ಬಂಟ್ವಾಳ

ಬಂಟ್ವಾಳ ಕನ್ನಡ ಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನುಡಿನಮನ

ಜಾಹೀರಾತು

ಇತ್ತೀಚಿಗೆ ನಮ್ಮನ್ನು ಅಗಲಿದ ಸಾಹಿತ್ಯ ಸಹಿತ ನಾನಾ ಕ್ಷೇತ್ರಗಳ ಗಣ್ಯರಾದ ಎಸ್ ಎಲ್. ಬೈರಪ್ಪ,  ಕೆ.ಜಿ ವಸಂತಮಾಧವ, ನಂದಳಿಕೆ ಬಾಲಚಂದ್ರ ರಾವ್,  ನರೇಂದ್ರಕುಮಾರ್ ಉಜಿರೆ, ಗುರುರಾಜ ಆಚಾರ್ಯ ಹೊಸಬೆಟ್ಟು, ಲಲಿತಾ ರೈ ಮತ್ತು ದಿನೇಶ್ ಅಮ್ಮಣ್ಣಾಯ ಅವರಿಗೆ ಬಂಟ್ವಾಳದ ಬಿ.ಸಿ.ರೋಡಿನಲ್ಲಿರುವ ಕನ್ನಡ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ನುಡಿನಮನ ಸಲ್ಲಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ ಅವರು ಮಾತನಾಡಿ ಏಳು ಮಹನೀಯರು ತಮ್ಮ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ ಎಂದು ಹೇಳಿದರು.

ಕನ್ನಡ ಸಾರಸ್ವತ ಲೋಕದಲ್ಲಿ ವ್ಯಕ್ತಿಯಾಗಿ, ಸಾಹಿತಿಯಾಗಿ ಮತ್ತು ನಿಜವಾದ ಅರ್ಥದಲ್ಲಿ ಒಬ್ಬ ಪ್ರಗತಿಪರ ಬುದ್ಧಿಜೀವಿ ಎನಿಸಿಕೊಂಡವರು ಎಸ್ ಎಲ್ ಭೈರಪ್ಪನವರು; ಸಾಹಿತ್ಯದಿಂದ ಪಡೆದ ಹಣವನ್ನು ಸಂಪೂರ್ಣವಾಗಿ ಸಮಾಜಕ್ಕೆ ಹಿಂತಿರುಗಿಸಿದ ಕೀರ್ತಿ ಭೈರಪ್ಪನವರಿಗೆ ಸಲ್ಲುತ್ತದೆ. ಬಾಲ್ಯದಿಂದಲೇ ಕಷ್ಟದ ಬದುಕನ್ನು ಬಾಳಿದವರು. ಜೀವನಾನುಭವ, ಪ್ರವಾಸ ಮತ್ತು ಅಧ್ಯಯನದಿಂದ ಗಟ್ಟಿ ಸಾಹಿತ್ಯವನ್ನು ರಚಿಸಲು ಸಾಧ್ಯ ಎಂದು ತೋರಿಸಿಕೊಟ್ಟವರು ಬೈರಪ್ಪನವರು ಎಂದು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಅಜಕ್ಕಳ ಗಿರೀಶ ಭಟ್ ನುಡಿನಮನ ಸಲ್ಲಿಸಿದರು. ಕೆ.ಜಿ ವಸಂತಮಾಧವ ಅವರು ದಕ್ಷಿಣ ಭಾರತದ ಇತಿಹಾಸ, ಕರಾವಳಿಯ ಇತಿಹಾಸ ಅಲ್ಲದೆ, ಭಾರತದ ವೈದ್ಯ ಇತಿಹಾಸ, ವಿಜ್ಞಾನದ ಇತಿಹಾಸ ಇತ್ಯಾದಿ ವಿಷಯಗಳ ಬಗೆಗೂ ಕೃತಿ ರಚಿಸಿದ್ದಾರೆ; ಅವರನ್ನು ಸಾಹಿತ್ಯ ಪರಿಷತ್ತು ಗುರುತಿಸಿದೆಯಾದರೂ ಒಬ್ಬ ಇತಿಹಾಸಕಾರರಾಗಿ ಅವರಿಗೆ ಸಿಗಬೇಕಾದಷ್ಟು ಮನ್ನಣೆ ಸಿಕ್ಕಿಲ್ಲ ಎಂದರು. ನಂದಳಿಕೆ ಬಾಲಚಂದ್ರ ರಾವ್ ಮತ್ತು ದಿನೇಶ್ ಅಮ್ಮಣ್ಣಾಯ ಅವರ ಜೊತೆಗಿನ ತಮ್ಮ ಅನುಭವವನ್ನೂ ಹಂಚಿಕೊಂಡರು.

