ಬಂಟ್ವಾಳ: ಕ್ರೀಡಾಭಾರತಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಹನುಮಾನ್ ಜಯಂತಿ ಪ್ರಯುಕ್ತ ಸಂಸದರ ಪ್ರದೇಶಾಭಿವೃದ್ಧಿ ನಿಧಿ ಹಾಘೂ ಎನ್.ಎಂ.ಪಿ.ಎಯ ಸಿ.ಎಸ್.ಆರ್. ನಿಧಿಯಿಂದ ದಕ ಜಿಲ್ಲೆಯ ಪ್ರತಿ ತಾಲೂಕುಗಳಿಗೆ ಕೊಡಮಾಡುವ ಕಬಡ್ಡಿ ಮ್ಯಾಟ್ ವಿತರಣಾ ಸಮಾರಂಭ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಏ.13ರ ಭಾನುವಾರ ನಡೆಯಿತು.
ಕಾರ್ಯಕ್ರಮವನ್ನು ಜ್ಯೋತಿ ಪ್ರಜ್ವಲಿಸಿ ಉದ್ಘಾಟಿಸಿ ಮಾತನಾಡಿದ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ, ಕಳೆದ ಹತ್ತು ವರ್ಷಗಳಲ್ಲಿ ಭಾರತದಲ್ಲಿ ಕ್ರೀಡೆಯನ್ನು ನೋಡುವ ದೃಷ್ಟಿ ಬದಲಾಗಿದೆ. ಖೇಲೋ ಇಂಡಿಯಾ ಮೂಲಕ ಕ್ರೀಡಾಕ್ಷೇತ್ರಕ್ಕೆ ಪ್ರೋತ್ಸಾಹ ನೀಡುವುದರ ಜೊತೆಗೆ ಮೂಲಸೌಕರ್ಯವನ್ನು ಒದಗಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ದೇಶದಲ್ಲಿ ಕ್ರೀಡಾಕ್ರಾಂತಿ ನಡೆದಿದ್ದು, ಕ್ರೀಡಾಪಟುಗಳನ್ನು ತಯಾರು ಮಾಡುವ ಕೆಲಸ ಮೂಲದಿಂದಲೇ ನಡೆಯಬೇಕು ಎಂಬ ದೃಷ್ಟಿಯಿಂದ ತಾಲೂಕುಗಳಲ್ಲಿ ಕ್ರಿಡಾಂಗಣವೇ ಮೊದಲಾದ ವ್ಯವಸ್ಥೆಗಳನ್ನು ಕಲ್ಪಿಸಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಮುಂದಾಗಿದೆ. ಒಲಂಪಿಕ್ಸ್ ನಲ್ಲಿ ಕಬಡ್ಡಿ ಸೇರ್ಪಡೆಯಾದರೆ ಭಾರತಕ್ಕೆ ಉತ್ತಮ ಅವಕಾಶವಿದ್ದು, ಅದಕ್ಕೆ ನಮ್ಮೂರಿನ ಕ್ರೀಡಾಪಟುಗಳು ತಯಾರಾಗಬೇಕು ಎಂಬ ಹಿನ್ನೆಲೆಯಲ್ಲಿ ನೆರವು ನೀಡಲಾಗುತ್ತಿದೆ. ಕರಾವಳಿಯಲ್ಲಿ ಕ್ರೀಡೆಗೆ ಉತ್ತೇಜನ ನೀಡಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಕ್ರೀಡಾಪಟುಗಳಿಗೆ ಅವರು ಶುಭ ಹಾರೈಸಿ, ನೆರವು ನೀಡಿದ ನವಮಂಗಳೂರು ಬಂದರು ಮಂಡಳಿಗೆ ಕೃತಜ್ಞತೆ ಸಲ್ಲಿಸಿದರು. ಕ್ರೀಡಾಪಟುಗಳಿಗೆ ಬಂದರು ಮಂಡಳಿ ಸಹಿತ ಸರಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗಾವಕಾಶ ನೀಡಬೇಕು ಎಂದವರು ತಿಳಿಸಿದರು.
