https://www.opticworld.net/
ಮಂಗಳೂರು: ಮೀನು ಸಾಗಾಟದ ಟೆಂಪೋ ವಾಹನದಲ್ಲಿ ಹಾಗೂ ಮಾರುತಿ ಅಲ್ಟೋ ಕಾರಿನಲ್ಲಿ ಬರೋಬ್ಬರಿ 120ಕೆಜಿ ನಿಷೇಧಿತ ಮಾದಕದ್ರವ್ಯ ಗಾಂಜಾ ಸಾಗಾಟ ಮಾಡುತ್ತಿದ್ದುದನ್ನು ಪತ್ತೆಹಚ್ಚಿ ಮಂಗಳೂರು ಸಿಸಿಬಿ ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.
ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮಂಗಲ್ಪಾಡಿ, ಉಪ್ಪಳ ನಿವಾಸಿ ಮೊಯ್ದಿನ್ ಶಬ್ಬಿರ್(38), ಮಹಾರಾಷ್ಟ್ರ, ಥಾಣೆ, ಕಲ್ಯಾಣ, ಡೊಂಬಿವಲಿ(ವೆಸ್ಟ್), ನಿವಾಸಿ ಮಹೇಶ್ ದ್ವಾರಿಕಾನಾಥ ಪಾಂಡೆ(30), ಕೇರಳ ರಾಜ್ಯದ ಅಲಪ್ಪುಯ ಜಿಲ್ಲೆಯ ಚೆರ್ತಲಾ ಚಾರುಮಂಗಳಂ ನಿವಾಸಿ ಅಜಯ್ ಕೃಷ್ಣ(33), ಹರಿಯಾಣ ರಾಜ್ಯದ ಜಿಂದ್ ಜಿಲ್ಲೆಯ ನರವಾನ ತಾಲೂಕು, ಅಮರಗಡ್ ನಿವಾಸಿ ಜೀವನ್ ಸಿಂಗ್(35) ಬಂಧಿತ ಆರೋಪಿ.
ಫೆ.17ರಂದು ಆಂಧ್ರಪ್ರದೇಶದಿಂದ ಮಂಗಳೂರು ಹಾಗೂ ಕೇರಳ ರಾಜ್ಯಕ್ಕೆ ಟಾಟಾ 407ಗೂಡ್ಸ್ ಟೆಂಪೋ ವಾಹನದಲ್ಲಿ ಹಾಗೂ ಮಾರುತಿ ಅಲ್ಟೋ ಕಾರಿನಲ್ಲಿ ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಉಳ್ಳಾಲ ತಾಲೂಕಿನ ಕುರ್ನಾಡು ಗ್ರಾಮದ ಮಿತ್ತಕೋಡಿ ಎಂಬಲ್ಲಿ 2ವಾಹನಗಳನ್ನು ಪತ್ತೆ ಹಚ್ಚಿದ್ದಾರೆ. ವಾಹನಗಳಲ್ಲಿದ್ದ 35ಲಕ್ಷ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ವಶಪಡಿಸಿಕೊಂಡ ಸೊತ್ತಿನ ಮೌಲ್ಯ 51,00,000 ರೂ. ಆಗಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಪತ್ತೆ ಕಾರ್ಯವನ್ನು ಪೊಲೀಸ್ ಆಯುಕ್ತರಾದ ಅನುಪಮ್ ಅಗ್ರವಾಲ್ ಮಾರ್ಗದರ್ಶನದಲ್ಲಿ, ಉಪ ಪೊಲೀಸ್ ಆಯುಕ್ತರಾದ ಸಿದ್ದಾರ್ಥ ಗೋಯಲ್, ಕೆ. ರವಿಶಂಕರ್ ನಿರ್ದೇಶನದಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ ರವರ ನೇತೃತ್ವದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ರಫೀಕ್ ಕೆ ಎಂ. ಪಿಎಸ್ಐ ಶರಣಪ್ಪ ಭಂಡಾರಿ ಹಾಗೂ ಎಎಸ್ಐ ಯವರಾದ ಮೋಹನ್ ಕೆ ವಿ. ರಾಮ ಪೂಜಾರಿ, ಸುಜನ್ ಶೆಟ್ಟಿ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.