ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯಡಿ ಪರಿಶೀಲನೆಯ ನಂತರ Rs 32,000 ದಿಂದ Rs. 1,20,000 ಒಳಗಿನ ವಾರ್ಷಿಕ ಆದಾಯ ಮಿತಿ ಹೊಂದಿರುವ ಅರ್ಹ ಫಲಾನುಭವಿಗಳ ಪಿಂಚಣಿಗಳನ್ನು ಮುಂದುವರೆಸುವಂತೆ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.

ಸಂಧ್ಯಾ ಸುರಕ್ಷಾ ಹಾಗೂ ವಿಧವಾ ವೇತನ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಪಿಂಚಣಿದಾರರ ವಾರ್ಷಿಕ ಆದಾಯ ಮಿತಿಯನ್ನು ಸರ್ಕಾರ ₹32,000 ದಿಂದ ₹1.20 ಲಕ್ಷಕ್ಕೆ ಏರಿಸಿ ಆದೇಶ ಹೊರಡಿಸಿದೆ. ‘ಕುಟುಂಬ ದತ್ತಾಂಶ’ ಹಾಗೂ ‘ಸಂಯೋಜನೆ’ ಆ್ಯಪ್ ಮೂಲಕ ನಡೆಸಿದ ಪರಿಶೀಲನೆಯಲ್ಲಿ ಆದಾಯ ಪ್ರಮಾಣ ಪತ್ರ ಸೇರಿದಂತೆ ದಾಖಲೆಗಳ ಕೊರತೆಯಿಂದಾಗಿ ತಾತ್ಕಾಲಿಕವಾಗಿ ಪಿಂಚಣಿ ಸ್ಥಗಿತಗೊಂಡಿದ್ದ 17 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಇದರಿಂದ ದೊಡ್ಡ ರಿಲೀಫ್ ಸಿಕ್ಕಂತಾಗಿದೆ. ಅರ್ಹ ಫಲಾನುಭವಿಗಳ ಪಿಂಚಣಿಯನ್ನು ಮುಂದಿನ ಆದೇಶದವರೆಗೆ ಮುಂದುವರಿಸಲು ಸೂಚಿಸಲಾಗಿದೆ.

ಸಮಸ್ಯೆ ಏನಿತ್ತು? ಬಗೆಹರಿದದ್ದೇನು?
ಈ ಬಗ್ಗೆ ಮಾಹಿತಿ ನೀಡಿದ ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ ಅವರು, ವಿವಿಧ ಸಾಮಾಜಿಕ ಪಿಂಚಣಿಗಳಾದ ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲ ವೇತನ ಇತ್ಯಾದಿಗಳಿಗೆ 32 ಸಾವಿರ ರೂ. ಆದಾಯ ಮಿತಿ ಇತ್ತು. ಬಹಳ ದಿನಗಳಿಂದ ಇದುವೇ ಆದಾಯ ಮಿತಿಯಿದ್ದ ಕಾರಣ ಲಕ್ಷಾಂತರ ಜನರು ಪಿಂಚಣಿ ಸೌಲಭ್ಯದಿಂದ ಹೊರಗೆ ಉಳಿದಿದ್ದರು. ಅದನ್ನು ₹1,20,000 ಗಳಿಗೆ ಏರಿಕೆ ಮಾಡುವ ಮೂಲಕ ಬಹುಕಾಲದ ಸಮಸ್ಯೆಯನ್ನು ಬಗೆಹರಿಸಿದ್ದೇವೆ ಎಂದು ತಿಳಿಸಿದರು.

ಕುಟುಂಬ ದತ್ತಾಂಶದಿಂದ ಪಡೆದ ಮಾಹಿತಿಗಳನ್ನು ರಾಜ್ಯದಲ್ಲಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳ ಮಾಹಿತಿಯೊಂದಿಗೆ ಸಂಯೋಜಿಸಿದಾಗ 23,14,544 ಫಲಾನುಭವಿಗಳು ಸಂದೇಹಾಸ್ಪದ ಎಂದು ಕಂಡುಬಂದಿದ್ದು, ಈ ಫಲಾನುಭವಿಗಳ ಭೌತಿಕ ಪರಿಶೀಲನೆಗಾಗಿ ಸಂಯೋಜನೆ ಮೊಬೈಲ್ ಆ್ಯಪ್ ಸಿದ್ಧಪಡಿಸಿ ಪರಿಶೀಲನೆ ನಡೆಸಲಾಗಿತ್ತು. ಈ ಸಮಯದಲ್ಲಿ ದಾಖಲಾತಿಗಳನ್ನು ಹಾಜರುಪಡಿಸದ, ನೀಡಿದ ವಿಳಾಸದಲ್ಲಿ ವಾಸವಿಲ್ಲದಿದ್ದ ಮತ್ತು ಆದಾಯ ದೃಢೀಕರಣ ಪತ್ರ ಹಾಜರುಪಡಿಸದಿದ್ದ 18,06,032 ಮಂದಿಯ ಪಿಂಚಣಿಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.

