
PIC SOURCE: INTERNET
ದಕ್ಷಿಣ ಕನ್ನಡ ಜಿಲ್ಲಾ ಪ್ರಾಣಿ ದಯಾ ಸಂಘದ ಸಭೆ ಮಂಗಳವಾರ ಜಿಲ್ಲಾಧಿಕಾರಿ ದರ್ಶನ್ ಎಚ್ ವಿ ಅಧ್ಯಕ್ಷತೆಯಲ್ಲಿ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು.
ಪ್ರಾಣಿ ಹಿಂಸೆ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾರಾಟ ಮಳಿಗೆಯನ್ನು ನೋಂದಾವಣಿ ಮಾಡಿಕೊಳ್ಳಬೇಕು. ನಿಗದಿತ ಕಾಲಮಿತಿಯೊಳಗೆ ನೋಂದಣಿ ಪಡೆಯದ ಮಾಲೀಕರ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಳ್ಳಲು ಸೂಚಿಸಿದರು. ಪ್ರಾಣಿಗಳ ರಕ್ಷಣೆ ಒಂದು ಮಹತ್ವದ ಕಾರ್ಯವಾಗಿದ್ದು, ಜಿಲ್ಲೆಯಲ್ಲಿ ಪ್ರಾಣಿಗಳ ಮೇಲಾಗುವ ದೌರ್ಜನ್ಯವನ್ನು ತಡೆಗಟ್ಟಿ ಅವುಗಳನ್ನು ರಕ್ಷಿಸಬೇಕು. ಪ್ರಾಣಿಗಳ ಮೇಲೆ ಕ್ರೌರ್ಯ ನಡೆಸುವುದು ಕಂಡು ಬಂದರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.
ಜಿಲ್ಲೆಯ ವ್ಯಾಪ್ತಿಯಲ್ಲಿರುವ ನಿರಾಶ್ರಿತ ಪ್ರಾಣಿಗಳಿಗೆ ಅಗತ್ಯ ಶುಶ್ರೂಷೆ ಕೊಡುವ ನಿಟ್ಟಿನಲ್ಲಿ ಮಂಗಳೂರು ತಾಲೂಕಿನ ಬೊಂಡಂತಿಲ ಗ್ರಾಮದಲ್ಲಿ ಪ್ರಾಣಿ ಮಿತ್ರ ಆಸ್ಪತ್ರೆ ತೆರೆಯುವ ಯೋಜನೆ ಅನುಷ್ಠಾನದ ಕುರಿತು ಹಾಗೂ ರಸ್ತೆ ಅಪಘಾತಗಳಲ್ಲಿ ಇತರೆ ಕಾರಣಗಳಿಂದ ಸತ್ತ ಪ್ರಾಣಿಗಳನ್ನು ಯಾರೂ ಸಹ ಮುಟ್ಟುವುದಿಲ್ಲ. ಅವುಗಳ ಕಳೇಬರ ಅಲ್ಲಿಯೇ ಕೊಳೆಯುತ್ತಿರುತ್ತವೆ. ಪ್ರಾಣಿಗಳ ಅಂತ್ಯಸಂಸ್ಕಾರಕ್ಕೆ ಸ್ಮಶಾನ ಸೌಲಭ್ಯದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಮೂಕಪ್ರಾಣಿಗಳ ಬಗ್ಗೆ ಅನುಕಂಪ ಮತ್ತು ಮಾನವೀಯತೆಯ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸಾರ್ವಜನಿಕರಿಗೆ ಮತ್ತು ಶಾಲಾ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮದ ಮೂಲಕ ಮಾಹಿತಿ ನೀಡಲಾಗುತ್ತಿದೆ ಹಾಗೂ ರಾಜ್ಯ ಮತ್ತು ಜಿಲ್ಲಾ ಮಟ್ಟದ ಸಂಬಂಧಪಟ್ಟ ಇಲಾಖೆಗಳೊಂದಿಗೆ ಕೈಜೋಡಿಸಿ ಪ್ರಾಣಿ ಕಲ್ಯಾಣ ಮಂಡಳಿಯಿಂದ ಸ್ಥಾಪಿಸಲ್ಪಟ್ಟ ಪ್ರಾಣಿ ಕಲ್ಯಾಣ ಕಾನೂನು ಜಾರಿಯ ಬಗ್ಗೆ ಅರಿವು ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಮಾಹಿತಿ ನೀಡಿದರು.ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ, ಎಸಿಪಿ ಗೀತಾ ಕುಲಕರ್ಣಿ, ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ಸಮಿತಿಯ ಸದಸ್ಯೆ ಸುಮ ಆರ್ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.
Be the first to comment on "Dakshina Kannada: ಪೆಟ್ ಶಾಪ್ ಗಳಿಗೆ ನೋಂದಣಿ ಕಡ್ಡಾಯ, ಪ್ರಾಣಿಮಿತ್ರ ಆಸ್ಪತ್ರೆ ಕುರಿತು ಚರ್ಚೆ"