ಟೋಲ್ ಪ್ಲಾಝಾ ಸರ್ವೀಸ್ ರಸ್ತೆ: ಹೇಳುವವರು, ಕೇಳುವವರು ಯಾರೂ ಇಲ್ಲವೇ?

ಜಾಹೀರಾತು

 

‘’ಸರ್ವೀಸ್ ರಸ್ತೆಯಾದರೇನು, ಹೋಗುವವರು ಮನುಷ್ಯರಲ್ಲವೇ?’’

ಇದು ಬಿ.ಸಿ.ರೋಡ್ ನಿಂದ ಮಂಗಳೂರಿಗೆ ತೆರಳುವ ಸಂದರ್ಭ ಟೋಲ್ ಪ್ಲಾಝಾಕ್ಕಿಂತ ಮೊದಲು ತಲಪಾಡಿ ಸಮೀಪ ಬಲಕ್ಕೆ ತಿರುಗಿ, ಸರ್ವೀಸ್ ರಸ್ತೆ ಪ್ರವೇಶಿಸುವವರು ಪ್ರತಿನಿತ್ಯ ಕೇಳುವ ಪ್ರಶ್ನೆ. ಆದರೆ ಈ ಪ್ರಶ್ನೆ ಕೇಳಬೇಕಾದವರನ್ನು ತಲುಪುವುದಿಲ್ಲ. ಸಂಬಂಧಪಟ್ಟವರು ಯಾರು ಎಂದು ಯಾರಿಗೂ ಗೊತ್ತಿಲ್ಲ. ಹೀಗಾಗಿ ಹೇಳುವವರು ಕೇಳುವವರು ಯಾರೂ ಇಲ್ಲವೇ ಎಂದು ಪ್ರಶ್ನಿಸುವಂತಾಗಿದೆ. ಕಾರಣ ಇಷ್ಟೇ.. ಸರ್ವೀಸ್ ರಸ್ತೆಯುದ್ದಕ್ಕೂ ಸಣ್ಣಪುಟ್ಟ ಹೊಂಡಗಳಾದರೆ, ಮತ್ತೆ ಮೇಲೆ ಹತ್ತುವ ಜಾಗದಲ್ಲಿ ಆಳವಾದ ಹೊಂಡಗಳು. ‘’ವಾಹನಗಳು ಈ ರಸ್ತೆಯಲ್ಲಿ ಹೋಗಬಾರದು ಎಂದು ಹಾರೆ, ಪಿಕ್ಕಾಸು ಹಿಡಿದು, ಗುಂಡಿ ಮಾಡಿದಂತಿದೆ’’ ಎಂಬುದು ನಿತ್ಯ ಪ್ರಯಾಣಿಕರ ಆಕ್ಷೇಪ.

ಸರ್ವೀಸ್ ರಸ್ತೆಯಲ್ಲಿ ಸಾಗಿದ ವಾಹನಗಳು ಹೆದ್ದಾರಿ ಸೇರುವ ಭಾಗದಲ್ಲಿ ಬೃಹತ್ ಹೊಂಡಗಳಿಂದ ಸಣ್ಣ ಕಾರುಗಳು ಜಖಂಗೊಳ್ಳುವ ಸ್ಥಿತಿ ಇದ್ದರೂ, ರಸ್ತೆ ದುರಸ್ತಿಗೆ ಯಾರೂ ಕ್ರಮವಹಿಸಿಲ್ಲ.

ಹೆದ್ದಾರಿಗೆ ಸಂಪರ್ಕಿಸುವ ಏರು ರಸ್ತೆಯಲ್ಲಿ ಒಂದು ಅಡಿಗೂ ಆಳದ ಬೃಹತ್ ಗುಂಡಿಗಳಿದ್ದು, ಅವುಗಳನ್ನು ಮುಚ್ಚಲು ಕೆಂಪುಕಲ್ಲುಗಳನ್ನು ಬಳಸಲಾಗಿದೆ. ಆದರೆ ಇದೀಗ ಬರೀ ಕಲ್ಲುಗಳು ಉಳಿದುಕೊಂಡಿದ್ದು, ಸಣ್ಣ ಕಾರುಗಳ ತಳ ಭಾಗಕ್ಕೆ ತಾಗಿ ನಿತ್ಯವೂ ವಾಹನಗಳಿಗೆ ಹಾನಿಯಾಗುತ್ತಿದೆ. ಇದರಿಂದ ವಾಹನಗಳು ಜಖಂಗೊಂಡ ಉದಾಹರಣೆಗಳು ಕೂಡ ಸಾಕಷ್ಟಿದೆ. ಈ ಭಾಗದಲ್ಲಿ ವಾಹನ ಸಂಚರಿಸುವ ಸಂದರ್ಭ ಗುಡ್ಡ ಹತ್ತುವ ಅನುಭವವಾಗಿದ್ದು, ಕಾರುಗಳ ಚಕ್ರಗಳು ಸಂಪೂರ್ಣ ಹೊಂಡದಲ್ಲಿ ಮುಳುಗಿ ಹೋಗುತ್ತದೆ

