ಪಂಚಗ್ಯಾರಂಟಿ ಯೋಜನೆ ವಿರೋಧಿಸಿದವರು ಇಂದು ಅದರ ನಕಲು ಮಾಡುತ್ತಿದ್ದಾರೆ ಎಂದು ರಾಜ್ಯ ಪಂಚ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಹೇಳಿದ್ದಾರೆ.
ಬಂಟ್ವಾಳದ ಬಿ.ಸಿ.ರೋಡಿನಲ್ಲಿರುವ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಪಂಚಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಬಂಟ್ವಾಳ ಆಶ್ರಯದಲ್ಲಿ ಗೃಹಲಕ್ಷ್ಮೀ ಫಲಾನುಭವಿಗಳ ಸ್ವಸಹಾಯ ಸಂಘಗಳ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗ್ಯಾರಂಟಿ ಸವಲತ್ತು ಪಡೆದವರೇ ಯೋಜನೆಯನ್ನು ಟೀಕಿಸುತ್ತಿದ್ದಾರೆ ಎಂದ ಅವರು, 98594 ಕೋಟಿ ರೂ. ಹಣವನ್ನು ಗ್ಯಾರಂಟಿ ಯೋಜನೆಯ ಮೂಲಕ ಸರಕಾರ ಜನರ ಖಾತೆಗೆ ತಲುಪಿಸಿದೆ. 560 ಕೋಟಿ ಶಕ್ತಿ ಯೋಜನೆಯ ಮೂಲಕ ಪ್ರಯಾಣಿಸಿರುವುದು ವಿಶ್ವದಾಖಲೆಯಾಗಿದೆ ಎಂದರು.
ಪ್ರಾಧಿಕಾರದ ಉಪಾಧ್ಯಕ್ಷೆ ಪುಷ್ಪಾ ಅಮರನಾಥ ಗೃಹಲಕ್ಷ್ಮೀ ಫಲಾನುಭವಿಗಳ ಸ್ವಸಹಾಯ ಸಂಘಗಳನ್ನು ಉದ್ಘಾಟಿಸಿ ಮಾತನಾಡಿ ಗ್ಯಾರಂಟಿ ಯೋಜನೆಗಳ ಮೂಲಕ ಜನರಿಗಾಗಿ ಕೆಲಸ ಮಾಡುವ ಅನುಷ್ಠಾನ ಸಮಿತಿಗೆ ಬಹುಮಾನ ನೀಡಬೇಕು. ದ.ಕ. ಜಿಲ್ಲೆಗೆ 2025 ರ ಪ್ರಥಮ ಬಹುಮಾನವನ್ನು ನೀಡುವಂತೆ ವಿನಂತಿಸಿದರು.
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್. ಗಟ್ಟಿ, ಮಾಜಿ ಸಚಿವ ಬಿ. ರಮಾನಾಥ ರೈ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನರ್ವಾಡೆ ವಿನಾಯಕ ಕಾರ್ಬಾರಿ, ಗ್ಯಾರಂಟಿ ಅನುಷ್ಠಾನ ಯೋಜನೆ ಜಿಲ್ಲಾ ಉಪಾಧ್ಯಕ್ಷ ನಾರಾಯಣ ನಾಯ್ಕ್, ಬಂಟ್ವಾಳ ಪುರಸಭಾಧ್ಯಕ್ಷ ವಾಸು ಪೂಜಾರಿ, ಬುಡಾ ಅಧ್ಯಕ್ಷ ಬೇಬಿ ಕುಂದರ್, ಗೃಹಲಕ್ಷ್ಮೀ ಜಿಲ್ಲಾ ನೋಡಲ್ ಅಧಿಕಾರಿ ಉಸ್ಮಾನ್ , ಕಡಬ ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುಧೀರ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅತೀ ಹೆಚ್ಚು ಸಂಘ ರಚನೆ ಮಾಡಿದ ಪಂಚಾಯತಿಗಳನ್ನು ಗುರುತಿಸಲಾಯಿತು. ವ್ಯವಸ್ಥಾಪಕಿ ಸುಧಾ ಅವರನ್ನು ಗೌರವಿಸಲಾಯಿತು. ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ಸಚಿನ್ ಕುಮಾರ್ ಸ್ವಾಗತಿಸಿ, ವಂದಿಸಿದರು., ಸಮಿತಿ ಅಧ್ಯಕ್ಷೆ ಜಯಂತಿ ವಿ. ಪೂಜಾರಿ ಪ್ರಾಸ್ತವಿಕವಾಗಿ ಮಾತನಾಡಿದರು.ಪಿಡಿಓ ಸುನೀಲ್ ಕಾರ್ಯಕ್ರಮ ನಿರೂಪಿಸಿದರು