರಂಭ ಹಿನ್ನೆಲೆಯಲ್ಲಿ ಭಾನುವಾರ ಬಿ.ಸಿ.ರೋಡಿನ ಗಾಣದಪಡ್ಪುವಿನ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ಕಾರ್ಯಕ್ರಮ ನಡೆಯಿತು.

ಈ ಸಂದರ್ಭ ಸಭಾ ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಿ ಮುಖ್ಯ ಅತಿಥಿಯಾಗಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್, ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶಗಳನ್ನು ಪಾಲಿಸುವ ಮೂಲಕ, ಚಿಂತನೆಗಳನ್ನು ಕಾರ್ಯರೂಪಕ್ಕೆ ತರಲಾಗುತ್ತಿದ್ದು, ಅವರಿಗೆ ಗೌರವ ನೀಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದರು. ನಾರಾಯಣಗುರುಗಳು ಜಗತ್ತಿನ ಗುರುಗಳು. ಅವರ ಚಿಂತನೆಗಳು ಚರ್ಚೆಗಷ್ಟೇ ಸೀಮಿತವಾಗದೆ ನಿರಂತರವಾಗಿ ಹೃದಯದಲ್ಲಿರಬೇಕು ಎಂದು ನಳಿನ್ ಹೇಳಿದರು.

ಕನ್ಯಾಡಿ ಧರ್ಮಸ್ಥಳದ ಶ್ರೀರಾಮ ಕ್ಷೇತ್ರದ ಪೀಠಾಧೀಶರಾದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಿ, ಸನಾತನ ಧರ್ಮ ಎಂಬುದು ಬದುಕಿನ ಸಂವಿಧಾನ. ಸತ್ಯದ ಮೌಲ್ಯ ನೀಡಿದವರು ಬ್ರಹ್ಮಶ್ರೀ ನಾರಾಯಣಗುರುಗಳು ಎಂದರು.

ಜಾಹೀರಾತು

ಪ್ರಾಸ್ತಾವಿಕವಾಗಿ ಮಾತನಾಡಿದ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಪೂರ್ವಾಧ್ಯಕ್ಷ ಕೆ. ಹರಿಕೃಷ್ಣ ಬಂಟ್ವಾಳ್, ರಾಜ್ಯ ಸರಕಾರ ನಾರಾಯಣಗುರು ಜಯಂತಿ ಆಚರಣೆ ನಡೆಸಲು ತಾನು ಪ್ರಸ್ತಾವಿಸಿದ್ದನ್ನು ಸ್ಮರಿಸಿ ನಾರಾಯಣಗುರುಗಳು ಒಂದು ಜಾತಿಗೆ ಸೀಮಿತವಾದವರಲ್ಲ, ರಾಜ್ಯಮಟ್ಟದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆಗೆ ಜನಸ್ತೋಮವೇ ಸೇರಿದ್ದು ಇದಕ್ಕೆ ಸಾಕ್ಷಿ ಎಂದರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮುಖ್ಯ ಅತಿಥಿಗಳಾಗಿದ್ದರು. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಎನ್.ಮಹಾಬಲ ಬಂಗೇರ, ಪ್ರಧಾನ ಕಾರ್ಯದರ್ಶಿ ರಮೇಶ್ ಎಂ. ತುಂಬೆ, ಜತೆ ಕಾರ್ಯದರ್ಶಿ  ಆನಂದ ಸಾಲಿಯಾನ್ ಶಂಭೂರು, ಕೋಶಾಧಿಕಾರಿ ಉಮೇಶ್ ಸುವರ್ಣ, ಲೆಕ್ಕಪರಿಶೋಧಕ, ನ್ಯಾಯವಾದಿ ಸತೀಶ್ ಬಿ, ಮಹಿಳಾ ಸಮಿತಿ ಅಧ್ಯಕ್ಷೆ ರೇವತಿ ಬಡಗಬೆಳ್ಳೂರು ಉಪಸ್ಥಿತರಿದ್ದರು. ಈ ಸಂದರ್ಭ ಜಿಪಂ ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ, ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತ ಶೈಲಜಾ ರಾಜೇಶ್, ಬಿ.ಸಿ.ರೋಡ್ ಶ್ರೀ ರಕ್ತೇಶ್ವರಿ ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ಬಿ.ವಿಶ್ವನಾಥ ಅವರನ್ನು ಸನ್ಮಾನಿಸಲಾಯಿತು. ವಿದುಷಿ ಡಾ.ದಾಕ್ಷಾಯಿಣಿ ಕಂದೂರು, ಸ್ವಾತಿ ಕುದ್ಕೋಳಿ ಅವರನ್ನು ಅಭಿನಂದಿಸಲಾಯಿತು.  ದಿನೇಶ ಸುವರ್ಣ ರಾಯಿ ಕಾರ್ಯಕ್ರಮ ನಿರ್ವಹಿಸಿದರು. ಮಧ್ಯಾಹ್ನ ಬಿಲ್ಲವ ಮಹಿಳಾ ಸಮಿತಿ ಮತ್ತು ಯುವವಾಹಿನಿ ಬಂಟ್ವಾಳ ತಾಲೂಕು ಘಟಕ ಸಹಯೋಗದೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮ, ಬೆಳಗ್ಗೆ ಭಜನೆ, ಗುರುಪೂಜೆ, ಮಹಾಪೂಜೆ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. 25 ವರ್ಷಗಳಿಂದ ಯಶಸ್ವಿಯಾಗಿ ಅಧ್ಯಕ್ಷರಾಗಿರುವ ಸೇಸಪ್ಪ ಕೋಟ್ಯಾನ್ ಅವರನ್ನು ಅಭಿನಂದಿಸಲಾಯಿತು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.