ಗೃಹಲಕ್ಷ್ಮಿ ಯೋಜನೆ ಪ್ರಾರಂಭಗೊಂಡು ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮಂಗಳವಾರ ಬಂಟ್ವಾಳ ತಾಲೂಕು ಮಟ್ಟದಲ್ಲಿ ಸಂಭ್ರಮೋತ್ಸವ ಆಚರಣೆ ನಡೆಯಿತು.

ಬಿ.ಸಿ.ರೋಡಿನ ಸ್ತ್ರೀ ಶಕ್ತಿ ಭವನ ದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಗೃಹಲಕ್ಷ್ಮೀ ಯೋಜನೆ ಹಣದಿಂದ ವಿಶೇಷ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು. ಬಳಿಕ ಬಿ.ಸಿ.ರೋಡಿನ ಅಂಬೇಡ್ಕರ್ ಭವನ ಆವರಣದಲ್ಲಿ ನೆನಪಿಗಾಗಿ ಗಿಡ ನೆಡಲಾಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಪಂಚಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಬಂಟ್ವಾಳ ತಾಲೂಕು ಅಧ್ಯಕ್ಷೆ ಜಯಂತಿ ವಿ.ಪೂಜಾರಿ ಮಾತನಾಡಿ, ಗೃಹಲಕ್ಷ್ಮೀ ಯೋಜನೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ತಪ್ಪು ಸಂದೇಶಗಳ ಕುರಿತು ಗೊಂದಲಕ್ಕೊಳಗಾಗಬೇಡಿ, ಈ ಕಾರ್ಯಕ್ರಮ ಮುಂದುವರಿಯುತ್ತದೆ ಹಾಗೂ ಯೋಜನೆಯ ಫಲಾನುಭವಿಗಳ ಅಕೌಂಟಿಗೆ ಹಣ ಬರುತ್ತದೆ. ಫಲಾನುಭವಿಗಳು ಮತ್ತೆ ಅರ್ಜಿ ಹಾಕುವ ಅಗತ್ಯವಿಲ್ಲ. ಪಂಚಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆ ಅತಿ ಮುಖ್ಯವಾಗಿದ್ದು, ಇದರ ಅನುಷ್ಠಾನದಲ್ಲಿ ಬಂಟ್ವಾಳ ತಾಲೂಕು ಮುಂದಿದೆ. ಇದಕ್ಕೆ ತಾಲೂಕು ಶಿಶು ಅಭಿವೃದ್ಧಿ ಯೋಜನೆ ಇಲಾಖೆಯ ಅಧಿಕಾರಿ, ಸಿಬ್ಬಂದಿ ವರ್ಗ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮುಖ್ಯ ಕಾರಣಕರ್ತರಾಗಿದ್ದಾರೆ ಎಂದರು.

ಕಾರ್ಯಕ್ರಮಕ್ಕೆ ಆಗಮಿಸಿದ್ದ ಮಾಜಿ ಸಚಿವ ಬಿ.ರಮಾನಾಥ ರೈ ಗಿಡ ನೆಟ್ಟು ಶುಭ ಹಾರೈಸಿದರು.
ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಬೇಬಿ ಕುಂದರ್ ಮಾತನಾಡಿ ಗೃಹಲಕ್ಷ್ಮಿ ಯೋಜನೆ ಯಶಸ್ವಿಯ ಶ್ರೇಯಸ್ಸು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಬಂದಿ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಸಲ್ಲುತ್ತದೆ. ಬಡವರ ಕಣ್ಣೀರು ಒರೆಸುವ ಸೇವೆಯನ್ನು ಮಾಡಿದ ಕಾರ್ಯಕರ್ತೆಯರಿಗೆ ಅಭಿನಂದನೆ ಎಂದರು.
ಬಂಟ್ವಾಳ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸಚಿನ್ ಕುಮಾರ್ ಮಾತನಾಡಿ ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆ ಆರ್ಥಿಕವಾಗಿ ಸ್ವಾವಲಂಬಿಯಾಗಿದ್ದು ಕುಟುಂಬದ ಯಜಮಾನಿ ಎಂಬ ಪಟ್ಟ ದೊರಕಿದೆ ಎಂದರು.
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರಾದ ಕೃಷ್ಣಪ್ಪ ಪೂಜಾರಿ, ಸಿರಾಜ್ ಮದಕ, ಸತೀಶ್ ಕುಮಾರ್ ನಾವೂರು, ಚಂದ್ರಶೇಖರ ಆಚಾರ್ಯ ಉಪಸ್ಥಿತರಿದ್ದರು.

ಶಿಶು ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಶ್ರೀಧರ್ ಮಾತನಾಡಿ, ಬಂಟ್ವಾಳ ತಾಲೂಕಿನಲ್ಲಿ ಗೃಹಲಕ್ಷ್ಮಿ ಯೋಜನೆ ಸದುಪಯೋಗಪಡಿಸಿಕೊಂಡಿದ್ದು, ಮಹಿಳೆಯರಲ್ಲಿ ಆತ್ಮವಿಶ್ವಾಸ ಬಂದಿದೆ. ಅರ್ಹರಿಗೆ ಯೋಜನೆ ತಲುಪಬೇಕು ಎಂಬ ಹಿನ್ನೆಲೆ ಪರಿಷ್ಕರಣೆ ಮಾಡಲಾಗುತ್ತಿದೆ. ಈ ಯೋಜನೆ ನಿರಂತರವಾಗಿ ಪ್ರಗತಿಯಲ್ಲಿದ್ದು, ದುಡ್ಡು ಯಾರಿಗಾದರೂ ಬಾರರ ಸಮಸ್ಯೆಗಳು ಇದ್ದಲ್ಲಿ ಗಮನಕ್ಕೆ ತನ್ನಿ ಎಂದರು.

ಇದೇ ಸಂದರ್ಭ, ಸಾಧಕರಾದ ರವಿಕಲಾ, ಫ್ಲೇವಿ ಡಿಸೋಜ, ರೇಣುಕಾ ಅವರನ್ನು ಸನ್ಮಾನಿಸಲಾಯಿತು. ಸಿಡಿಪಿಒ ಕಚೇರಿ ಮೇಲ್ವಿಚಾರಕಾದ ನೀತಾ ಕುಮಾರಿ ಡಿ, ಶೋಭಾ ಎಂ ಮತ್ತು ಮುಬೀನಾ ಬಾನು ಪರಿಚಯಿಸಿದರು. ಯೋಜನೆ ಯಶಸ್ಸಿಗೆ ಸಹಕರಿಸಿದ ಗೌತಮ್ ಮತ್ತು ಯಶವಂತ್ ಅವರನ್ನು ಸನ್ಮಾನಿಸಲಾಯಿತು. ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮುಮ್ತಾಜ್ ಸ್ವಾಗತಿಸಿದರು. ಮೇಲ್ವಿಚಾರಕಿ ಶೋಭಾ ಎಂ. ವಂದಿಸಿದರು. ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಾಲಿನಿ ಕಾರ್ಯಕ್ರಮ ನಿರ್ವಹಿಸಿದರು.


Be the first to comment on "ಬಂಟ್ವಾಳದಲ್ಲಿ ಗೃಹಲಕ್ಷ್ಮೀ ಯೋಜನೆ ಸಂಭ್ರಮೋತ್ಸವ, ಫಲಾನುಭವಿಗಳಿಗೆ ಸನ್ಮಾನ"