Mangalore: ಶಾಲಾ ಕಾಲೇಜುಗಳಲ್ಲಿ ಮಾದಕ ವ್ಯಸನದ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಸೂಚನೆ

ಶಾಲಾ-ಕಾಲೇಜುಗಳ ಮಕ್ಕಳು ಮಾದಕ ದ್ರವ್ಯಗಳಿಗೆ ಬಲಿಯಾಗುವ ಸಾಧ್ಯತೆ ಹೆಚ್ಚಾಗಿರುವುದರಿಂದ ಮಕ್ಕಳಿಗೆ ಮುಂದೆ ಸಂಭವಿಸುವ  ಅನಾಹುತಗಳ ಅರಿವು ಮೂಡಿಸಲು ಅಧಿಕಾರಿಗಳು ಹೆಚ್ಚಿನ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಸೂಚಿಸಿದರು.

ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ನಾರ್ಕೋ ಕೋ ಆರ್ಡಿನೇಷನ್ ಸೆಂಟರ್‍ನ ಜಿಲ್ಲಾಮಟ್ಟದ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಾಲಾ ಕಾಲೇಜುಗಳಲ್ಲಿ ಮಾದಕ ದ್ರವ್ಯಗಳ ಆಕರ್ಷಣೆಗೊಳಗಾಗುವ ಸಾಧ್ಯತೆ ಹೆಚ್ಚಾಗಿರುವುದರಿಂದ ಇದರ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಬೇಕು. ಅರಿವು ಕಾರ್ಯಕ್ರಮಗಳಲ್ಲಿ ಭಾಗವಹಿಸದೇ ಇರುವ ಮಕ್ಕಳ ಮಾಹಿತಿಯನ್ನು ಡಿಡಿಪಿಯು ಹಾಗೂ ಡಿಡಿಪಿಐ ಅಧಿಕಾರಿಗಳು ನೀಡಬೇಕು ಎಂದರು.

ಅಪ್ರಾಪ್ತ ವಯಸ್ಸಿನಲ್ಲಿ ಮಾದಕ ವ್ಯಸನಕ್ಕೆ ತುತ್ತಾದಲ್ಲಿ ಆರೋಗ್ಯದ ಮೇಲೆ ಪರಿಣಾಮ ಬೀರಿ ಮಕ್ಕಳು ಖಿನ್ನತೆಗೆ ಒಳಗಾಗುತ್ತಾರೆ. ಇದರಿಂದ ಮಕ್ಕಳ ಬೆಳವಣಿಗೆ ಹಾಗೂ ತೂಕ ಕುಂಠಿತಗೊಳ್ಳುತ್ತದೆ. ಕೈಗಳಲ್ಲಿ ಚುಚ್ಚಿದ ಗಾಯಗಳು ಅಥವಾ ಕಣ್ಣು ಕೆಂಪಾಗುವಿಕೆ ಇದ್ದಲ್ಲಿ ತಕ್ಷಣ ಪೋಷಕರು ಮಕ್ಕಳ ಚಲನವಲನಗಳ ಬಗ್ಗೆ ನಿಗಾವಹಿಸಬೇಕು. ಇಲ್ಲವಾದಲ್ಲಿ ಕುಟುಂಬದ ಸ್ವಾಸ್ಥ್ಯ ಹಾಳಾಗಲು ಪ್ರಾರಂಭವಾಗುತ್ತದೆ. ಮಕ್ಕಳು ಸಾಮಾಜಿಕವಾಗಿ ಶೈಕ್ಷಣಿಕವಾಗಿ ಪ್ರಗತಿ ಹೊಂದಲು ಸಾಧ್ಯವಾಗುವುದಿಲ್ಲ. ಈ ಬಗ್ಗೆ ಪೋಷಕರು ಹಾಗೂ ಶಾಲಾ-ಕಾಲೇಜುಗಳು ಹಾಗೂ ಹಾಸ್ಟೆಲ್‍ಗಳಲ್ಲಿ ಮಕ್ಕಳನ್ನು ಸೂಕ್ಷ್ಮವಾಗಿ ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಚಾರಣ ಪ್ರದೇಶ, ದೇವಸ್ಥಾನ ಹಾಗೂ ಇತರ ಕಡೆ ಟ್ರಕ್ಕಿಂಗ್ ಹೋಗುವ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಬಗ್ಗೆ ತೀವ್ರ ನಿಗಾವಹಿಸಬೇಕು. ಇವರಲ್ಲಿ ಮಾದಕ ವ್ಯಸನಿಗಳು ಕಂಡುಬಂದಲ್ಲಿ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಬೇಕು ಇದರಿಂದ ಉತ್ತಮ ಆರೋಗ್ಯವಂತ ಸಮಾಜ ನಿರ್ಮಿಸಬಹುದು ಎಂದರು.

