ಐದು ಗಂಟೆಯ ಕಾರ್ಯಾಚರಣೆ – ಚಡ್ಡಿ ಗ್ಯಾಂಗ್ ಸದಸ್ಯರು ಅರೆಸ್ಟ್ ಆದದ್ದು ಹೇಗೆ?

ಜಾಹೀರಾತು

ಕೃತ್ಯ ನಡೆದು ಕೇವಲ ಐದು ಗಂಟೆಗಳಲ್ಲಿ ಮಂಗಳೂರನ್ನು ಬೆಚ್ಚಿಬೀಳಿಸಿದ್ದ ಚಡ್ಡಿ ಗ್ಯಾಂಗ್ ಸದಸ್ಯರು ಅರೆಸ್ಟ್ ಆಗಿದ್ದಾರೆ. ಇದರೊಂದಿಗೆ ಮಂಗಳೂರು ನಗರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ನಡೆಸಿದ್ದ ತಂಡವನ್ನು ಪೊಲೀಸರು ಹಿಡಿದಂತಾಗಿದೆ.

ಮಂಗಳವಾರ ಬೆಳಗ್ಗೆ ಏನಾಗಿತ್ತು:

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ನ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ರಂದು ಬೆಳಗ್ಗಿನ ಜಾವ ಸಮಯ ಸುಮಾರು 4೦ ಗಂಟೆಗೆ ಬರ್ಮುಡಾ ಚಡ್ಡಿ ಮತ್ತು ಬನಿಯನ್ ಧರಿಸಿದ ಸುಮಾರು 30 ರಿಂದ 40 ವರ್ಷ ಪ್ರಾಯದ 4 ಜನ ಯುವಕರು (ಚೆಡ್ಡಿ ಗ್ಯಾಂಗ್) ದೇರೆಬೈಲು ಗ್ರಾಮದ ಕೋಟೆಕಣಿ ರಸ್ತೆಯ ವಿಕ್ಟರ್ ಮೆಂಡೋನ್ಸಾ ಎನ್ನುವವರ ಮನೆಯ ಕಿಟಕಿಯ ಗ್ರಿಲ್ ಅನ್ನು ತುಂಡರಿಸಿ ಒಳ ಪ್ರವೇಶಿಸಿ ವಿಕ್ಟರ್ ಮೆಂಡೋನ್ಸಾ ರವರಿಗೆ ಕಬ್ಬಿಣದ ರಾಡಿನಿಂದ ಹಲ್ಲೆ ಮಾಡಿ ತೀವ್ರ ಗಾಯವನ್ನುಂಟು ಮಾಡಿದ್ದರು. ಬಳಿಕ ಅವರ ಪತ್ನಿ  ಪ್ಯಾಟ್ರಿಸಿಯಾ ಮೆಂಡೋನ್ಸ ರವರಿಗೆ ಕೂಡಾ ಸ್ಕ್ರೂ ಡ್ರೈವರ್ ನಿಂದ ಹೊಡೆದು ಬೊಬ್ಬೆ ಹಾಕದಂತೆ ಹಾಗೂ ಫೋನ್ ಮಾಡದಂತೆ ಬೆದರಿಸಿ ಮನೆಯಲ್ಲಿದ್ದ 3 ಮೊಬೈಲ್ ಫೋನ್ ಗಳನ್ನು ನೆಲಕ್ಕೆ ಬಡಿದು ಜಖಂಗೊಳಿಸಿ ರಾಕ್ಷಸೀಯ ಕೃತ್ಯ ಮೆರೆದಿದ್ದರು.

ಕಳವು ಮಾಡಿದ್ದೇನು?