ಈ ಸಂದರ್ಭ ಮಾತನಾಡಿದ ನವಮಂಗಳೂರು ಬಂದರು ಮಂಡಳಿ ಅಧ್ಯಕ್ಷ ಡಾ. ವೆಂಕಟರಮಣ ಅಕ್ಕರಾಜು ಸಂಸದರ ಸೂಚನೆಗೆ ಸ್ಪಂದಿಸಿ, ಬಂದರು ಮಂಡಳಿ ಕ್ರೀಡಾಪಟುಗಳ ಉತ್ತೇಜನಕ್ಕೆ ನೆರವು ನೀಡುವುದಾಗಿ ಹಾಗೂ ಸದಾ ಬೆಂಬಲ ನೀಡುವುದಾಗಿ ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ, ಇಂದು ಕರಾವಳಿಯ ಕ್ರೀಡಾಪಟುಗಳಿಗೆ ಸಂಘ, ಸಂಸ್ಥೆಗಳ ನೆರವಿನ ಜೊತೆಗೆ ಶಾಸಕನ ನೆಲೆಯಲ್ಲಿ ತನ್ನ ಕ್ಷೇತ್ರದಲ್ಲಿ ಪ್ರೋತ್ಸಾಹ ನೀಡುವ ಕಾರ್ಯವನ್ನು ಮಾಡಿದ್ದು, ಗ್ರಾಮೀಣ ಮಟ್ಟದ ಕ್ರೀಡಾಪಟುಗಳು ಉತ್ತಮ ಸಾಧನೆ ತೋರಲೆಂದು ಶುಭ ಹಾರೈಸಿದರು.
ಮಾಜಿ ಸಚಿವ ಹಾಗೂ ಕ್ರೀಡಾಭಾರತಿ ರಾಜ್ಯ ಉಪಾಧ್ಯಕ್ಷ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಮೂಡುಬಿದಿರೆ ಶಾಸಕ ವೈ.ಉಮಾನಾಥ ಕೋಟ್ಯಾನ್, ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ದ.ಕ.ಜಿಲ್ಲೆ ಕ್ರೀಡಾ ಇಲಾಖೆ ಮತ್ತು ಯುವಸಬಲೀಕರಣ ಉಪನಿರ್ದೇಶಕ ಪ್ರದೀಪ್ ಡಿಸೋಜ, ಖ್ಯಾತ ಪ್ರೋಕಬಡ್ಡಿ ಆಟಗಾರ ಪ್ರಶಾಂತ್ ರೈ, ಕ್ರೀಡಾಭಾರತಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಭೋಜರಾಜ್ ಕಲ್ಲಡ್ಕ, ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ರಾಜ್ಯ ಚೇರ್ಮನ್ ಹಾಘೂ ಜಿಲ್ಲಾಧ್ಯಕ್ಷ ರಾಕೇಶ್ ಮಲ್ಲಿ, ಕ್ರೀಡಾಭಾರತಿ ದ.ಕ. ಜಿಲ್ಲಾಧ್ಯಕ್ಷ ಕಾರಿಯಪ್ಪ ರೈ ಕೆ, ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಕಾರ್ಯಾಧ್ಯಕ್ಷ ಚಂದ್ರಹಾಸ ಶೆಟ್ಟಿ, ಬಿಜೆಪಿ ಬಂಟ್ವಾಳ ಕ್ಷೇತ್ರಾಧ್ಯಕ್ಷ ಆರ್. ಚೆನ್ನಪ್ಪ ಕೋಟ್ಯಾನ್, ಪ್ರಮುಖರಾದ ರವೀಂದ್ರ ಶೆಟ್ಟಿ ಉಳಿದೊಟ್ಟು ಮಾಜಿ ರಾಷ್ಟ್ರೀಯ ಕಬಡ್ಡಿ ಆಟಗಾರ ಗೋಪಿನಾಥ್ ಕಾಪಿಕಾಡ್, ಬಂಟ್ವಾಳ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಗೌರವಾಧ್ಯಕ್ಷ ಬೇಬಿ ಕುಂದರ್, ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಗೌರವ ಸಲಹೆಗಾರ ಪುರುಷೋತ್ತಮ ಪೂಜಾರಿ, ರತನ್ ಶೆಟ್ಟಿ, ಮೋಹಿತ್ ಸುವರ್ಣ, ಕಾರ್ಯದರ್ಗಶಿ ಚಂದ್ರಶೇಖರ ಕರ್ಣ, ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಅಧ್ಯಕ್ಷ ಪುಷ್ಪರಾಜ್ ಚೌಟ ಮಾಣಿ, ಮಂಗಳೂರು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಲಿಲ್ಲಿ ಪಾಯ್ಸ್, ಕ್ರೀಡಾಭಾರತಿ ಕಾರ್ಯದರ್ಶಿ ಡಾ. ಕರುಣಾಕರ ಶೆಟ್ಟಿ ಉಪಸ್ಥಿತರಿದ್ದರು. ಕ್ರೀಡಾಭಾರತಿ ಕಾರ್ಯದರ್ಶಿ ಹರೀಶ್ ರೈ ಬಿ. ಕಾರ್ಯಕ್ರಮ ನಿರ್ವಹಿಸಿದರು.