ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ, ಸಮೂಹ ಸಂಪನ್ಮೂಲ ಕೇಂದ್ರ ಬಿ.ಮೂಡ ವತಿಯಿಂದ ಬದಲಾವಣೆಯ ಶಿಕ್ಷಣ ಭವಿಷ್ಯದ ನಿರ್ಮಾಣ 2025-26 ಎಂಬ ಘೋಷಣೆಯಡಿ ಬಿ.ಮೂಡ ಕ್ಲಸ್ಟರ್ ಹಂತದ ಕಲಿಕಾ ಹಬ್ಬವನ್ನು ಶಾಲಾಭಿವೃದ್ಧಿ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಹರೀಶ್ ಮಾಂಬಾಡಿ ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ಅವರು, ಸರಕಾರಿ ಶಾಲಾ ಮಕ್ಕಳ ಶೈಕ್ಷಣಿಕ ಗುಣಮಟ್ಟವನ್ನು ವೃದ್ಧಿಸಲು ಇಂಥ ಕಾರ್ಯಕ್ರಮಗಳು ಸಹಕಾರಿಯಾಗಿದ್ದು, ಇದರ ಪ್ರಯೋಜನವನ್ನು ಪಡೆಯಬೇಕು ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಶಿಕ್ಷಣ ಸಂಯೋಜಕಿ ಪ್ರತಿಮಾ ವೈ.ವಿ. ಈ ಸಂದರ್ಭ ಮಾತನಾಡಿ, ಕಲಿಕಾ ಹಬ್ಬದಲ್ಲಿ ಭಾಗವಹಿಸುವ ಅವಕಾಶ ಪಡೆದಿರುವ ವಿದ್ಯಾರ್ಥಿಗಳು ತಮ್ಮ ಶಾಲೆಯಲ್ಲಿ ಇತರ ಮಕ್ಕಳಿಗೂ ತಾವು ಕಲಿತದ್ದನ್ನು ಹಂಚಿ ಶೈಕ್ಷಣಿವಾಗಿ ಪ್ರಗತಿ ಹೊಂದಬೇಕು ಎಂದು ಸಲಹೆ ನೀಡಿದರು. ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆ ವಿನೋದಾ ವಹಿಸಿದ್ದು, ಶುಭ ಹಾರೈಸಿದರು. ಸಮೂಹ ಸಂಪನ್ಮೂಲ ವ್ಯಕ್ತಿ (ಬಿ.ಆರ್.ಸಿ) ಪ್ರೇಮಲತಾ ಮಾತನಾಡಿ, ಕಲಿಕಾ ಹಬ್ಬದ ಆಶಯ, ಉದ್ದೇಶಗಳನ್ನು ತಿಳಿಸಿದರು. ಎಸ್.ಡಿ.ಎಂ.ಸಿ. ಸದಸ್ಯರಾದ ಜಯಂತಿ, ನಿಶ್ಮಿತಾ, ಕವಿತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಹಶಿಕ್ಷಕಿ ವಿಮಲಾ, ಅತಿಥಿ ಹಾಗೂ ಗೌರವ ಶಿಕ್ಷಕರಾದ ನಿಶ್ಮಿತಾ, ಪೂರ್ಣಿಮಾ, ಲಾವಣ್ಯ, ದಿವ್ಯಾ, ಶಿವಮೂರ್ತಿ ವಿವಿಧ ಕಾರ್ಯಕ್ರಮಗಳ ನಿರ್ವಹಣೆಯಲ್ಲಿ ಸಹಕರಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಲಕ್ಷ್ಮೀ ಕೆ. ಸ್ವಾಗತಿಸಿದರು. ಸಹಶಿಕ್ಷಕಿ ಐರಿನ್ ಆರ್.ಎಸ್. ವಂದಿಸಿದರು. ಸಹಶಿಕ್ಷಕಿ ಸುಶೀಲಾ ಕಾರ್ಯಕ್ರಮ ನಿರ್ವಹಿಸಿದರು. ಮಕ್ಕಳಿಗೆ ಹಲವು ಬಗೆಯ ಕಲಿಕಾ ಸಾಮರ್ಥ್ಯ ವೃದ್ಧಿಯ ಕಾರ್ಯಕ್ರಮಗಳು ನಡೆದವು.