ಗಾಂಜಾ ಬೆಳೆಯುವ ಕುರಿತು ನಿಗಾ ಇರಿಸಿ:

ಸಭೆಯಲ್ಲಿ ಎಸ್,.ಪಿ. ಡಾ. ಅರುಣ್ ಕೆ. ಮಾತನಾಡಿ, ಕೃಷಿ, ತೋಟಗಾರಿಕೆ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ತಮ್ಮ ವ್ಯಾಪ್ತಿ ಪ್ರದೇಶಗಳಲ್ಲಿ ಗಾಂಜಾ ಬೆಳೆಯುತ್ತಿರುವ ಬಗ್ಗೆ ಕಾಲಕಾಲಕ್ಕೆ ಪರಿಶೀಲನೆ ನಡೆಸಬೇಕು ಎಂದರು. ಮಾದಕ ವಸ್ತುಗಳನ್ನು ಸರಬರಾಜು ಮಾಡುವ ಸಂಶಯಿತ ಪಾರ್ಸೆಲ್‍ಗಳ ಬಗ್ಗೆ ಹಾಗೂ ಅಂಚೆಗೆ ನೀಡಲಾದ ವಿಳಾಸದಲ್ಲಿ ವಾಸ್ತವ್ಯವಿಲ್ಲದೆ ಅಂಚೆ ಮೂಲಕ ಬರುವ ಪಾರ್ಸೆಲ್‍ಗಳನ್ನು ತೆಗೆದುಕೊಳ್ಳುವವರನ್ನು ಪರಿಶೀಲಿಸಬೇಕು. ಅವರ ಮಾಹಿತಿಯನ್ನು ಪ್ರತ್ಯೇಕವಾಗಿ ದಾಖಲು ಮಾಡಬೇಕು. ಇದರೊಂದಿಗೆ ಕಾರ್ಮಿಕ ಇಲಾಖೆಯವರು ಹೊರ ರಾಜ್ಯಗಳಿಂದ ಬರುವ ಕಾರ್ಮಿಕರ ಬಗ್ಗೆ ಸೂಕ್ತ ಮಾಹಿತಿ ಸಂಗ್ರಹಿಸಬೇಕು ಎಂದು ಸೂಚಿಸಿದರು.

ಆರೋಗ್ಯ ಇಲಾಖೆಯಿಂದ ತಂಬಾಕು ನಿಯಂತ್ರಣದ ಕುರಿತು ಜಾಗೃತಿ ಮೂಡಿಸಲು ಹೆಚ್ಚಿನ ಆದ್ಯತೆ ನೀಡಬೇಕು. ತಪಾಸಣೆ ವೇಳೆ ತಪ್ಪಿತಸ್ಥರು ಇದ್ದಲ್ಲಿ ಸೂಕ್ತ ಕ್ರಮ ಕೈಗೊಂಡು ಅವರ ವ್ಯಾಪಾರ ಪರವಾನಿಗೆ ರದ್ದು ಮಾಡಬೇಕು ಎಂದರು. ಸಭೆಯಲ್ಲಿ ಕಾನೂನು ಸುವ್ಯವಸ್ಥೆ ಉಪ ಪೊಲೀಸ್ ಆಯುಕ್ತ ಸಿದ್ದಾರ್ಥ್ ಗೋಯಲ್, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಜಿ,  ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕ್ಲಿಫರ್ಡ್ ಲೋಬೋ ಹಾಗೂ ಇತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "Mangalore: ಶಾಲಾ ಕಾಲೇಜುಗಳಲ್ಲಿ ಮಾದಕ ವ್ಯಸನದ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಸೂಚನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*