
ಬಿ.ಸಿ.ರೋಡ್ನ ಬ್ರಹ್ಮಶ್ರೀ ನಾರಾಯಣಗುರು ವೃತ್ತದಲ್ಲಿ ಹೆಚ್ಚುತ್ತಿರುವ ಅಪಘಾತಗಳ ಹಿನ್ನೆಲೆಯಲ್ಲಿ ಸಂಚಾರ ವ್ಯವಸ್ಥೆ ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಬಿಜೆಪಿ ಯುವ ಮೋರ್ಚಾದ ಬಂಟ್ವಾಳ ವಿಧಾನಸಭಾ ಕ್ಷೇತ್ರ ಘಟಕ ಶುಕ್ರವಾರ ಬಿ.ಸಿ.ರೋಡ್ ನಲ್ಲಿರುವ ಬಂಟ್ವಾಳ ನಗರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಿಗೆ ಮನವಿ ಸಲ್ಲಿಸಿತು.

ಈ ಸಂದರ್ಭ ಯುವ ಮೋರ್ಚಾ ಅಧ್ಯಕ್ಷ ದಿನೇಶ್ ಶೆಟ್ಟಿ ದಂಬೆದಾರು, ಪ್ರಧಾನ ಕಾರ್ಯದರ್ಶಿ ಹರಿಪ್ರಸಾದ್ ಭಂಡಾರಿಬೆಟ್ಟು ನೇತೃತ್ವದಲ್ಲಿ ಮನವಿ ನೀಡಲಾಗಿದ್ದು, ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಸುರೇಶ್ ಕೋಟ್ಯಾನ್, ಪ್ರಶಾಂತ್ ಪೂಜಾರಿ, ಹೇಮಂತ್ ಶಂಭೂರು, ಗಣೇಶ್ ಪಲ್ಲಮಜಲು, ಅಶೋಕ್ ಕುಲಾಲ್ ಮರ್ದೋಳಿ,ಹಿಂಧೂ ಜಾಗರಣ ವೇಧಿಕೆ ಯ ಪ್ರಮುಖರಾದ ಪ್ರಶಾಂತ್ ಕೆಂಪುಗುಡ್ಡೆ, ಅನೂಪ್ ಮಯ್ಯ, ಶಶಿಕಾಂತ್ ಶೆಟ್ಟಿ ಆರ್ಮುಡಿ ಮತ್ತಿತರರು ಹಾಜರಿದ್ದರು. ಮನವಿಯಲ್ಲಿ ಪ್ರಸ್ತಾವಿಸಲಾದ ಅಂಶಗಳು ಇವು.

ಡಿಜಿಟಲ್ ತಂತ್ರಜ್ಞಾನ ಬಳಸಿ:
ಟ್ರಾಫಿಕ್ ಪೊಲೀಸರು ವಾಹನಗಳನ್ನು ರಸ್ತೆಯಲ್ಲೇ ನಿಲ್ಲಿಸಿ ದಾಖಲೆ ಪರಿಶೀಲನೆ ನಡೆಸುವುದು ಹಾಗೂ ದಂಡ ವಸೂಲಿ ಮಾಡುವುದು ಸಂಚಾರ ದಟ್ಟಣೆ ಮತ್ತು ಅಪಘಾತದ ಸಾಧ್ಯತೆಯನ್ನು ಹೆಚ್ಚಿಸುತ್ತಿದೆ. ಈ ಹಿನ್ನೆಲೆಯಲ್ಲಿ ಸಿಸಿ ಕ್ಯಾಮರಾ ಸೇರಿದಂತೆ ಡಿಜಿಟಲ್ ತಂತ್ರಜ್ಞಾನ ಲಭ್ಯವಿರುವ ಹಿನ್ನೆಲೆಯಲ್ಲಿ ವಾಹನಗಳನ್ನು ನಿಲ್ಲಿಸದೆ ಡಿಜಿಟಲ್ ವ್ಯವಸ್ಥೆಯ ಮೂಲಕ ದಾಖಲೆ ಪರಿಶೀಲನೆ ಹಾಗೂ ಸಂಚಾರ ನಿಯಮ ಉಲ್ಲಂಘನೆ ಪತ್ತೆಹಚ್ಚುವ ಕ್ರಮ ಜಾರಿಗೊಳಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಚತುಷ್ಪಥ ರಸ್ತೆ ಶೀಘ್ರ ಪ್ರಾರಂಭಿಸಿ:
ಬಿ.ಸಿ.ರೋಡ್ನ ಗಾಣದಪದವುವಿನಿಂದ ಬ್ರಹ್ಮಶ್ರೀ ನಾರಾಯಣಗುರು ವೃತ್ತದವರೆಗಿನ ಚತುಷ್ಪಥ ರಸ್ತೆ ಕಾಮಗಾರಿಯನ್ನು ಶೀಘ್ರ ಆರಂಭಿಸಿ ಪೂರ್ಣಗೊಳಿಸಬೇಕು. ನಾಲ್ಕು ರಸ್ತೆಗಳು ಕೂಡುವ ಈ ವೃತ್ತದಲ್ಲಿ ಸಂಚಾರ ಸಿಗ್ನಲ್ ಅಳವಡಿಸುವ ಮೂಲಕ ವಾಹನ ಸಂಚಾರವನ್ನು ಸುಗಮಗೊಳಿಸಬೇಕು ಎಂದು ಒತ್ತಾಯಿಸಲಾಗಿದೆ.
ಅನಧಿಕೃತ ವ್ಯಾಪಾರ ನಿಲ್ಲಿಸಿ:
ವೃತ್ತದ ಸುತ್ತಮುತ್ತ ರಸ್ತೆ ಬದಿಯಲ್ಲಿ ಅನಧಿಕೃತ ವ್ಯಾಪಾರಗಳಿಂದ ವಾಹನಗಳನ್ನು ರಸ್ತೆಯಲ್ಲೇ ನಿಲ್ಲಿಸಿ ಖರೀದಿ ಮಾಡುವ ಪ್ರವೃತ್ತಿ ಹೆಚ್ಚುತ್ತಿದ್ದು, ಇದರಿಂದ ಸಂಚಾರಕ್ಕೆ ಅಡಚಣೆ ಹಾಗೂ ಅಪಘಾತದ ಸಾಧ್ಯತೆ ಉಂಟಾಗುತ್ತಿದೆ. ಹೀಗಾಗಿ ಅನಧಿಕೃತ ರಸ್ತೆಬದಿ ವ್ಯಾಪಾರಿಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಮನವಿಯಲ್ಲಿ ಕೋರಲಾಗಿದೆ.


Be the first to comment on "ಬಿ.ಸಿ.ರೋಡ್ ಸರ್ಕಲ್ ಸುತ್ತಮುತ್ತ ಸಂಚಾರ ವ್ಯವಸ್ಥೆ ಸುಧಾರಣೆ, ಯುವ ಮೋರ್ಚಾ ಮನವಿಯಲ್ಲೇನಿದೆ?"