ಪ್ರಮುಖ ಸುದ್ದಿಗಳು

ವಿಬಿ-ಜಿ ರಾಮ್ ಜಿ ಕಾಮಗಾರಿ ಕ್ರಿಯಾಯೋಜನೆ ಅನುಮೋದನೆ, ಅರ್ಜಿ ಸಲ್ಲಿಸಿದ ಫಲಾನುಭವಿಗಳು ಕಾಮಗಾರಿ ಆರಂಭಿಸಬಹುದು: ತಾಪಂ ಇಒ

ಬಂಟ್ವಾಳ: ವಿಬಿ-ಜಿ ರಾಮ್ ಜಿ ಕಾಯ್ದೆಯಡಿ ಬಂಟ್ವಾಳ ತಾಲೂಕಿನ 51 ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ವಿವಿಧ ವೈಯಕ್ತಿಕ ಹಾಗೂ ಸಾರ್ವಜನಿಕ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಕ್ರಿಯಾಯೋಜನೆ ಅನುಮೋದನೆಯಾಗಿದೆ. ಒಟ್ಟು 4,208 ಕಾಮಗಾರಿಗಳಿಗೆ ಅನುಮೋದನೆ ದೊರೆತಿದ್ದು, ಅರ್ಜಿ ಸಲ್ಲಿಸಿರುವ ಅರ್ಹ ಫಲಾನುಭವಿಗಳು ನಿಯಮಾನುಸಾರ ಕಾಮಗಾರಿ ಆರಂಭಿಸಬಹುದಾಗಿದೆ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸಚಿನ್ ಕುಮಾರ್  ತಿಳಿಸಿದ್ದಾರೆ.

VNR GOLD

ನರೇಗಾ ಬದಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆಯಡಿ ಕೂಲಿಕಾರರಿಗೆ ದಿನಗೂಲಿ ದರವನ್ನು 382 ರೂ.ಗೆ ನಿಗದಿಪಡಿಸಲಾಗಿದ್ದು, ಕುಟುಂಬಕ್ಕೆ ಒಂದು ಆರ್ಥಿಕ ವರ್ಷದಲ್ಲಿ 125 ಮಾನವ ದಿನಗಳ ಉದ್ಯೋಗಾವಕಾಶ ಕಲ್ಪಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿಸುವುದರ ಜತೆಗೆ ಗ್ರಾಮಗಳ ಮೂಲಸೌಕರ್ಯ ಹಾಗೂ ವೈಯಕ್ತಿಕ ಆಸ್ತಿಗಳ ಅಭಿವೃದ್ಧಿಗೆ ಯೋಜನೆಯಡಿ ಆದ್ಯತೆ ನೀಡಲಾಗಿದೆ. ಬಂಟ್ವಾಳ ತಾಲೂಕಿನ 51 ಗ್ರಾಮ ಪಂಚಾಯತ್‌ಗಳ ಅನುಮೋದನೆಗೊಂಡಿರುವ ಕಾಮಗಾರಿಗಳಲ್ಲಿ ಫಲಾನುಭವಿಗಳ ವೈಯಕ್ತಿಕ ಕಾಮಗಾರಿಗಳಲ್ಲಿ 630 ಬಾವಿ, 402 ದನದ ಹಟ್ಟಿ, 155 ಕೋಳಿ ಶೆಡ್‌, 2,134 ತೋಟಗಾರಿಕೆ ಬೆಳೆಗಳು, 301 ಬಚ್ಚಲು ಗುಂಡಿ, 11 ಕೃಷಿ ಹೊಂಡ, 29 ಕೊಳವೆ ಬಾವಿ ಮರುಪೂರಣ ಘಟಕ, 190 ಬಸಿಗಾಲುವೆ ಹಾಗೂ 63 ಮೇಕೆ ಶೆಡ್‌ ಕಾಮಗಾರಿಗಳು ಪ್ರಮುಖವಾಗಿವೆ. ಇದರೊಂದಿಗೆ ವಿವಿಧ ಸಾರ್ವಜನಿಕ ಕಾಮಗಾರಿಗಳೂ ಕ್ರಿಯಾಯೋಜನೆಯಲ್ಲಿ ಸೇರ್ಪಡೆಯಾಗಿವೆ.