ಕಪಾಟಿನ ಲಾಕರ್ ಒಳಗೆ ಇರಿಸಿದ್ದ ಸುಮಾರು 12 ಲಕ್ಷ ರೂ ಮೌಲ್ಯದ ಚಿನ್ನ ಮತ್ತು ವಜ್ರದ ಆಭರಣ, ಸ್ಯಾಮ್ ಸಂಗ್ ಮೊಬೈಲ್ ಫೋನ್ ಮತ್ತು ರೂ 1 ಲಕ್ಷ ಮೌಲ್ಯದ 10 ಬ್ರಾಂಡೆಡ್ ವಾಚ್ ಗಳು, ರೂ 3೦೦೦/- ನಗದು ಹಣವನ್ನು ಸುಲಿಗೆ ಮಾಡಿ, ಸದ್ರಿ ಮನೆಯ ವೆರಾಂಡದಲ್ಲಿದ್ದ ಕಾರಿನ ಸಮೇತ ಪರಾರಿಯಾಗಿದ್ದು, ಈ ಬಗ್ಗೆ ಪ್ಯಾಟ್ರ್ರಿಸಿಯಾ ಮೆಂಡೊನ್ಸಾ ರವರು ನೀಡಿದ ದೂರಿನಂತೆ ಉರ್ವಾ ಪೊಲೀಸ್ ಠಾಣೆಯಲ್ಲಿ ಬೆಳಗ್ಗೆ 7-೦೦ ಗಂಟೆಗೆ ಅ.ಕ್ರ 69/2024 ಕಲಂ 309(6), 331(7), 311, 305, 3(5) ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿರುತ್ತದೆ.

ಸಿಸಿ ಟಿವಿಯಲ್ಲಿ ಕಂಡುಬಂದದ್ದು ಹೀಗೆ:

ಪ್ರಕರಣ ನಡೆದ ಮಾಹಿತಿ ಬಂದ ಕೂಡಲೇ ಉರ್ವಾ ಠಾಣೆಯ ಪೊಲೀಸ್ ನಿರೀಕ್ಷಕರು ಹಾಗೂ ಸಿಬ್ಬಂದಿಯವರು ತಕ್ಷಣ ಕೃತ್ಯ ನಡೆದ ಸ್ಥಳಕ್ಕೆ ಭೇಟಿ ನೀಡಿ ಆರೋಪಿಗಳು ಕಾರಿನೊಂದಿಗೆ ಪರಾರಿಯಾಗಿದ್ದ ಮಾಹಿತಿಯನ್ನು ನಗರ ನಿಸ್ತಂತು ಕೊಠಡಿಗೆ ನೀಡಿದ್ದು, ಮುಲ್ಕಿ ಬಸ್ಸು ನಿಲ್ದಾಣದ ಸಮೀಪ ನಿಲ್ಲಿಸಿದ್ದ ಕಳವು ಮಾಡಲ್ಪಟ್ಟ ಸದರಿ ಕಾರನ್ನು ಪತ್ತೆಮಾಡಿ ವಶಕ್ಕೆ ಪಡೆದು ಸ್ಥಳದ ಆಸುಪಾಸಿನಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಕೆ.ಎಸ್.ಅರ್.ಟಿ.ಸಿ ಬಸ್ಸಿನಲ್ಲಿ ಗುಮಾನಿ ವ್ಯಕ್ತಿಗಳು ಮಂಗಳೂರು ಕಡೆಗೆ ಪ್ರಯಾಣಿಸಿದ್ದು ಕಂಡು ಬಂದಿತ್ತು.

ಕೆಎಸ್ಸಾರ್ಟಿಸಿ ಸಹಕಾರ

ಕೆ.ಎಸ್.ಅರ್.ಟಿ.ಸಿ ಅಧಿಕಾರಿಗಳನ್ನು ಸಂಪರ್ಕಿಸಿ, ಬೆಳಗಿನ ಜಾವ ಮುಲ್ಕಿ ಕಡೆಯಿಂದ ಮಂಗಳೂರಿಗೆ ಬಂದ ಕೆ.ಎಸ್.ಅರ್.ಟಿ.ಸಿ ಬಸ್ಸುಗಳ ಮಾಹಿತಿ ಪಡೆಯಲಾಗಿ ಬಾಗಲಕೋಟೆ ಕಡೆಯಿಂದ ಮಂಗಳೂರಿಗೆ ಬಂದ ಒಂದು ಕೆ.ಎಸ್.ಅರ್.ಟಿ.ಸಿ ಬಸ್ಸಿನ ನಿರ್ವಾಹಕರು ಅವರ ಬಸ್ಸಿನಲ್ಲಿ ಮುಲ್ಕಿಯಿಂದ 4 ಜನರು ಒಟ್ಟಿಗೆ ಪ್ರಯಾಣಿಸಿದ ಮಾಹಿತಿ ತಿಳಿಸಿ, ಸದರಿ ವ್ಯಕ್ತಿಗಳು ಅವರಲ್ಲಿ ಬೆಂಗಳೂರಿಗೆ ಹೋಗುವ ಬಸ್ಸಿನ ಬಗ್ಗೆ ಮಾಹಿತಿ ಕೇಳಿದ ಬಗ್ಗೆ ತಿಳಿಸಿದ್ದು, ಅವರ ಮಾಹಿತಿಯಂತೆ ಸದರಿ ಸಮಯ ಮಂಗಳೂರಿನಿಂದ ಬೆಂಗಳೂರಿಗೆ ಹೋದ ಬಸ್ಸಿನ ಬಗ್ಗೆ ವಿವರ ಪಡೆದು, ಬಸ್ ನಿರ್ವಾಹಕರನ್ನು ಸಂಪರ್ಕಿಸಿ ಅವರು ತಿಳಿಸಿದ ಮಾಹಿತಿಯಂತೆ ವಿಷಯವನ್ನು ಹಾಸನ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ತಿಳಿಸಲಾಯಿತು.

