

ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 2024-25ನೇ ಸಾಲಿನಲ್ಲಿ ಒಟ್ಟು ರೂ. 545.04 ಕೋಟಿ ವ್ಯವಹಾರ ನಡೆಸಿ , ರೂ.1,93,06,792.15 ಲಾಭ ಗಳಿಸಿರುತ್ತದೆ ಎಂದು ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ತಿಳಿಸಿದ್ದಾರೆ. ಸಿದ್ಧಕಟ್ಟೆಯಲ್ಲಿರುವ ಸಂಘದ ಪ್ರಧಾನ ಕಚೇರಿಯ ಬೆಳ್ಳಿಪ್ಪಾಡಿ ಕೃಷ್ಣ ರೈ ರೈತ ಸಭಾಂಗಣದಲ್ಲಿ ಶನಿವಾರ ಕರೆದ ಪತ್ರಿಕಾಗೋಷ್ಠಿ ಯಲ್ಲಿ ವಿವರ ನೀಡಿದ್ದಾರೆ.
ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಲ್ಲಿ ಜಿಲ್ಲಾ ಮಟ್ಟದಲ್ಲಿಯೇ ಗರಿಷ್ಠ ಸಾಧನೆ ಮಾಡಲಾಗಿದೆ ಎಂದು ಹೇಳಿದ ಪ್ರಭು, ಜಿಲ್ಲೆಯಲ್ಲಿ ಮುಂಚೂಣಿಯಲ್ಲಿರುವ ಬೆರಳೆಣಿಕೆಯ ಸಹಕಾರಿ ಸಂಘಗಳಲ್ಲಿ ನಮ್ಮ ಸಂಘವೂ ಒಂದು ಎಂದರು. 2024-25 ನೇ ಸಾಲಿನಲ್ಲಿ 1771 ರೈತರು 2037 ಎಕ್ರೆ ಜಮೀನಿಗೆ ಸಂಬಂಧಿಸಿದಂತೆ ರೂ. 52.74 ಲಕ್ಷ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಗೆ ಸಂಬಂಧಿಸಿ ರೈತರಿಂದ ಪ್ರೀಮಿಯಂ ಪಾವತಿಸಲಾಗಿದೆ. ಕಳೆದ ವರ್ಷ ಸಂಘದ ವ್ಯಾಪ್ತಿಯ ಸದಸ್ಯರು ಸುಮಾರು 5-6 ಕೋಟಿ ಬೆಳೆವಿಮೆ ಪರಿಹಾರ ಪಡೆದಿರುತ್ತಾರೆ ಎಂದರು.
ಸಿದ್ದಕಟ್ಟೆ ಪ್ರಧಾನ ಕಛೇರಿ ಸೇರಿದಂತೆ,ಸಂಘವು ಆರಂಬೋಡಿ, ರಾಯಿ, ಮಾವಿನಕಟ್ಟೆ,ಅರಳ ಎಂಬಲ್ಲಿ ಒಟ್ಟು ನಾಲ್ಕು ಶಾಖೆಗಳನ್ನು ಹೊಂದಿದ್ದು , ಸಿ ಸಿ ಕ್ಯಾಮೆರ ಹಾಗೂ ಸೈರನ್ ವ್ಯವಸ್ಥೆ ಕಲ್ಪಿಸಲಾಗಿದ್ದು ಗ್ರಾಹಕರಿಗೆ ಅನೂಕೂಲವಾಗುವ ನಿಟ್ಟಿನಲ್ಲಿ ಆರ್.ಟಿ.ಜಿ.ಎಸ್, ನೆಫ್ಟ್ ವ್ಯವಸ್ಥೆಯೊಂದಿಗೆ ಕ್ಯೂ ಆರ್ ಕೋಡ್ ವ್ಯವಸ್ಥೆ ಮಾಡಲಾಗಿದೆ ಎಂದರು.
