ಕಲ್ಲಡ್ಕ

ಸ್ವಸ್ಥ ಭಾರತಕ್ಕಾಗಿ ಸ್ವಚ್ಛ ಪರಿಸರ: ಕಲ್ಲಡ್ಕ ಶ್ರೀರಾಮ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರಸಂಕಿರಣ

ಜಾಹೀರಾತು

ಕಲ್ಲಡ್ಕದ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಸ್ವಸ್ಥ ಭಾರತಕ್ಕಾಗಿ ಸ್ವಚ್ಛ ಪರಿಸರ ವಿಷಯದ ಕುರಿತ ರಾಷ್ಟ್ರೀಯ ವಿಚಾರಸಂಕಿರಣ ಶನಿವಾರ ಜೂನ್ 1ರಂದು ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.

ಬುಧವಾರ ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಕೃತಿಯ ಅವಗಣನೆ ಆಗುತ್ತಿರುವ ಈ ಹೊತ್ತಿನಲ್ಲಿ ಪರಿಸರದ ಮಹತ್ವದ ಕುರಿತು ಚಿಂತನೆ ನಡೆಸುವುದು ಹಾಗೂ ಮುಂದಿನ ಪೀಳಿಗೆಗೆ ಮಹತ್ವವನ್ನು ತಿಳಿಸುವ ುದ್ದೇಶದಿಂದ ವಿಚಾರಸಂಕಿರಣ ಆಯೋಜಿಸಲಾಗಿದೆ. ಭಾರತ ಸ್ವಸ್ಥವಾಗಿರಬೇಕಾದರೆ, ಪಂಚಭೂತಗಳನ್ನು ಸ್ವಚ್ಛವಾಗಿರಿಸಿಕೊಳ್ಳುವ ಹೊಣೆಗಾರಿಕೆ ನಮ್ಮದಾಗಿದ್ದು, ಪರಿಸರವನ್ನು ಶ್ರೀಮಂತಗೊಳಿಸುವ ವೈಚಾರಿಕ ಕಾರ್ಯಕ್ರಮವಿದು ಎಂದು ಹೇಳಿದರು.

ಡಾ. ಪ್ರಭಾಕರ ಭಟ್ ಮಾತನಾಡಿದರು

ಅದಮ್ಯ ಚೇತನ ಫೌಂಡೇಶನ್ ಸಂಸ್ಥಾಪಕಿ ತೇಜಸ್ವಿನಿ ಅನಂತಕುಮಾರ್ ಅವರು ಬೆಳಗ್ಗೆ 9.45ಕ್ಕೆ ಆರಂಭವಾಗುವ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮೊದಲನೇ ಗೋಷ್ಠಿಯಲ್ಲಿ ಪರಿಸರ ಚಿಂತಕ ಶಿವಾನಂದ ಕಳವೆ ಜಲ ಮರ ಜಾಗೃತಿಯ ದೇಸಿ ದಾರಿ ಕುರಿತು ಮಾತನಾಡುವರು. ಎರಡನೇ ಗೋಷ್ಠಿಯಲ್ಲಿ ಸಾಫ್ಟ್ ವೇರ್ ಇಂಜನಿಯರ್ ಹಾಗೂ ಸಾವಯವ ಕೃಷಿಕ ವಸಂತ ಕಜೆ ಅವರು ಮಣ್ಣು ಮತ್ತು ಆಹಾರ ವಿಷಮುಕ್ತವಾಗುವತ್ತ ಕುರಿತು ಮಾತನಾಡಲಿದ್ದಾರೆ. ಬಳಿಕ ಸಮಗ್ರ ತ್ಯಾಜ್ಯ ನಿರ್ವಹಣೆಯ ವಿವಿಧ ಆಯಾಮಗಳ ಕುರಿತು ರಾಜ್ಯ ಪರಿಸರ ಆಘಾತ ಅಂದಾಜೀಕರಣ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಡಾ. ಕೆ.ಆರ್ ಶ್ರೀಹರ್ಷ ಮಾತನಾಡಲಿದ್ದು, ಆರಾಧನೆ ಮತ್ತು ನಂಬಿಕೆಗಳಲ್ಲಿ ಪರಿಸರ ಉಳಿವಿನ ದೃಷ್ಟಿ ಕುರಿತು ಪುತ್ತೂರಿನ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡಾ. ನರೇಂದ್ರ ರೈ ದೇರ್ಲ ಮಾತನಾಡುವರು. ಅಪ್ಲೈಡ್ ಸಿಸ್ಟಮ್ಸ್ ಇಂಡಿಯಾ ಪ್ರೈ.ಲಿ. ಉಪಾಧ್ಯಕ್ಷ ಹಾಗೂ ಪರ್ಯಾವರಣ ಸಂರಕ್ಷಣಾ ಗತಿವಿಧಿ ಪ್ರಾಂತ ಸಂಯೋಜಕ ವೆಂಕಟೇಶ ಸಂಗನಾಳ ಪರಿಸರಸ್ನೇಹಿ ಜೀವನ ಪದ್ಧತಿ ಕುರಿತು ವಿಚಾರ ಮಂಡಿಸಲಿದ್ದಾರೆ ಎಂದರು. ಒಂದು ಸಂಸ್ಥೆಯಿಂದ ನಾಲ್ವರು ವಿದ್ಯಾರ್ಥಿಗಳು ಹಾಗೂ ಓರ್ವ ಪ್ರಾಧ್ಯಾಪಕರು ಭಾಗವಹಿಸಲಿರುವ ಈ ಕಾರ್ಯಕ್ರಮದಲ್ಲಿ ಸಾವಿರದಷ್ಟು ಪ್ರತಿನಿಧಿಗಳು ಸೇರುವ ನಿರೀಕ್ಷೆ ಇದೆ ಎಂದವರು ತಿಳಿಸಿದರು. ಈ ಸಂದರ್ಭ ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ, ಸಂಚಾಲಕ ವಸಂತ ಮಾಧವ, ಪ್ರಿನ್ಸಿಪಾಲ್ ಕೃಷ್ಣಪ್ರಸಾದ ಕಾಯರ್ ಕಟ್ಟೆ ಉಪಸ್ಥಿತರಿದ್ದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.