ಬಂಟ್ವಾಳ

ಬಸ್ಸಿನ ಮೇಲೆ ಮರ ಎರಗಿ ಪ್ರಾಣ ಕಳೆದುಕೊಂಡ ಪುಟ್ಟ ಬಾಲಕಿ, ಇನ್ನಿಬ್ಬರು ಮಕ್ಕಳಿಗೂ ಗಾಯ – ಬರಿಮಾರು ಕಲ್ಲೆಟ್ಟಿಯಲ್ಲಿ ನಡೆದ ದುರ್ಘಟನೆ

ಬಂಟ್ವಾಳ ತಾಲೂಕಿನ  ಶಾಲೆಯಿಂದ ಮನೆಗೆ ಮರಳುತ್ತಿದ್ದ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ಸಿನ ಮೇಲೆ ಬೃಹತ್ ಅಶ್ವತ್ಥ ಮರವೊಂದು ಬುಡಸಮೇತ ಉರುಳಿದ ಘಟನೆ ಬುಧವಾರ ಸಂಜೆ ನಡೆದಿದ್ದು, ಘಟನೆಯಲ್ಲಿ  ಯು.ಕೆ.ಜಿ. ಓದುತ್ತಿರುವ ಬಾಲಕಿ ಸಾವನ್ನಪ್ಪಿದರೆ, ಇಬ್ಬರು ಮಕ್ಕಳು ಗಾಯಗೊಂಡು ಆಸ್ಪತ್ರೆಗೆ ದಾಖಲುಗೊಂಡಿದ್ದಾರೆ. ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ಎಂಬಲ್ಲಿ ಸಂಜೆ ಈ ಘಟನೆ ನಡೆದಿದೆ.  

ಕಲ್ಲಡ್ಕ ಶ್ರೀರಾಮ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಲ್.ಕೆ.ಜಿ. ಯಲ್ಲಿ ಕಲಿಯುತ್ತಿರುವ ಚಿರನ್ವಿ (5) ಮೃತ ಬಾಲಕಿ. ಈಕೆ ಬಂಟ್ವಾಳ ತಾಲೂಕಿನ ಬಿಳಿಯೂರಿನ ತೋಟ ಹೌಸ್ ನ ಚಂದ್ರಶೇಖರ ಮತ್ತು ಅನಿತಾ ದಂಪತಿಯ ಪುತ್ರಿ. ಗಂಭೀರವಾಗಿ ಗಾಯಗೊಂಡಿರುವ ಪೆರಾಜೆ ಸಾದಿಕುಕ್ಕು ನಿವಾಸಿ ಗಣೇಶ್ ಗೌಡ ಅವರ ಪುತ್ರಿ ಅನ್ವಿ ಅವರನ್ನು ಮಂಗಳೂರಿನ ಎ.ಜೆ.ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನೋರ್ವ ಗಾಯಾಳು ಪೆರ್ನೆ ನಿವಾಸಿ  ಕ್ಷಿತಿ ರೈ ಅವರನ್ನು ಕಲ್ಲಡ್ಕದ ಪುಷ್ಪರಾಜ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಜಾಹೀರಾತು
VNR GOLD