ಗ್ರಾಮ ಆಡಳಿತ ಅಧಿಕಾರಿಗಳು ಸಂಯೋಜನೆ ಮೊಬೈಲ್ ಆ್ಯಪ್ ಮೂಲಕ ಪರಿಶೀಲಿಸಿದ ನಂತರ ಸಂಬಂಧಪಟ್ಟ ತಾಲೂಕು ತಹಶೀಲ್ದಾರರಿಂದ ನಿಯಮಾನುಸಾರ ಪರಿಶೀಲನೆ ಮಾಡಿ ಅರ್ಹ ಫಲಾನುಭವಿಗಳಿಗೆ ಪಿಂಚಣಿ ನೀಡಲು ನಿರ್ದೇಶನ ನೀಡಲಾಗಿದೆ. ಆದರೆ, 23,14,544 ಸಂದೇಹಾಸ್ಪದ ಫಲಾನುಭವಿಗಳ ಭೌತಿಕ ಪರಿಶೀಲನೆ ಸಮಯದಲ್ಲಿ ಆದಾಯವು ₹32,000 ಕ್ಕಿಂತ ಹೆಚ್ಚಿರುವುದು ಕಂಡುಬಂದಿರುತ್ತದೆ.
23,14,544 ಮಂದಿಯ ಪೈಕಿ ₹32,000ಕ್ಕಿಂತ ಹೆಚ್ಚು ಹಾಗೂ ₹1,20,000ಕ್ಕಿಂತ ಕಡಿಮೆ ವಾರ್ಷಿಕ ಆದಾಯ ಇರುವಂತಹ ಫಲಾನುಭವಿಗಳ ಪಿಂಚಣಿಯನ್ನು ಮುಂದುವರೆಸುವಂತೆ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ ಅವರು ಸೂಚಿಸಿದ್ದರು.
ಅದರಂತೆ 23,14,544 ಮಂದಿಯ ಪೈಕಿ ಪರಿಶೀಲನೆಯ ನಂತರ ₹32,000ಕ್ಕಿಂತ ಹೆಚ್ಚು ಹಾಗೂ ₹1,20,000 ಒಳಗಿನ ವಾರ್ಷಿಕ ಆದಾಯ ಮಿತಿಯನ್ನು ಹೊಂದಿರುವ ಅರ್ಹ ಫಲಾನುಭವಿಗಳ ಪಿಂಚಣಿಗಳನ್ನು ಮುಂದುವರಿಸಲು ಕಂದಾಯ ಇಲಾಖೆಯು ಆದೇಶಿಸಿದೆ.
ಇತ್ತೀಚೆಗೆ ವಿಶೇಷಚೇತರರಿಗೋಸ್ಕರ ದುಡಿಯುವ ಸಕ್ಷಮ ದಕ್ಷಿಣ ಕನ್ನಡ ಜಿಲ್ಲಾ ಘಟಕ ಈ ಕುರಿತು ಮಂಗಳೂರಿನಲ್ಲಿ ಪತ್ರಕಾಗೋಷ್ಠಿಯನ್ನು ಏರ್ಪಡಿಸಿತ್ತು. ಅದರಲ್ಲಿ ವಿಕಲಚೇತನರ ಪಿಂಚಣಿ ಸ್ಥಗಿತಗೊಳಿಸಿದ ಹಿನ್ನೆಲೆ ಆಗುವ ತೊಂದರೆಯನ್ನು ಬೆಳಕು ಚೆಲ್ಲಿತ್ತು. ಪಿಂಚಣಿಗೆ ಆರ್ಥಿಕ ಮಾನದಂಡ ವಿಧಿಸಬಾರದು ಎಂದು ಸಕ್ಷಮ ಒತ್ತಾಯಿಸಿದ್ದು, ಅದಿನ್ನೂ ಪರಿಶೀಲನೆಯ ಹಂತದಲ್ಲಿದೆ. ಸರಕಾರ ಆರ್ಥಿಕ ಮಾನದಂಡವನ್ನು ಕನಿಷ್ಠ ಪಕ್ಷ ವಿಕಲಚೇತನರನ್ನು ಪರಿಗಣಿಸುವ ವೇಳೆ ವಿಧಿಸಬಾರದು ಎಂದು ಸಕ್ಷಮ ಒತ್ತಾಯಿಸಿದೆ.


Be the first to comment on "ಸ್ಥಗಿತಗೊಳಿಸಿದ್ದ ಪಿಂಚಣಿ ಮುಂದುವರಿಸಲು ಆದೇಶ – ನಿಯಮಗಳೇನು?"