ಪ್ರಮುಖ ಸುದ್ದಿಗಳು

ನವ ವಿಧ- ನವ ವರ್ಷದ ವಿಶಿಷ್ಟತೆ ಸಾರಿದ ಮಂಗಳೂರು ಕಂಬಳ

ಮಂಗಳೂರು: ಮಂಗಳೂರು ಕೇವಲ ನಮ್ಮ ನೆಲವಲ್ಲ, ಇದು ಸನಾತನ ಸಂಸ್ಕೃತಿಯ ನೆಲೆಬೀಡು ಮತ್ತು ನಮ್ಮ ತುಳುನಾಡಿನ ಅಸ್ಮಿತೆ. ಹೀಗಿರುವಾಗ, ದಕ್ಷಿಣ ಕನ್ನಡ ಜಿಲ್ಲೆಯ ತಪ್ಪು ಅಭಿಪ್ರಾಯ-ಅಪಪ್ರಚಾರ ಹುಟ್ಟು ಹಾಕುವ ಪಟ್ಟಭದ್ರ ಹಿತಾಸಕ್ತಿಗಳ ವಿರುದ್ಧ ಹೋರಾಡುವ ಜೊತೆಗೆ, ಸ್ಥಳೀಯರ ಪಾಲ್ಗೊಳ್ಳುವಿಕೆಯೊಂದಿಗೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕನಸಿನಂತೆ ನಮ್ಮ ‘ಮಂಗಳೂರು 2.0 ಹಾಗೂ ‘ವಿಕಸಿತ ಮಂಗಳೂರು’ ನಿರ್ಮಾಣ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ದಕ್ಷಿಣ ಕನ್ನಡ ಸಂಸದ ಹಾಗೂ ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ ಕ್ಯಾ. ಬ್ರಿಜೇಶ್ ಚೌಟ ಕರೆ ನೀಡಿದ್ದಾರೆ.

ಜಾಹೀರಾತು

ಬಂಗ್ರಕೂಳೂರಿನ ಗೋಲ್ಡ್‌ಫಿಂಚ್‌ ಸಿಟಿಯಲ್ಲಿ ನಡೆದ ಒಂಬತ್ತನೇ ವರ್ಷದ ‘ಮಂಗಳೂರು ಕಂಬಳ’ದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿ, ನಮ್ಮ ನೆಲದ ಭವಿಷ್ಯವನ್ನು ನಮ್ಮವರೇ ರೂಪಿಸಬೇಕು ಮತ್ತು ಇಲ್ಲಿನ ಅಭಿವೃದ್ಧಿಯಲ್ಲಿ ಸ್ಥಳೀಯರ ಪಾಲ್ಗೊಳ್ಳುವಿಕೆ ಅತ್ಯಗತ್ಯ. 8 ವರ್ಷದ ಹಿಂದೆ ಆರಂಭಗೊಂಡ ಈ ಕಂಬಳ ತುಳುನಾಡಿನ ಎಲ್ಲ ವರ್ಗದವರು, ಸಮುದಾಯದವರನ್ನು ಒಂದಾಗಿ ಜೋಡಿಸುವಲ್ಲಿ ಯಶಸ್ವಿಯಾಗಿದೆ. 9ನೇ ವರ್ಷದ ಈ ಕಂಬಳವನ್ನು ನವವಿಧ-ನವವರ್ಷದ ಕಾರ್ಯಕ್ರಮಗಳೊಂದಿಗೆ ಮಂಗಳೂರು ಕಂಬಳವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಗಿದೆ ಎಂದು ಹೇಳಿದ್ದಾರೆ.

ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಅಧ್ಯಕ್ಷರಾದ ಚಿತ್ತರಂಜನ್ ಅವರು ದೀಪಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ಕಟೀಲು ದುರ್ಗಾಪರಮೇಶ್ವರಿ ದೇವಳದ ಅರ್ಚಕ ಅನಂತ ಪದ್ಮನಾಭ ಅಸ್ರಣ್ಣ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಕ್ಯಾ. ಗಣೇಶ್ ಕಾರ್ಣಿಕ್, ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷರಾದ ತುಕರಾಮ್ ಪೂಜಾರಿ, ವಿಧಾನ ಪರಿಷತ್‌ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಸುನಿಲ್ ಆಚಾರ್, ವಿನೋದ್ ಶೆಣೈ, ಪ್ರಸಾದ್ ಕುಮಾರ್ ಶೆಟ್ಟಿ, ಜಯಾನಂದ್ ಅಂಚನ್, ಕದ್ರಿ ನವನೀತ್ ಶೆಟ್ಟಿ, ಅನಿಲ್ ಕುಮಾರ್, ಮನೋಹರ್ ಜೋಷಿ, ಕಿರಣ್ ಕುಮಾರ್ ಕೋಡಿಕಲ್, ಶಕೀಲಾ ಖಾವ, ಸಂಧ್ಯಾ ಅಚಾರ್, ಶೋಭಾ ರಾಜೇಶ್, ಹೆಚ್.ಕೆ ಪುರುಷೋತ್ತಮ, ಪ್ರದೀಪ್ ಕುಮಾರ್ ಕಲ್ಕೂರ, ಗೋಪಾಲ್ ಕುತ್ತಾರ್ ಮುಂತಾದವರು ಉಪಸ್ಥಿತರಿದ್ದರು.

