ಮೂಡುಬಿದಿರೆಯ ಆಳ್ವಾಸ್ ವಿದ್ಯಾಗಿರಿಯ ಕ್ಯಾಂಪಸ್ ನಲ್ಲಿ ನಡೆಯಲಿರುವ ಆಳ್ವಾಸ್ ಪ್ರಗತಿ 2026 ಬೃಹತ್ ಉದ್ಯೋಗ ಮೇಳ ನಡೆಯಲಿದ್ದು, ಇದಕ್ಕೆ ಪೂರ್ವಭಾವಿಯಾಗಿ ಬಂಟ್ವಾಳ ಕ್ಷೇತ್ರದ ಯುವಜನರಿಗೆ ಹೆಚ್ಚಿನ ಉದ್ಯೋಗಾವಕಾಶ ದೊರಕಿಸುವ ನಿಟ್ಟಿನಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ವಿಶೇಷ ಮುತುವರ್ಜಿಯಲ್ಲಿ ಪೂರ್ವಭಾವಿ ಮಾಹಿತಿ ಕಾರ್ಯಾಗಾರ ಬಂಟ್ವಾಳ ಸ್ಪರ್ಶ ಕಲಾ ಮಂದಿರದಲ್ಲಿ ಶುಕ್ರವಾರ ನಡೆಯಿತು.
ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮಾತನಾಡಿ, ಶಿಕ್ಷಣದ ಜೊತೆಗೆ ಉದ್ಯೋಗವೂ ಯುವಜನರ ಬದುಕಿನಲ್ಲಿ ಅತ್ಯಂತ ಮಹತ್ವದ್ದಾಗಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ಪಡೆಯುವ ಅವಕಾಶ ದೊರಕಬೇಕೆಂಬ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಆಳ್ವಾಸ್ ಸಂಸ್ಥೆ ಕಳೆದ ಸುಮಾರು ಎರಡು ದಶಕಗಳಿಂದ ‘ಆಳ್ವಾಸ್ ಪ್ರಗತಿ’ ಉದ್ಯೋಗ ಮೇಳವನ್ನು ಯಶಸ್ವಿಯಾಗಿ ಆಯೋಜಿಸುತ್ತಿದ್ದು, ಸಾವಿರಾರು ಯುವಕರಿಗೆ ಉದ್ಯೋಗ ದೊರಕುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಈ ಬಾರಿಯ ಉದ್ಯೋಗ ಮೇಳದಲ್ಲಿ ಈಗಾಗಲೇ 350ಕ್ಕೂ ಅಧಿಕ ಪ್ರತಿಷ್ಠಿತ ಕಂಪನಿಗಳು ನೋಂದಾಯಿಸಿಕೊಂಡಿದ್ದು, ಎಸ್ಎಸ್ಎಲ್ಸಿ ಉತ್ತೀರ್ಣರಿಂದ ಹಿಡಿದು ಪದವೀಧರರವರೆಗಿನ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶಗಳು ಲಭ್ಯವಾಗಲಿವೆ ಎಂದರು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಮೂಡಬಿದಿರೆಯ ಆಳ್ವಾಸ್ ವಿದ್ಯಾಸಂಸ್ಥೆಯ ವ್ಯವಸ್ಥಾಪನಾ ಸಮಿತಿ ಟ್ರಸ್ಟಿ ವಿವೇಕ್ ಅಳ್ವ ಮಾತನಾಡಿ, ಆಳ್ವಾಸ್ ಸಂಸ್ಥೆ ಹಲವು ವರ್ಷಗಳಿಂದ ಉದ್ಯೋಗ ಮೇಳವನ್ನು ಯಶಸ್ವಿಯಾಗಿ ಆಯೋಜಿಸುತ್ತಿದ್ದು, ಇದು ಯುವಜನರ ಭವಿಷ್ಯ ರೂಪಿಸುವ ಮಹತ್ವದ ಸಾಮಾಜಿಕ ಕಾರ್ಯವಾಗಿದೆ ಎಂದು ಹೇಳಿದರು. ವಿದ್ಯಾರ್ಥಿಗಳು ಪೂರ್ವಸಿದ್ಧತೆಯೊಂದಿಗೆ ಆತ್ಮವಿಶ್ವಾಸದಿಂದ ಸಂದರ್ಶನಗಳನ್ನು ಎದುರಿಸಬೇಕು. ಸಂವಹನ ಕೌಶಲ್ಯ, ವ್ಯಕ್ತಿತ್ವ ವಿಕಸನ ಹಾಗೂ ಸಕಾರಾತ್ಮಕ ಮನೋಭಾವ ಬೆಳೆಸಿಕೊಂಡರೆ ಉತ್ತಮ ಉದ್ಯೋಗಾವಕಾಶಗಳನ್ನು ಪಡೆದುಕೊಳ್ಳಬಹುದು ಎಂದು ಸಲಹೆ ನೀಡಿದರು.
