ಕ್ಯಾಂಪ್ಕೊ ಸಂಸ್ಥೆಯ ಮಾಜಿ ಅಧ್ಯಕ್ಷರಾದ ಎಲ್.ಎನ್. ಕೂಡೂರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶಸ್ತ್ರಚಿಕಿತ್ಸೆಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಕ್ಯಾಂಪ್ಕೊ ಸಂಸ್ಥೆಯಲ್ಲಿದ್ದ ಕೇರಳ ಮತ್ತು ಕರ್ನಾಟಕ ಸರಕಾರದ ಶೇರುಗಳನ್ನು ಯಾವುದೇ ವಿರೋಧಗಳಿಗೆ ಬಗ್ಗದೆ, ಎದೆಗುಂದದೆ ಹಿಂದಿರುಗಿಸಿ ಕ್ಯಾಂಪ್ಕೊ ಸಂಸ್ಥೆ ಸ್ವತಂತ್ರವಾಗಿ ಕಾರ್ಯ ನಿರ್ವಹಿಸುವಂತೆ ಮಾಡಿದ್ದ ಅವರು,ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಸಹಕಾರಿ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ್ದಾರೆ. ವಿಟ್ಲ ಕಸಬಾ ಗ್ರಾಮದ ಕೂಡೂರು ನಿವಾಸಿಯಾಗಿದ್ದ ಎಲ್.ಎನ್.ಕೂಡೂರು (67) ಅವರು ಜೂ.30ರಂದು ಹೃದಯಾಘಾತದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ, ದೇಗುಲದ ಬ್ರಹ್ಮಕಲಶ ಸಂಭ್ರಮದ ರೂವಾರಿಯಾಗಿ ಜನಮೆಚ್ಚುಗೆ ಗಳಿಸಿದ್ದರು. ಸಹಕಾರಿ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಕ್ಯಾಂಪ್ಕೊ ಮಾಜಿ ಅಧ್ಯಕ್ಷರಾಗಿ, ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಮಾಜಿ ಅಧ್ಯಕ್ಷರಾಗಿ, ಶ್ರೀರಾಮಚಂದ್ರಾಪುರ ಮಠದ ಹೊಸನಗರ ಚಂದ್ರಮೌಳೀಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ವಿಟ್ಲ ಬಸವನಗುಡಿ ವಿಟ್ಠಲ್ ಜೇಸೀಸ್ ಎಜುಕೇಶನ್ ಸೊಸೈಟಿ ಅಧ್ಯಕ್ಷರಾಗಿ, ವಿಟ್ಠಲ ಪಪೂ ಕಾಲೇಜು ಮತ್ತು ವಿಟ್ಠಲ ಪ್ರೌಢಶಾಲೆಯನ್ನೊಳಗೊಂಡ ವಿಟ್ಠಲ ವಿದ್ಯಾ ಸಂಘದ ಸಂಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…