ಶಾಸಕ ರಾಜೇಶ್ ನಾಯ್ಕ್ ಅವರ ತುರ್ತು ಸ್ಪಂದನೆ

ಘಟನೆ ನಡೆದ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಬೆಂಗಳೂರಿನಲ್ಲಿ ಕರ್ನಾಟಕ ವಿಧಾನಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಸಭೆಯಲ್ಲಿ ಭಾಗವಹಿಸುತ್ತಿದ್ದರು. ಶಾಲಾ ಬಸ್ ಮೇಲೆ ಬೃಹತ್ ಮರ ಉರುಳಿ ಬಿದ್ದಿರುವ ದುರ್ಘಟನೆ ಹಾಗೂ ಮಕ್ಕಳಿಗೆ ಗಾಯಗಳಾಗಿರುವ ಮಾಹಿತಿ ದೊರೆಯುತ್ತಿದ್ದಂತೆಯೇ ಅವರು ಸಭೆಯ ನಡುವೆಯೇ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಆಸ್ಪತ್ರೆಯ ವೈದ್ಯರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಗಾಯಾಳು ಮಕ್ಕಳಿಗೆ ಯಾವುದೇ ವಿಳಂಬವಿಲ್ಲದೆ ತುರ್ತು ಚಿಕಿತ್ಸೆ ಒದಗಿಸುವಂತೆ ಸೂಚಿಸಿದರು.

ಗಂಭೀರವಾಗಿ ಗಾಯಗೊಂಡಿರುವ ಅನ್ವಿಗೆ ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಿ, ಅಗತ್ಯವಿರುವ ಎಲ್ಲಾ ವೈದ್ಯಕೀಯ ಸೌಲಭ್ಯಗಳನ್ನು ತಕ್ಷಣವೇ ಕಲ್ಪಿಸುವಂತೆ ಆಸ್ಪತ್ರೆಯ ವೈದ್ಯರೊಂದಿಗೆ ನೇರವಾಗಿ ಸಮಾಲೋಚನೆ ನಡೆಸಿದರು. ಮಗುವಿನ ಆರೋಗ್ಯ ಸ್ಥಿತಿಯ ಬಗ್ಗೆ ನಿರಂತರ ಮಾಹಿತಿ ಪಡೆದುಕೊಂಡ ಅವರು, ಚಿಕಿತ್ಸೆಯಲ್ಲಿ ಯಾವುದೇ ಲೋಪ ಅಥವಾ ವಿಳಂಬವಾಗದಂತೆ ವಿಶೇಷ ಗಮನ ಹರಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇದೇ ವೇಳೆ ಉಳಿದ ಗಾಯಾಳು ವಿದ್ಯಾರ್ಥಿನಿಯರ ಚಿಕಿತ್ಸೆಯ ಮೇಲೆಯೂ ನಿಗಾ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ ಶಾಸಕರು, ಮೃತ ಬಾಲಕಿ ಚಿರಣ್ವಿಯ ಕುಟುಂಬಕ್ಕೆ ಅಗತ್ಯ ನೆರವು ಹಾಗೂ ಸಾಂತ್ವನ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು.

ಸಭೆಯ ಕಾರ್ಯ ಮುಗಿದ ತಕ್ಷಣವೇ ವಿಮಾನದ ಮೂಲಕ ತುರ್ತುವಾಗಿ ಮಂಗಳೂರಿಗೆ ಆಗಮಿಸುತ್ತಿರುವ ಶಾಸಕ ರಾಜೇಶ್ ನಾಯ್ಕ್ ಅವರು, ಮೊದಲು ಎ.ಜೆ. ಆಸ್ಪತ್ರೆಗೆ ಭೇಟಿ ನೀಡಿ ಗಂಭೀರವಾಗಿ ಗಾಯಗೊಂಡಿರುವ ಅನ್ವಿಯ ಆರೋಗ್ಯ ವಿಚಾರಿಸಲಿದ್ದಾರೆ. ಬಳಿಕ ಪುತ್ತೂರು ಆಸ್ಪತ್ರೆಗೆ ತೆರಳಿ ಮೃತ ಬಾಲಕಿ ಚಿರಣ್ವಿಯ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸುವುದರ ಜೊತೆಗೆ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಲಿದ್ದಾರೆ. ಅಲ್ಲದೆ ಗಾಯಗೊಂಡಿರುವ ವಿದ್ಯಾರ್ಥಿನಿ ಹಾಗೂ ಅವರ ಕುಟುಂಬದವರನ್ನು ಭೇಟಿ ಮಾಡಿ ಧೈರ್ಯ ತುಂಬಲಿದ್ದಾರೆ ಎಂದು ಶಾಸಕ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.