ಕಂಬಳದ ನೆಲದಲ್ಲಿ ವಂದೇ ಮಾತರಂ
ವಂದೇ ಮಾತರಂ ಗೀತೆಗೆ 150 ವರ್ಷ ತುಂಬಿದ ಸಂಭ್ರಮಕ್ಕಾಗಿ, ಶ್ವೇತವಸ್ತ್ರ ಧರಿಸಿದ 150 ವಿದ್ಯಾರ್ಥಿನಿಯರು ಕೆಸರು ಗದ್ದೆಯ ಬದಿಯಲ್ಲಿ ನಿಂತು ಏಕಕಂಠದಿಂದ ಈ ಗೀತೆಯನ್ನು ಹಾಡತೊಡಗಿದಾಗ ಇಡೀ ಪರಿಸರವೇ ದೇಶಭಕ್ತಿಯನ್ನು ಮೊಳಗಿಸುವಂತೆ ಮಾಡಿತು.ತುಳುನಾಡಿನ ಮಣ್ಣಿನ ವಾಸನೆ ಮತ್ತು ತಾಯಿ ಭಾರತಾಂಬೆಯ ಸ್ತುತಿ ಒಂದಾದ ಆ ಕ್ಷಣ, ನೆರೆದಿದ್ದ ಪ್ರತಿಯೊಬ್ಬರ ಮೈ-ಮನಗಳಲ್ಲಿ ದೇಶಪ್ರೇಮದ ಅಲೆ ಎಬ್ಬಿಸಿತು. ಜಾನಪದ ಕ್ರೀಡೆಯ ಅಬ್ಬರದ ನಡುವೆ ಕೇಳಿಬಂದ ಆ ಸುಮಧುರ ಗಾಯನ, ನಮ್ಮ ಮಣ್ಣಿನ ಸಂಸ್ಕೃತಿ ಮತ್ತು ರಾಷ್ಟ್ರೀಯತೆಯ ಅಪೂರ್ವ ಸಂಗಮವಾಗಿ ‘ನವ ವೈವಿಧ್ಯ’ದ ಶ್ರೇಷ್ಠತೆಯನ್ನ ಸಾರಿತು.

ನವವಿಧ-ನವವರ್ಷ
ವೀರ ವನಿತೆ ರಾಣಿ ಅಬ್ಬಕ್ಕ ಚರಿತ್ರೆಯ ಚಿತ್ರಕಲಾ ಪ್ರದರ್ಶನ, ಪ್ರಧಾನಿಯವರ ‘ಏಕ್ ಪೆಡ್ ಮಾ ಕೆ ನಾಮ್’ ಅಭಿಯಾನದಡಿ ಗಿಡಗಳ ವಿತರಣೆ, ‘ಬ್ಯಾಕ್ ಟು ಊರು’ ಉದ್ಯಮಿಗಳಿಗೆ ಸನ್ಮಾನ ಹಾಗೂ ವೃದ್ಧಾಶ್ರಮದ ಹಿರಿಯ ಚೇತನಗಳೊಂದಿಗೆ ಸಂಭ್ರಮ ಹಂಚಿಕೊಳ್ಳುವ 5 ವಿಶಿಷ್ಟ ಚಟುವಟಿಕೆಗಳು ಈ ಬಾರಿಯ ಮಂಗಳೂರು ಕಂಬಳದ ವಿಶೇಷ. ಇದರೊಂದಿಗೆ ಮಕ್ಕಳಿಗಾಗಿ ‘ರಂಗ್‌ ದ ಕೂಟ’ ಚಿತ್ರಕಲೆ, ಫೋಟೋಗ್ರಫಿ, ರೀಲ್ಸ್ ಹಾಗೂ ತಾಂತ್ರಿಕತೆಯ ಮೆರುಗು ನೀಡುವ ‘AI ಕ್ರಿಯೇಟಿವ್ ಯೋಧ’ ಸೇರಿದಂತೆ ನಾಲ್ಕು ವೈವಿಧ್ಯಮಯ ಸ್ಪರ್ಧೆಗಳು ಕಂಬಳದ ಗತ್ತು-ಗಮ್ಮತ್ತನ್ನು ಮತ್ತಷ್ಟು ಹೆಚ್ಚಿಸಿತ್ತು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.