ಯಕ್ಷಗಾನ ಕಲಾವಿದ ಸರಪಾಡಿ ಅಶೋಕ್ ಶೆಟ್ಟಿ ಮಾತನಾಡಿ ಈ ಏಳು ಗಣ್ಯರು  ಅನರ್ಘ್ಯ ರತ್ನಗಳು. ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಾರೆ.  ದಿನೇಶ ಅಮ್ಮಣ್ಣಾಯರು ಪರಂಪರೆಯ ಶೈಲಿಯ ಭಾಗವತರು; ಅವರದೇ ಶೈಲಿಯಲ್ಲಿ ಅನೇಕ ಮಂದಿ ಅಭಿಮಾನಿಗಳನ್ನು ಹೊಂದಿದ್ದರು. ಯಕ್ಷಗಾನ ರಂಗಭೂಮಿಯಲ್ಲಿ  ಅಮ್ಮಣ್ಣಾಯ ಅವರ ಸಾಧನೆಯನ್ನು ಬಣ್ಣಿಸಿ ಅವರೊಂದಿಗಿನ ತಮ್ಮ ಒಡನಾಟವನ್ನು ತಿಳಿಸಿದರು.

ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ವಿನಯ ಆಚಾರ್ಯ ಎಚ್  ತನ್ನ ತಂದೆ ಗುರುರಾಜ ಆಚಾರ್ಯ ಅವರ ಬಗ್ಗೆ ತಿಳಿಸಿದರು.

ಎಲ್ಲರಿಗೂ ಮೌನ ಪ್ರಾರ್ಥನೆಯೊಂದಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರೀಯ ಕಾರ್ಯಕಾರಿ ಸಮಿತಿಯ ಸದಸ್ಯರಾದ ಡಾ.ಮಾಧವ ಎಂ.ಕೆ., ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿ ಪುಷ್ಪರಾಜ್ ಕೆ, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸದಸ್ಯರಾದ ಪೂವಪ್ಪ ನೇರಳಕಟ್ಟೆ ಮತ್ತು ಸನತ್ ಕುಮಾರ ಜೈನ್, ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ವಿಶ್ವನಾಥ್ ಬಂಟ್ವಾಳ, ಮೂಲ್ಕಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಿಥುನ ಉಡುಪ, ಮೂಡಬಿದ್ರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ವೇಣುಗೋಪಾಲ ಶೆಟ್ಟಿ, ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ರಮಾನಂದ ನೂಜಿಪ್ಪಾಡಿ , ಕೋಶಾಧ್ಯಕ್ಷರಾದ ಅಬ್ದುಲ್ ರಹಿಮಾನ್ ಡಿ ಬಿ, ಬಂಟ್ವಾಳ ತಾಲೂಕು ಪಾಣೆಮಂಗಳೂರು ಹೋಬಳಿ ಘಟಕದ ಅಧ್ಯಕ್ಷರಾದ ಪಿ .ಮುಹಮ್ಮದ್ ಉಪಸ್ಥಿತರಿದ್ದರು .

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.