ಸಕಲೇಶಪುರದಲ್ಲಿ ಗ್ಯಾಂಗ್ ಸದಸ್ಯರು ಸಿಕ್ಕಿಬಿದ್ದರು

ಸಕಲೇಶಪುರ ಡಿವೈಎಸ್ಪಿ, ಸಿಪಿಸಿ ಹಾಗೂ ಸಿಬ್ಬಂದಿಗಳ ತಂಡ ಸಕಲೇಶಪುರ ಸಮೀಪ ಸದರಿ ಬಸ್ಸನ್ನು ತಡೆದು ನಿಲ್ಲಿಸಿ ಅದರಲ್ಲಿ ಪ್ರಯಾಣಿಸುತ್ತಿದ್ದ 4 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿ ಅವರುಗಳು ಕೃತ್ಯವೆಸಗಿದ ಬಗ್ಗೆ ಒಪ್ಪಿದ್ದು, ಅವರ ವಶದಲ್ಲಿದ್ದ ಮಂಗಳೂರು ನಗರದಲ್ಲಿ ಸುಲಿಗೆ ಮಾಡಿದ್ದ ಎಲ್ಲಾ ಚಿನ್ನ ಹಾಗೂ ವಜ್ರದ ಆಭರಣಗಳು, ವಾಚ್ ಗಳು ಹಾಗೂ ಹಣವನ್ನು ಅಮಾನತ್ತು ಪಡಿಸಿ ಉರ್ವಾ ಪೊಲೀಸ್ ಅಧಿಕಾರಿಗಳಿಗೆ ವಶಕ್ಕೆ ನೀಡಿರುತ್ತಾರೆ.

ಪ್ರಕರಣದಲ್ಲಿ ವಶಕ್ಕೆ ಪಡೆದುಕೊಂಡಿರುವ ಆರೋಪಿಗಳ ವಿವರ:

1) ರಾಜು ಸಿಂಗ್ವಾನಿಯ (24 ವರ್ಷ), ತಂದೆ: ಕೋಮಲ್ ಸಿಂಗ್ವಾನಿಯ, ವಾಸ: ವಿಶ್ವನಗರ, ಧನ್ಯವಾದ್ ಪಿ.ಎಸ್, ರಗೋಗರ್ ತಾಲೂಕು, ಗುಣಾ ಜಿಲ್ಲೆ, ಮಧ್ಯ ಪ್ರದೇಶ.

2) ಮಯೂರ್ (30 ವರ್ಷ), ತಂದೆ: ಮನೋಹರ್, ವಾ: ಗುಲಾಬ್ಗಂಜ್, ಭೂಪಾಲ್, ಮಧ್ಯಪ್ರದೇಶ.

3) ಬಾಲಿ (22 ವರ್ಷ), ತಂದೆ: ವಿಷ್ಣು, ವಾಸ: ಮಾಧವ್ಗಡ್, ಆಶೋಕನಗರ, ಮಧ್ಯ ಪ್ರದೇಶ

4) ವಿಕ್ಕಿ (21 ವರ್ಷ), ತಂದೆ: ವಿಕ್ರಂ, ವಾಸ: ಜಗನ್ಪುರ್ ಚಾಕ್, ಕೋತ್ವಾಲಿ ಪಿ.ಎಸ್, ಗುಣಾ ಜಿಲ್ಲೆ, ಮಧ್ಯ ಪ್ರದೇಶ.

