ಸರ್ಕಾರಿ ಪಾಲಿಟೆಕ್ನಿಕ್ ಬಂಟ್ವಾಳದ ರಾಷ್ಟ್ರೀಯ ಸೇವಾ ಯೋಜನೆ (ಎನ್ನೆಸ್ಸೆಸ್ ) ಹಾಗೂ ಯೂತ್ ರೆಡ್ಕ್ರಾಸ್ ಘಟಕ ವತಿಯಿಂದ ಮಂಗಳೂರು ಕೆ.ಎಂ.ಸಿ ಆಸ್ಪತ್ರೆ ಹಾಗೂ ಲಯನ್ಸ್ ಕ್ಲಬ್ ಬಂಟ್ವಾಳ ಸಹಯೋಗದಲ್ಲಿ ಸಂಸ್ಥೆಯ ಆವರಣದಲ್ಲಿ ರಕ್ತದಾನ ಮತ್ತು ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
ಲಯನ್ಸ್ ಕ್ಲಬ್ ಬಂಟ್ವಾಳ ಅಧ್ಯಕ್ಷರಾದ ಚಿತ್ರಾ. ಜೆ. ಯಡಪಡಿತ್ತಾಯ ಉದ್ಘಾಟಿಸಿ ಮಾತನಾಡಿ ರಕ್ತದಾನ ಅಮೂಲ್ಯವಾದ ಮಾನವೀಯ ಸೇವೆಯಾಗಿದ್ದು, ಒಬ್ಬ ವ್ಯಕ್ತಿ ನೀಡುವ ರಕ್ತವು ಅಗತ್ಯವಿರುವ ಹಲವಾರು ಜೀವಗಳನ್ನು ಉಳಿಸಲು ಸಹಕಾರಿಯಾಗುತ್ತದೆ. ಯುವಜನರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಸಮಾಜಕ್ಕೆ ಅಮೂಲ್ಯ ಕೊಡುಗೆ ನೀಡಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಪ್ರಿನ್ಸಿಪಾಲ್ ನರಸಿಂಹ ಭಟ್ ಎಚ್, ರಕ್ತದಾನ ಅತ್ಯಂತ ಮಹತ್ವದ ಸೇವೆಯಾಗಿದ್ದು, ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಸಾಮಾಜಿಕ ಜವಾಬ್ದಾರಿ ಬೆಳೆಸಿಕೊಳ್ಳಬೇಕು ಹಾಗೂ ಇಂಥ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಹೇಳಿದರು.
ಲಯನ್ಸ್ ಕ್ಲಬ್ ಬಂಟ್ವಾಳ ಸೇವಾ ಸಂಯೋಜಕ ಉಮೇಶ್ ಆಚಾರ್ಯ , ಖಜಾಂಚಿ ಸುಮಾ ಸುನಿಲ್ , ಕೆಎಂಸಿ ಆಸ್ಪತ್ರೆಯ ರಕ್ತನಿಧಿ ವೈದ್ಯಾಧಿಕಾರಿಗಳಾದ ಡಾ. ವಿಧುಶ್ರೀ , ಡಾ . ತರುಣ್ , ಸಂಸ್ಥೆಯ ವಿದಾರ್ಥಿ ಕ್ಷೇಮಾಧಿಕಾರಿಗಳಾದ ಭಗವಾನ್ ಪ್ರಸಾದ್ , ಕಚೇರಿ ಅಧೀಕ್ಷಕ ಸುಧಾಕರ್ ಸಿ.ಎಸ್, ಸಿವಿಲ್ ವಿಭಾಗ ಮುಖ್ಯಸ್ಥರಾದ ಮೋಹನ್ ರಾಜ್ ಜಿ.ಎಸ್, ಎನ್ನೆಸ್ಸೆಸ್ ಮತ್ತು ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿಯಾದ ಭಾಸ್ಕರ್ ಎಲ್ ಉಪಸ್ಥಿತರಿದ್ದರು.
ಸಂಸ್ಥೆಯ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಭಾಗವಹಿಸಿ ರಕ್ತದಾನ ಮಾಡಿದರು. ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಯಿಂದ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ವಿವಿಧ ಆರೋಗ್ಯ ತಪಾಸಣೆ ಮತ್ತು ವೈದ್ಯಕೀಯ ಸಲಹೆಗಳನ್ನು ನೀಡಲಾಯಿತು.
ಕೆಎಂಸಿ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ, ಲಯನ್ಸ್ ಕ್ಲಬ್ ಬಂಟ್ವಾಳ, ಸಂಸ್ಥೆಯ ಎನ್ನೆಸ್ಸೆಸ್ ಸ್ವಯಂಸೇವಕರು, ಭಾರತೀಯ ಯುವ ರೆಡ್ಕ್ರಾಸ್ ಘಟಕ, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಸಹಕರಿಸಿದರು. ಉಪನ್ಯಾಸಕ ರಿತೇಶ್ ವಿ.ಎ ನಿರೂಪಿಸಿದರು. ಭಾಸ್ಕರ ಎಲ್ ಸ್ವಾಗತಿಸಿ, ಅಶ್ವಿನಿ ರೈ ವಂದಿಸಿದರು.