ಸ್ಥಳೀಯ ವಾಹನಗಳು ನಿತ್ಯವೂ ಮೂರ್‍ನಾಲ್ಕು ಬಾರಿ ಸಂಚರಿಸುವ ಸಂದರ್ಭ ಟೋಲ್ ಕಟ್ಟಿ ಸಾಗುವುದು ಹೊರೆಯಾಗುತ್ತದೆ ಎಂಬ ಕಾರಣಕ್ಕೆ ಸರ್ವೀಸ್ ರಸ್ತೆಗಳಿದ್ದು, ಆದರೆ ಈಗ ಇಂತಹ ರಸ್ತೆಯಲ್ಲಿ ಸಾಗುವುದಕ್ಕಿಂತ ಟೋಲ್ ಪಾವತಿಸಿ ಹೋಗುವುದೇ ಉತ್ತಮ ಎಂಬ ಸ್ಥಿತಿ ಇದೆ. ಆದರೆ ಸ್ಥಳೀಯ ವಾಹನಗಳು ಟೋಲ್ ಪಾವತಿಸಿ ಹೋಗುವುದು ಸಾಧ್ಯವಿದೆಯೇ ಎಂಬ ಪ್ರಶ್ನೆಯೂ ಹುಟ್ಟಿಕೊಳ್ಳುತ್ತದೆ.

ಘನ ವಾಹನಗಳು ಸರ್ವೀಸ್ ರಸ್ತೆಯಲ್ಲಿ ಸಾಗಿದ ಪರಿಣಾಮ ಈ ರೀತಿ ಹೊಂಡಗಳು ಉಂಟಾಗಿರುವ ಸಾಧ್ಯತೆ ಇದೆ. ಘನ ವಾಹನಗಳ ಚಕ್ರಗಳು ದೊಡ್ಡದಿರುವ ಕಾರಣದಿಂದ ಹೊಂಡಗಳಿದ್ದರೂ ದೊಡ್ಡ ಹೊಡೆತ ಸಿಗುವುದಿಲ್ಲ. ಆದರೆ ಕಾರು ಸೇರಿದಂತೆ ಇತರ ಸಣ್ಣ ವಾಹನಗಳು ಇದರಿಂದ ಸಾಕಷ್ಟು ತೊಂದರೆ ಅನುಭವಿಸುತ್ತಿವೆ.

ಜಾಹೀರಾತು

About the Author

Harish Mambady
ಕಳೆದ 27 ವರ್ಷಗಳಿಂದ ಪತ್ರಕರ್ತನಾಗಿ ಹಲವು ದೈನಿಕಗಳಲ್ಲಿ ಮಂಗಳೂರು, ಮಣಿಪಾಲ ಮತ್ತು ಬಂಟ್ವಾಳಗಳಲ್ಲಿ ಕೆಲಸ ಮಾಡಿರುವ ಅನುಭವ ಇರುವ ಹರೀಶ ಮಾಂಬಾಡಿ, 2016ರಲ್ಲಿ www.bantwalnews.com ಆರಂಭಿಸಿದ್ದು, ಇದರ ಸಂಪಾದಕರೂ ಆಗಿದ್ದಾರೆ. Harish Mambady - who has experience working as a Journalist in various Print and Digital Media in Dakshina Kannada, Udupi (Mangalore, Manipal, and Bantwal) for the past 27 years, He Started digital Media www.bantwalnews.com in 2016.

Be the first to comment on "ಟೋಲ್ ಪ್ಲಾಝಾ ಸರ್ವೀಸ್ ರಸ್ತೆ: ಹೇಳುವವರು, ಕೇಳುವವರು ಯಾರೂ ಇಲ್ಲವೇ?"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*