ಈ ಮಿಂಚಿನ ಕಾರ್ಯಾಚರಣೆಯನ್ನು ಕೃತ್ಯ ನಡೆದ ಕೇವಲ 5 ಗಂಟೆ ಗಳ ಒಳಗೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದು ಈ ಕಾರ್ಯಾಚರಣೆಯನ್ನು ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರಾದ ಶ್ರೀ ಅನುಪಮ್ ಅಗ್ರವಾಲ್ ಐಪಿಎಸ್ ರವರ ಮಾರ್ಗದರ್ಶನದಂತೆ, ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಶ್ರೀ ಸಿದ್ದಾರ್ಥ್ ಗೋಯಲ್ ಐಪಿಎಸ್ ಹಾಗೂ ಅಪರಾಧ ವಿಭಾಗದ ಡಿಸಿಪಿ ಶ್ರೀ.ಬಿ.ಪಿ ದಿನೇಶ್ ಕುಮಾರ್ ರವರ ನಿರ್ದೇಶನದಂತೆ, ಮಂಗಳೂರು ಕೇಂದ್ರ ವಿಭಾಗದ ಎಸಿಪಿ ಶ್ರೀ ಪ್ರತಾಪ್ ಸಿಂಗ್ ತೋರಟ್, ಉರ್ವಾ ಠಾಣೆಯ ನಿರೀಕ್ಷಕರಾದ ಶ್ರೀಮತಿ ಭಾರತೀ ಜಿ. ರವರ ನೇತೃತ್ವದಲ್ಲಿ ಉರ್ವಾ ಪೊಲೀಸ್ ಠಾಣೆಯ ಎಸ್.ಐ ಹರೀಶ ಹೆಚ್.ವಿ , ಅನಿತಾ ಹೆಚ್.ಬಿ, ಎ.ಎಸ್.ಐ ವಿನಯ್ ಕುಮಾರ್, ವೇಣುಗೋಪಾಲ್ ಸಿಬ್ಬಂದಿಗಳಾದ ಪುಷ್ಪರಾಜ್, ಪ್ರಮೋದ್, ನಾರಾಯಣ, ಸತೀಶ್, ಪೀಟರ್, ರಾಮಚಂದ್ರ ವೆಂಕಟೇಶ್, ಅಭಿಷೇಕ್, ಪ್ರಜ್ವಲ್ ರವರು ನಡೆಸಿರುತ್ತಾರೆ. ಈ ಶೀಘ್ರ ಪತ್ತೆ ಕಾರ್ಯಕ್ಕೆ ಹಾಸನ ಜಿಲ್ಲೆಯ ಪೊಲೀಸ್ ಅಧೀಕ್ಷಕರು ಶ್ರೀಮತಿ ಮಹಮ್ಮದ್ ಸುಜೀತಾ ಐ.ಪಿ.ಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ತಮ್ಮಯ್ಯ ಎಮ್ .ಕೆ , ಸಕಲೇಶಪುರ ಉಪ ವಿಭಾಗದ ಡಿವೈಎಸ್ಪಿ ಶ್ರೀ ಪ್ರಮೋದ್ ಬಿ., ಸಕಲೇಶಪುರ ನಗರ ಪಿ.ಎಸ್.ಐ ಶ್ರೀ ಪ್ರಮೋದ್ ಕೆ.ಎಸ್ ಮತ್ತು ಗ್ರಾಮಾಂತರ ಠಾಣೆಯ ಪಿ.ಎಸ್.ಐ ಸದಾಶಿವ ತಿಪ್ಪರೆಡ್ಡಿ, ಸಿಬ್ಬಂದಿಗಳಾದ ಖಾದರ್ ಆಲಿ, ಸುನಿಲ್, ಜಗದೀಶ್, ಯೋಗಿಶ್, ಮೂಲ್ಕಿ ಪೊಲೀಸ್ ಠಾಣೆಯ ಪಿ.ಎಸ್.ಐ ಶ್ರೀ ವಿನಾಯಕ್ ಬಾವಿಕಟ್ಟೆ, ಸಿಬ್ಬಂದಿಗಳಾದ ಹರೀಶೇಖರ್ ಎ.ಎಸ್.ಐ ಕಿಶೋರ್ ಕೋಟ್ಯಾನ್ , ಚಂದ್ರಶೇಖರ್ ಹಾಗೂ ಶಶಿಧರ್ರವರು ಸಹಕರಿಸಿರುತ್ತಾರೆ

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಐದು ಗಂಟೆಯ ಕಾರ್ಯಾಚರಣೆ – ಚಡ್ಡಿ ಗ್ಯಾಂಗ್ ಸದಸ್ಯರು ಅರೆಸ್ಟ್ ಆದದ್ದು ಹೇಗೆ?"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*