ಈ ಬಾರಿ ಪಿಯುಸಿ ಫಲಿತಾಂಶದಲ್ಲಿ 600 ಕ್ಕೆ 594 ಅಂಕ ಪಡೆಯುವ ಮೂಲಕ ರಾಜ್ಯ ಮಟ್ಟದಲ್ಲಿ 7 ನೇ ಸ್ಥಾನ ಹಾಗೂ ಕಾಲೇಜಿಗೆ ಪ್ರಥಮ ಸ್ಥಾನ ಪಡೆದ ಕಲ್ಲಡ್ಕ ಶ್ರೀರಾಮ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿ,ಬಂಟ್ವಾಳ ತಾಲೂಕು ಕೊಯಿಲ ಗ್ರಾಮದ ಉಮೇಶ್ ಪೂಜಾರಿ ಹಾಗೂ ಪುಷ್ಪಾವತಿ ದಂಪತಿ ಪುತ್ರ ಪ್ರಿತೇಶ್ ಅವರನ್ನು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಂಘದ ಬೆಳ್ಳಿಪಾಡಿ ಕೃಷ್ಣ ರೈ ರೈತ ಸಭಾಂಗಣದಲ್ಲಿ ಗೌರವಿಸಿ ಅಭಿನಂದಿಸಲಾಯಿತು.
ಅಭಿನಂದಿಸಿ ಮಾತನಾಡಿದ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು, ಸಿದ್ದಕಟ್ಟೆ ಸಹಕಾರ ಸಂಘದ ವ್ಯಾಪ್ತಿಯಲ್ಲಿ ಬರುವ ವಿದ್ಯಾರ್ಥಿ ಪ್ರಿತೇಶ್ ತನ್ನ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾಬ್ಯಾಸವನ್ನು ಸರಕಾರಿ ಶಾಲೆಯಲ್ಲಿ ಅಭ್ಯಾಸ ಮಾಡಿ ಇದೀಗ ಕಲ್ಲಡ್ಕ ಶ್ರೀರಾಮಾ ಕಾಲೇಜಿನಲ್ಲಿ ಕಲಿತು ಸಾಧನೆ ಮಾಡಿ ರಾಜ್ಯಮಟ್ಟದಲ್ಲಿ 7 ನೇ ಸ್ಥಾನ ಪಡೆದಿರುವುದು ಸಂಘಕ್ಕೂ ಹೆಮ್ಮೆಯ ವಿಚಾರವಾಗಿದೆ. ಸರಕಾರಿ ಶಾಲೆಯಲ್ಲಿ ಪ್ರಾರಂಭದ ಶಿಕ್ಷಣ ಪಡೆದುಕೊಂಡು ಉನ್ನತ ಸ್ಥಾನ ಪಡೆಯಲು ಸಾಧ್ಯ ಎಂಬುದನ್ನು ಇತರ ಸರಕಾರಿ ಶಾಲೆಯಲ್ಲಿ ಕಲಿಯುವ ಮಕ್ಕಳಿಗೂ ಮಾದರಿಯಾಗಿ ತೋರಿಸಿದ್ದಾರೆ ಎಂದರು.
ಸಂಘದ ಉಪಾಧ್ಯಕ್ಷ ಸಂದೇಶ ಶೆಟ್ಟಿ ಪೊಡುಂಬ, ನಿರ್ದೇಶಕರಾದ ಸತೀಶ್ ಪೂಜಾರಿ ಅಲಕ್ಕೆ,ರಶ್ಮಿತ್ ಶೆಟ್ಟಿ ಮಾತನಾಡಿ, ಮುಂದಿನ ಶೈಕ್ಷಣಿಕ ವರ್ಷಗಳಲ್ಲಿಯೂ ಇದೇ ರೀತಿಯ ಪ್ರಗತಿಯೊಂದಿಗೆ ಸಾಧನೆಯನ್ನು ಮಾಡುವಂತಾಗಲಿ ಎಂದು ಶುಭ ಹಾರೈಸಿದರು. ನಿರ್ದೇಶಕರಾದ ದಿನೇಶ್ ಪೂಜಾರಿ ಹುಲಿಮೆರು, ಚಂದ್ರಶೇಖರ ಶೆಟ್ಟಿ ಅರಳ, ವಿಶ್ವನಾಥ್ ಶೆಟ್ಟಿಗಾರ್ ಸಂಗಬೆಟ್ಟು, ಜಾರಪ್ಪ ನಾಯ್ಕ, ವೀರಪ್ಪ ಪರವ, ಎ ಶಿವ ಗೌಡ, ಮಂದಾರತಿ ಎಸ್ ಶೆಟ್ಟಿ, ಪುಷ್ಪಲತಾ ಎಸ್ ಆರ್, ರಾಜೇಶ್ ಶೆಟ್ಟಿ ಕೊನೆರಬೆಟ್ಟು, ನವೀನ ಹೆಗ್ಡೆ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಪ್ರತಿನಿಧಿ ಕೀರ್ತಿರಾಜ್, ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ, ಪ್ರಮುಖರಾದ ಮೋಹನ್ ಕೊಯಿಲ ಉಪಸ್ಥಿತರಿದ್ದರು. ಸಂಘದ ಸಿಬ್ಬಂದಿ ಸುಭಾಸ್ ಬಂಗೇರ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.