ಸಂಘ 1947 ರಲ್ಲಿ ಆಗಿನ ಸಹಕಾರಿ ಬಂಧುಗಳ ನೆರವಿನಿಂದ. ಬಿ. ಕೃಷ್ಣ ರೈ ಅಧ್ಯಕ್ಷತೆಯಲ್ಲಿ ಸ್ಥಾಪಿಸಲಾಗಿದ್ದು, ಬೆಳ್ತಂಗಡಿ ತಾಲೂಕಿನ ಆರಂಬೋಡಿ ಗ್ರಾಮ ಸೇರಿದಂತೆ ಬಂಟ್ವಾಳ ತಾಲೂಕಿನ 7 ಗ್ರಾಮಗಳೊಂದಿಗೆ ಒಟ್ಟಾರೆ 8 ಗ್ರಾಮಗಳ ವ್ಯಾಪ್ತಿಯನ್ನು ಒಳಗೊಂಡಿದೆ. ,ಆಡಳಿತ ಮಂಡಳಿಯ ನಿರ್ದೇಶಕರ , ಸಿಬ್ಬಂದಿಗಳ ಹಾಗೂ ಸದಸ್ಯರ ಸಂಪೂರ್ಣ ಸಹಕಾರದೊಂದಿಗೆ ಎಲ್ಲರಿಗೂ ತೃಪ್ತಿಕರವಾದ ಸೇವೆಯನ್ನು ನೀಡುತ್ತಾ ಬಂದಿದ್ದು,ಕಳೆದ 78 ವರ್ಷಗಳಿಂದ ಕಾರ್ಯಚರಿಸುತ್ತಿದ್ದು,ಅಭಿವೃದ್ದಿಯಲ್ಲಿ ಮುನ್ನಡೆಯುತ್ತಿದೆ .
2024-25 ನೇ ವರ್ಷದಲ್ಲಿ ವಿವಿಧ ಉದ್ದೇಶಗಳಿಗೆ ಒಟ್ಟು ರೂ. 122.33 ಕೋಟಿ ಸಾಲ ವಿತರಿಸಲಾಗಿದ್ದು,ಹೊರ ಬಾಕಿ ಸಾಲವು ರೂ.112.32 ಕೋಟಿ ಆಗಿದ್ದು , ವಿತರಿಸಿದ ಸಾಲದಲ್ಲಿ ಶೇ 97% ರಷ್ಟು ವಸೂಲಾತಿಯಾಗಿರುತ್ತದೆ. 2024-25 ನೇ ಸಾಲಿನ ವರ್ಷಾಂತ್ಯಕ್ಕೆ ರೂ. 62.19 ಕೋಟಿ ಠೇವಣಿ ಹೊಂದಿದ್ದು , ಸಂಘವು ಕಳೆದ ಹಲವಾರು ವರ್ಷಗಳಿಂದ ಅಡಿಟ್ ವರದಿಯಲ್ಲಿ “ಎ” ಗ್ರೇಡ್ ನ್ನು ನಿರಂತರವಾಗಿ ಕಾಯ್ದುಕೊಂಡು ಬರಲಾಗಿದೆ ಎಂದರು.
20ರಂದು ಮಹಾಸಭೆ:
ಸಾರ್ವಜನಿಕ ಕಾರ್ಯಕ್ರಮಕ್ಕೆ ಅನೂಕೂಲವಾಗುವಂತೆ ಸಂಘದ ಸ್ಥಾಪಕ ಅಧ್ಯಕ್ಷ ಬೆಳ್ಳಿಪ್ಪಾಡಿ ಕೃಷ್ಣ ರೈ ಅವರ ಸವಿನೆನಪಿಗಾಗಿ ಅವರ ಹೆಸರಿನಲ್ಲಿ ಬೆಳ್ಳಿಪ್ಪಾಡಿ ಕೃಷ್ಣ ರೈ ರೈತ ಸಭಾಂಗಣ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸಾರ್ವಜನಿಕರ ಕಾರ್ಯಕ್ರಮಗಳಿಗೆ ಸಭಾಂಗಣವನ್ನು ಉಚಿತವಾಗಿ ನೀಡಲಾಗುತ್ತಿದೆ. 2024-25 ನೇ ಸಾಲಿನ ಮಹಾಸಬೆ ಸೆ.20ರಂದು ಶನಿವಾರ ಬೆಳಿಗ್ಗೆ 10.30ಕ್ಕೆ ಸಂಘದ ಕೇಂದ್ರ ಕಚೇರಿಯ ಬೆಳ್ಳಿಪ್ಪಾಡಿ ಕೃಷ್ಣ ರೈ ರೈತ ಸಭಾಂಗಣದಲ್ಲಿ ಜರಗಲಿದ್ದು ಸಂಘದ ಸದಸ್ಯರು ಮಹಾಸಭೆಯಲ್ಲಿ ಭಾಗವಹಿಸುವಂತೆ ವಿನಂತಿಸಿದರು.