ಕಾರ್ಯಾಗಾರದಲ್ಲಿ ರೆಸ್ಯೂಮ್ ಸಿದ್ಧಪಡಿಸುವ ವಿಧಾನ, ಸಂದರ್ಶನಕ್ಕೆ ಅಗತ್ಯ ದಾಖಲೆಗಳು, ವಿವಿಧ ಕಂಪನಿಗಳ ಮಾಹಿತಿ, ನೋಂದಣಿ ಪ್ರಕ್ರಿಯೆ ಹಾಗೂ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಕುರಿತು ತಜ್ಞರಿಂದ ಸಮಗ್ರ ಮಾಹಿತಿ ನೀಡಲಾಯಿತು.
ಆಳ್ವಾಸ್ ಕಾಲೇಜಿನ ಉಪನ್ಯಾಸಕ ಡಾ. ಯೋಗೀಶ್ ಕೈರೋಡಿ ಸ್ವಾಗತಿಸಿದರು. ಬೂಡ ಮಾಜಿ ಅಧ್ಯಕ್ಷ ಬಿ. ದೇವದಾಸ್ ಶೆಟ್ಟಿ ವಂದಿಸಿದರು.
ಬಿಜೆಪಿ ಬಂಟ್ವಾಳ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಸುದರ್ಶನ್ ಬಜ, ಶಿವಪ್ರಸಾದ್ ಶೆಟ್ಟಿ ಅನೆಯಾಲಗುತ್ತು, ಹಿರಿಯ ಮುಖಂಡ ರಾಮದಾಸ್ ಬಂಟ್ವಾಳ, ಪ್ರಮುಖರಾದ ಅಜಿತ್ ಶೆಟ್ಟಿ, ವೆಂಕಟೇಶ್ ಭಟ್, ಚಂದ್ರಶೇಖರ ಬಂಗೇರ, ಸುಲೋಚನಾ ಜಿ.ಕೆ. ಭಟ್, ದಿನೇಶ್ ದಂಬೆದಾರ್, ಶ್ಯಾಮಪ್ರಸಾದ್ ಪೂಂಜಾ, ಚಂದ್ರಶೇಖರ ಶೆಟ್ಟಿ, ನಂದರಾಮ ರೈ, ಗಣೇಶ್ ರೈ ಮಾಣಿ, ಕಾರ್ತಿಕ್ ಬಳ್ಳಾಲ್, ಸಂತೋಷ್ ರೈ, ರಶ್ಮಿತ್ ಶೆಟ್ಟಿ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು. ಇದೇ ವೇಳೆ ಉದ್ಯೋಗ ಮೇಳಕ್ಕೆ ತೆರಳಲು ವಾಹನ ವ್ಯವಸ್ಥೆ ಕಲ್ಪಿಸುವ ಕುರಿತು ಶಾಸಕ ರಾಜೇಶ್ ನಾಯ್ಕ್ ಭರವಸೆ ನೀಡಿದರು.