OPTIC WORLD

ಈ ಕಾಮಗಾರಿಗಳ ಅನುಮೋದನೆಯಿಂದ ಗ್ರಾಮೀಣ ಭಾಗದ ಅರ್ಹ ಕುಟುಂಬಗಳಿಗೆ ಉದ್ಯೋಗಾವಕಾಶ ದೊರೆಯುವುದರ ಜತೆಗೆ ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ ಉತ್ತೇಜನ ಸಿಗಲಿದೆ. ವೈಯಕ್ತಿಕ ಕಾಮಗಾರಿಗಳಿಗೆ ಅರ್ಜಿ ಸಲ್ಲಿಸಿ, ಕ್ರಿಯಾಯೋಜನೆಯಲ್ಲಿ ಅನುಮೋದನೆ ಪಡೆದಿರುವ ಫಲಾನುಭವಿಗಳು ಸಂಬಂಧಪಟ್ಟ ಗ್ರಾಮ ಪಂಚಾಯತ್‌ನಿಂದ ಅಗತ್ಯ ಮಾಹಿತಿ ಹಾಗೂ ಮಾರ್ಗದರ್ಶನ ಪಡೆದು ನಿಯಮಾನುಸಾರ ಕಾಮಗಾರಿ ಆರಂಭಿಸುವಂತೆ ಸಚಿನ್ ಕುಮಾರ್ ಸೂಚಿಸಿದ್ದಾರೆ.

ಜಾಹೀರಾತು

ಗ್ರಾಮ ಪಂಚಾಯತ್ ಮಟ್ಟದಲ್ಲಿ ಕಾಮಗಾರಿಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಫಲಾನುಭವಿಗಳಿಗೆ ಅಗತ್ಯ ಸಹಕಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ಯೋಜನೆಯಡಿ ಅನುಮೋದನೆಯಾಗಿರುವ ಕಾಮಗಾರಿಗಳನ್ನು ನಿಗದಿತ ಮಾರ್ಗಸೂಚಿ ಹಾಗೂ ನಿಯಮಗಳನ್ವಯ ಕೈಗೆತ್ತಿಕೊಂಡು ಗುಣಮಟ್ಟ ಕಾಪಾಡುವಂತೆ ಅವರು ತಿಳಿಸಿದ್ದಾರೆ.

ವಿಬಿ-ಜಿ ರಾಮ್ ಜಿ ಕಾಯ್ದೆಯಡಿ ಗ್ರಾಮೀಣ ಕುಟುಂಬಗಳಿಗೆ ಉದ್ಯೋಗಾವಕಾಶ ಕಲ್ಪಿಸುವುದರ ಜತೆಗೆ ಗ್ರಾಮೀಣ ಪ್ರದೇಶದ ಅಭಿವೃದ್ಧಿ ಕಾಮಗಾರಿಗಳಿಗೆ ಉತ್ತೇಜನ ನೀಡಲಾಗುತ್ತದೆ. ಈ ಯೋಜನೆಯಡಿ ದಿನಗೂಲಿ ದರ 382 ರೂ. ಆಗಿದ್ದು, ಒಂದು ಕುಟುಂಬಕ್ಕೆ ಪ್ರತಿ ಆರ್ಥಿಕ ವರ್ಷಕ್ಕೆ 125 ಮಾನವ ದಿನಗಳ ಉದ್ಯೋಗಾವಕಾಶ ಒದಗಿಸುವ ಉದ್ದೇಶ ಹೊಂದಿದೆ. ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಸೃಷ್ಟಿ, ಕೃಷಿ ಹಾಗೂ ಪೂರಕ ಚಟುವಟಿಕೆಗಳಿಗೆ ಅಗತ್ಯವಾದ ವೈಯಕ್ತಿಕ ಆಸ್ತಿಗಳ ನಿರ್ಮಾಣ ಮತ್ತು ಸಾರ್ವಜನಿಕ ಆಸ್ತಿಗಳ ಅಭಿವೃದ್ಧಿಗೆ ಯೋಜನೆಯಡಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ. ಬಾವಿ, ದನದ ಹಟ್ಟಿ, ಕೋಳಿ ಶೆಡ್‌, ತೋಟಗಾರಿಕೆ ಬೆಳೆಗಳು, ಬಚ್ಚಲು ಗುಂಡಿ, ಕೃಷಿ ಹೊಂಡ, ಕೊಳವೆ ಬಾವಿ ಮರುಪೂರಣ ಘಟಕ, ಬಸಿಗಾಲುವೆ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಫಲಾನುಭವಿಗಳ ಅರ್ಹತೆ ಮತ್ತು ಅನುಮೋದಿತ ಕ್ರಿಯಾಯೋಜನೆಯನ್ವಯ ಅನುಷ್ಠಾನಗೊಳಿಸಲಾಗುತ್ತದೆ ಎಂದು ಪ್ರಭಾರ ಸಹಾಯಕ ನಿರ್ದೇಶಕರಾದ ವಿಶ್ವನಾಥ್‌ ಬಿ. (ಗ್ರಾ.ಉ) ತಿಳಿಸಿದ್ದಾರೆ

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.