ಪ್ರತಿಭಾ ಪುರಸ್ಕಾರ: ಸಂಘದ ಸದಸ್ಯರ ಪ್ರತಿಭಾನ್ವಿತ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದ್ದು, ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಹಾಗೂ ಸರಕಾರಿ ಸೇವೆಯಿಂದ ನಿವೃತ್ತಿ ಹೊಂದಿದವರನ್ನು ಗೌರವಿಸಲಾಗುತ್ತದೆ. ಸ್ಥಳೀಯ ರೋಟರಿ ಕ್ಲಬ್ ಗಳ ಸಹಯೋಗದಲ್ಲಿ ಸಂಘದ ವತಿಯಿಂದ ಗ್ರಾಮೀಣ ಭಾಗದ ಮಹಿಳೆಯರಿಗೆ ಉಚಿತವಾಗಿ ಟೈಲರಿಂಗ್ ಮತ್ತು ಪ್ಯಾಶನ್ ಡಿಸೈನಿಂಗ್ ತರಬೇತಿ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ರೈತ ಕಲ್ಯಾಣ ನಿಧಿ ಯೋಜನೆ:
ಸಂಘದಿಂದ ಬೆಳೆ ಸಾಲ ಪಡೆದ ಸದಸ್ಯರು ಮರಣ ಹೊಂದಿದ್ದಲ್ಲಿ, ಅವರ ಕುಟುಂಬಕ್ಕೆ ಸಂಘದ ವತಿಯಿಂದ ನೆರವಾಗುವ ದೃಷ್ಠಿಯಲ್ಲಿ ‘ರೈತ ಕಲ್ಯಾಣ ನಿಧಿ” ಯೋಜನೆಯ ಮೂಲಕ ರೂ.10000 ದಂತೆ 24 ಮಂದಿಗೆ ಆರ್ಥಿಕವಾಗಿ ಸಹಕಾರ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ನ್ಯಾಯಬೆಲೆ ಅಂಗಡಿಯ ಮೂಲಕ ಸಂಘದಲ್ಲಿ ಪಡಿತರ ಸಾಮಾಗ್ರಿಗಳನ್ನು ಸಮರ್ಪಕವಾಗಿ ವಿತರಿಸಲಾಗಿದ್ದು,ಸಂಘದಲ್ಲಿ “ನೇತಾಜಿ ಬಹುಪಯೋಗಿ ಸೇವಾಕೇಂದ್ರ”ದ ಹೆಸರಿನಲ್ಲಿ ಗೋದಾಮು ಕಟ್ಟಡ ಇದ್ದು,ಇದರ ಮೂಲಕ ರಾಸಾಯನಿಕ ಗೊಬ್ಬರ ,ಸಾವಯವ ಗೊಬ್ಬರ,ಮೈಲುತ್ತುತ್ತು , ಸುಣ್ಣ, ಸೇರಿದಂತೆ ರೈತರಿಗೆ ಬೇಕಾಗುವ ಉತ್ತಮ ಗುಣಮಟ್ಟದ ಕೃಷಿ ಉಪಯುಕ್ತ ಉಪಕರಣಗಳು ಹಾಗೂ ಗೃಹೋಪಯೋಗಿ ವಸ್ತುಗಳನ್ನು ಯೋಗ್ಯ ಬೆಲೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ರಿಯಾಯಿತಿ ದರದಲ್ಲಿ ಮೈಲುತ್ತುತ್ತು ಸುಣ್ಣ ನೀಡಲಾಗುತ್ತಿದೆ . ಕಡಿಮೆ ಬಡ್ಡಿದರದಲ್ಲಿ ರಾಸಾಯನಿಕ ಗೊಬ್ಬರ ಖರೀದಿಗೆ ಸಾಲ ನಿಡಲಾಗುತ್ತಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಸಂದೇಶ್ ಶೆಟ್ಟಿ ಪೊಡುಂಬ, ನಿರ್ದೇಶಕರಾದ ದಿನೇಶ್ ಪೂಜಾರಿ , ರಶ್ಮಿತ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ಜಾರಪ್ಪ ನಾಯ್ಕ, ವೀರಪ್ಪ ಪರವ,ಎ ಶಿವ ಗೌಡ , ಪುಷ್ಪಲತಾ ಎಸ್ ಆರ್, ವೃತ್ತಿಪರ ನಿರ್ದೇಶಕರಾದ ರಾಜೇಶ್ ಶೆಟ್ಟಿ ಕೆ , ನವೀನ್ ಹೆಗ್ಡೆ ,ಮುಖ್ಯಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ , ಸಹಾಯಕ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಮಲ್ಲಿಕಾ ಉಪಸ್ಥಿತರಿದ್ದರು.


Be the first to comment on "ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ 545 ಕೋಟಿ ರೂ ವ್ಯವಹಾರ 1.93 ಕೋಟಿ ರೂ ಲಾಭ: ಪ್ರಭಾಕರ ಪ್ರಭು"